ಸಾರಾಂಶ
ರಾಮನಗರ : ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಬೆಂಗಳೂರಲ್ಲಿ ಮತದಾನದ ಹಕ್ಕನ್ನು ಹೊಂದಿರುವ ಕಾರಣ, ತಮ್ಮ ಮತವನ್ನು ತಮಗೇ ಹಾಕಿಕೊಳ್ಳಲಾಗುತ್ತಿಲ್ಲ. ಉಳಿದ ರಾಜಕೀಯ ಪಕ್ಷಗಳ ಪ್ರಮುಖ ನಾಯಕರು ಮತದಾನದ ಹಕ್ಕನ್ನು ಹೊಂದಿದ್ದಾರೆ.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿರವರು ಪತ್ನಿ ಅನಿತಾ, ಪುತ್ರ ನಿಖಿಲ್ ಕುಮಾರಸ್ವಾಮಿ ಮಾಗಡಿ ವಿಧಾನಸಭಾ ಕ್ಷೇತ್ರದ ಕೇತಗಾನಹಳ್ಳಿಯ ಮತಗಟ್ಟೆಯಲ್ಲಿ ಮತ ಚಲಾಯಿಸುವರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರವರು ಪತ್ನಿ ಉಷಾ, ಪುತ್ರಿ ಐಶ್ವರ್ಯ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ಕನಕಪುರ ತಾಲೂಕಿನ ದೊಡ್ಡಾಲಹಳ್ಳಿಯ ಮತಗಟ್ಟೆ, ವಿಧಾನ ಪರಿಷತ್ ಸದಸ್ಯ ಎಸ್.ರವಿ ಮಾಳಗಾಳು ಮತಗಟ್ಟೆಯಲ್ಲಿ ಮತದಾನ ಮಾಡುವರು.
ಮಾಗಡಿ ವಿಧಾನಸಭಾ ಕ್ಷೇತ್ರದ ಹುಟ್ಟೂರು ಹುಲಿಕಟ್ಟೆ ಗ್ರಾಮದಲ್ಲಿ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ, ಪತ್ನಿ ರಾಧಾ, ತಾಯಿ ಶಾರದಮ್ಮ, ಪುತ್ರಿ ರಚನಾ, ಬೈರಮಂಗಲ ಮತಗಟ್ಟೆ ಸಂಖ್ಯೆ 292 ರಲ್ಲಿ ಮಾಜಿ ಶಾಸಕ ಎ.ಮಂಜುನಾಥ್, ಪತ್ನಿ ಲಕ್ಷ್ಮಿ, ಪುತ್ರಿಯರು ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಂ.ಲಿಂಗಪ್ಪ ಇಟ್ಟಮಡು ಮತಗಟ್ಟೆಯಲ್ಲಿ ಹಕ್ಕು ಚಲಾಯಿಸುವರು.
ರಾಮನಗರ ವಿಧಾನಸಭಾ ಕ್ಷೇತ್ರದ ಮರಳವಾಡಿಯಲ್ಲಿನ ಮತಗಟ್ಟೆಯಲ್ಲಿ ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ, ಚನ್ನಪಟ್ಟಣ ಕ್ಷೇತ್ರ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ತಮ್ಮ ಸ್ವಗ್ರಾಮ ಚಕ್ಕರೆ, ರಾಮನಗರ ಕ್ಷೇತ್ರ ಶಾಸಕ ಇಕ್ಬಾಲ್ ಹುಸೇನ್ ರವರು ಕನಕಪುರ ಕ್ಷೇತ್ರ ವ್ಯಾಪ್ತಿಯ ಹೂಕುಂದ ಮತಗಟ್ಟೆ, ಕೆಪಿಸಿಸಿ ಉಪಾಧ್ಯಕ್ಷ ಸೈಯದ್ ಜಿಯಾವುಲ್ಲಾ ನಗರದ ಮತಗಟ್ಟೆಯಲ್ಲಿ ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ.