ರಾಜ್ಯದಲ್ಲಿ ಉಪಚುನಾವಣೆ ಘೋಷಣೆಯಾಗಿರುವ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಿಗೆ ಬಿಜೆಪಿಯು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.
ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಸಂಬಂಧ ಬಿಜೆಪಿ-ಜೆಡಿಎಸ್ ನಡುವೆ ಸಹಮತ ವ್ಯಕ್ತವಾಗದ ಕಾರಣ ಭಾನುವಾರ ಮತ್ತೊಂದು ಸುತ್ತಿನ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ. ಈ ನಡುವೆ, ಜೆಡಿಎಸ್ಗೆ ಟಿಕೆಟ್ ಲಭ್ಯವಾಗುವುದು ಬಹುತೇಕ ಖಚಿತವಾಗಿದೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ನವರು ಯಾವ ಅಭ್ಯರ್ಥಿಯನ್ನಾದರೂ ಹಾಕಲಿ, ನಮ್ಮದು ಕೇವಲ ದೇವೇಗೌಡರ ಕುಟುಂಬ ಅಲ್ಲ, ನಮ್ಮದು ಈಗ ಎನ್ಡಿಎ ಕುಟುಂಬ. ಎನ್ಡಿಎ ಕುಟುಂಬದಿಂದ ಒಬ್ಬ ಅಭ್ಯರ್ಥಿ ಇರುತ್ತಾನೆ. ಅಭ್ಯರ್ಥಿ ಆಯ್ಕೆಯಲ್ಲಿ ಯಾವ ಜಂಜಾಟವೂ ಇಲ್ಲ.
ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆಯಲ್ಲಿ ನಾನೇ ಅಭ್ಯರ್ಥಿ ಅಂತ ಯಾರು ಬೇಕಾದರು ಹೇಳಿಕೊಳ್ಳಬಹುದು. ರಾಜಕೀಯ ವಾಸ್ತವಾಂಶಗಳ ಬಗ್ಗೆ ಲೆಕ್ಕಾಚಾರ ಮಾಡಿಯೇ ಉಭಯ ಪಕ್ಷಗಳ ಹಿರಿಯ ನಾಯಕರೊಂದಿಗೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.