ಲಂಚ ಸ್ವೀಕಾರ : ಮೂವರು ಲೋಕಾಯುಕ್ತ ಬಲೆಗೆ

KannadaprabhaNewsNetwork |  
Published : Jul 23, 2025, 02:06 AM ISTUpdated : Jul 23, 2025, 09:41 AM IST
Lokayukta raid Mysuru CESC AEE engeneers trapped while accepting bribe

ಸಾರಾಂಶ

ಅನ್ಯಕ್ರಾಂತವಾದ ಭೂಮಿಯ ವಿನ್ಯಾಸ ನಕ್ಷೆ ಅನುಮೋದನೆಗೆ ಲಂಚಕ್ಕೆ ಬೇಡಿಕೆ ಇಟ್ಟು ಅದನ್ನು ಸ್ವೀಕರಿಸುವಾಗ ಮಂಡ್ಯ ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದ ಸಹಾಯಕ ನಿರ್ದೇಶಕಿ ಸೇರಿದಂತೆ ಮೂವರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿರುವ ಘಟನೆ ನಗರದಲ್ಲಿ ಮಂಗಳವಾರ ಜರುಗಿದೆ.

 ಮಂಡ್ಯ :  ಅನ್ಯಕ್ರಾಂತವಾದ ಭೂಮಿಯ ವಿನ್ಯಾಸ ನಕ್ಷೆ ಅನುಮೋದನೆಗೆ ಲಂಚಕ್ಕೆ ಬೇಡಿಕೆ ಇಟ್ಟು ಅದನ್ನು ಸ್ವೀಕರಿಸುವಾಗ ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದ ಸಹಾಯಕ ನಿರ್ದೇಶಕಿ ಸೇರಿದಂತೆ ಮೂವರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿರುವ ಘಟನೆ ನಗರದಲ್ಲಿ ಮಂಗಳವಾರ ಜರುಗಿದೆ.

ನಗರದ ಚಾಮುಂಡೇಶ್ವರಿ ಬಡಾವಣೆಯಲ್ಲಿರುವ ನಗರ ಯೋಜನಾ ಪ್ರಾಧಿಕಾರದ ಕಚೇರಿಯಲ್ಲಿ ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುವ ವೇಳೆ ಸಹಾಯಕ ನಿರ್ದೇಶಕಿ ಅನನ್ಯ ಮನೋಹರ್, ಕೇಸ್ ವರ್ಕರ್ ಸೌಮ್ಯ ಹಾಗೂ ಹೊರಗುತ್ತಿಗೆ ನೌಕರ ಹರೀಶ್ ಲೋಕಾಯುಕ್ತರಿಗೆ ಸಿಕ್ಕಿಬಿದ್ದವರಾಗಿದ್ದಾರೆ.

ಏನಾಯ್ತು?:

ಮದ್ದೂರು ತಾಲೂಕು ಚಂದೂಪುರ ಗ್ರಾಮದ ಪುನೀತ್ ಅವರು ತಮ್ಮ ತಾಯಿ ಲಕ್ಷ್ಮೀ ಅವರ ಹೆಸರಿನಲ್ಲಿದ್ದ ಭೂಮಿ ಅನ್ಯಕ್ರಾಂತವಾಗಿದ್ದು, ಅದರ ವಿನ್ಯಾಸ ನಕ್ಷೆ ಅನುಮೋದನೆಗೆ ಎಂಟು ತಿಂಗಳ ನಗರ ಮತ್ತು ಗ್ರಾಮಾಂತರ ಯೋಜನಾ ಸಹಾಯಕ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಸಲ್ಲಿಸಿದ ಸಮಯದಿಂದ ಎಲ್ಲಾ ದಾಖಲೆಗಳನ್ನು ಸಲ್ಲಿಸಿದ್ದರೂ ಅನುಮೋದನೆ ನೀಡದೆ ಸತಾಯಿಸುತ್ತಿದ್ದರು ಎನ್ನಲಾಗಿದೆ.

ಕೊನೆಗೆ ವಿನ್ಯಾಸ ನಕ್ಷೆ ಅನುಮೋದನೆ ನೀಡಲು ಪುನೀತ್ ಬಳಿ ೫೦ ಸಾವಿರ ರು. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಲಂಚದ ಹಣ ದುಬಾರಿ ಆಯಿತು ಎಂದೇಳಿ ೩೦ ಸಾವಿರ ರು.ಗೆ ಪುನೀತ್ ಎಲ್ಲರನ್ನೂ ಒಪ್ಪಿಸಿದ್ದರು. ಆ ನಂತರದಲ್ಲಿ ಸಹಾಯಕ ನಿರ್ದೇಶಕರೂ ಸೇರಿದಂತೆ ಸಿಬ್ಬಂದಿ ವಿರುದ್ಧ ಲೋಕಾಯುಕ್ತ ಪೊಲೀಸರಿಗೆ ಪುನೀತ್ ದೂರು ನೀಡಿದ್ದರು.

ಮಂಗಳವಾರ ಪುನೀತ್ ಅವರು ಲಂಚದ ಹಣದಲ್ಲಿ ೧೫ ಸಾವಿರ ರು.ಗಳನ್ನು ಮುಂಗಡವಾಗಿ ಕೊಡುವುದಕ್ಕೆ ಚಾಮುಂಡೇಶ್ವರಿ ನಗರದಲ್ಲಿರುವ ಕಚೇರಿಗೆ ತೆರಳಿದ್ದರು. ಆ ಸಮಯದಲ್ಲಿ ಸಹಾಯಕ ನಿರ್ದೇಶಕಿ ಅನನ್ಯ ಮನೋಹರ್, ಕೇಸ್ ವರ್ಕರ್ ಸೌಮ್ಯ ಹಾಗೂ ಹೊರಗುತ್ತಿಗೆ ನೌಕರ ಹರೀಶ್ ಹಣವನ್ನು ಸ್ವೀಕರಿಸುವುದಕ್ಕೆ ಹಿಂದು-ಮುಂದು ನೋಡಿದರು. ನಂತರ ೧೫ ಸಾವಿರ ರು.ಗಳನ್ನು ಕಚೇರಿಯಲ್ಲಿದ್ದ ದೇವರ ಮುಂದಿಟ್ಟು ಹೋಗುವಂತೆ ಪುನೀತ್‌ಗೆ ಸೂಚಿಸಿದರು.

ಈ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಮೂವರನ್ನೂ ತಮ್ಮ ವಶಕ್ಕೆ ಪಡೆದುಕೊಂಡರು. ದಿಢೀರ್ ದಾಳಿಯಿಂದ ಸಹಾಯಕ ನಿರ್ದೇಶಕಿ ಅನನ್ಯ ಮನೋಹರ್ ಸೇರಿದಂತೆ ಕಚೇರಿ ನೌಕರರು, ಸಿಬ್ಬಂದಿ ದಂಗಾದರು. ಲೋಕಾಯುಕ್ತ ಪೊಲೀಸರು ತನಿಖೆಯನ್ನು ಮುಂದುವರೆಸಿದರು. ದಾಳಿಯಿಂದ ಕಂಗೆಟ್ಟ ಅನನ್ಯ ಮನೋಹರ್ ಹಾಗೂ ಸೌಮ್ಯ ಕಣ್ಣೀರಿಟ್ಟರು.

ಮಂಡ್ಯ ಲೋಕಾಯುಕ್ತ ಆರಕ್ಷಕ ಅಧೀಕ್ಷಕ ಸುರೇಶ್ ಬಾಬು, ಇನ್ಸ್‌ಪೆಕ್ಟರ್ ಬ್ಯಾಟರಾಯನಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.
Read more Articles on

Recommended Stories

ಮಗುಗಾಗಿ ತನ್ನ ಪತ್ನಿಯನ್ನೇ ಸಿನಿಮೀಯ ಶೈಲಿಯಲ್ಲಿ ಅಪಹರಿಸಿದ ನಿರ್ಮಾಪಕ
ಷೇರುಪೇಟೆಯಲ್ಲಿ ಹೂಡಿಕೆ ನೆಪದಲ್ಲಿ ಉದ್ಯಮಿಗೆ ₹8.3 ಕೋಟಿ ಧೋಖಾ