ಮಂಡ್ಯ : ಬೆಂಗಳೂರು-ಮೈಸೂರು ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಶ್ರೀನಿವಾಸಪುರ ಗೇಟ್ನ ಕಾವೇರಿ ಸತ್ವ ಅಪಾರ್ಟ್ಮೆಂಟ್ ಬಳಿ ಶನಿವಾರ ಬೆಳಗಿನ ಜಾವ 2 ಗಂಟೆ ಸಮಯದಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಹಿಂಬದಿ ಲಾರಿ ಚಾಲಕ ಸೈಯದ್ ಮಂಡಲ್ (25), ಕ್ಲೀನರ್ ಸಿರಾಜುದ್ದೀನ್ (24) ಅಪಘಾತದಲ್ಲಿ ಮೃತಪಟ್ಟವರು. ಡಿಕ್ಕಿಯ ರಭಸಕ್ಕೆ ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಮಂಡ್ಯ ಸೆಂಟ್ರಲ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವುದು.
ಅನಾರೋಗ್ಯದಿಂದ ಬೇಸತ್ತು ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಮದ್ದೂರು:
ಅನಾರೋಗ್ಯದಿಂದ ಬೇಸತ್ತು ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕದಲೂರು ಗ್ರಾಮದಲ್ಲಿ ಶುಕ್ರವಾರ ಸಂಜೆ ಜರುಗಿದೆ. ಗ್ರಾಮದ ಲೇಟ್ ಶಿವಣ್ಣನ ಪುತ್ರ ಕೆ.ಎಸ್. ಕುಮಾರ (48) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಗ್ರಾಮದಲ್ಲಿ ಬಾಡಿಗೆ ಮನೆಯೊಂದರಲ್ಲಿ ಕುಮಾರನ ಶವ ನೇಣು ಬಿಗಿದ ರೀತಿಯಲ್ಲಿ ಶುಕ್ರವಾರ ಸಂಜೆ 6 ಗಂಟೆ ವೇಳೆ ಪತ್ತೆಯಾಗಿದೆ. ಕಳೆದ ಕೆಲವು ವರ್ಷಗಳಿಂದ ಕುಡಿತದ ಚಟಕ್ಕೆ ದಾಸನಾಗಿದ್ದ ಕುಮಾರ ಖಿನ್ನತೆಗೆ ಒಳಗಾಗಿ ಅನಾರೋಗ್ಯದಿಂದ ಬಳಲುತ್ತಿದ್ದನು. ಇದರಿಂದ ಬೇಸತ್ತ ಆತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕೆಸ್ತೂರು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.