ಬರ್ನರ್‌ ಕಂಟೈನರ್‌ನಲ್ಲಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

KannadaprabhaNewsNetwork | Published : Feb 16, 2024 1:46 AM

ಅಕ್ರಮವಾಗಿ ಬರ್ನರ್‌ ಕಂಟೈನರ್‌ನಲ್ಲಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕ ಬೆಂಗಳೂರಿನ ಏರ್‌ಪೋರ್ಟ್‌ನಲ್ಲಿ ಸಿಕ್ಕಿಬಿದ್ದಿದ್ದಾನೆ. ಆತನನ್ನು ಕಸ್ಟಮ್ಸ್‌ ಅಧಿಕಾರಿಗಳು 17 ಲಕ್ಷ ಮೌಲ್ಯದ ಚಿನ್ನ ಜಪ್ತಿ ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಬರ್ನರ್‌ ಕಂಟೈನರ್‌ನಲ್ಲಿ ಚಿನ್ನದ ತಂಡುಗಳನ್ನು ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದ ಪ್ರಯಾಣಿಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ(ಕೆಐಎ) ಕಸ್ಟಮ್ಸ್‌ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತ ಪ್ರಯಾಣಿಕನಿಂದ ಸುಮಾರು ₹17.23 ಲಕ್ಷ ಮೌಲ್ಯದ 279 ಗ್ರಾಂ ತೂಕದ ಚಿನ್ನ ಜಪ್ತಿ ಮಾಡಲಾಗಿದೆ. ಗುರುವಾರ ಕುವೈತ್‌ನಿಂದ ಕೆಐಎ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರನ್ನು ಕಸ್ಟಮ್ಸ್‌ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಪ್ರಯಾಣಿಕನೊಬ್ಬ ಅನುಮಾನಾಸ್ಪದವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆದು ಲಗೇಜ್‌ ತಪಾಸಣೆ ಮಾಡಿದಾಗ, ಬರ್ನರ್‌ ಕಂಟೈನರ್‌ನೊಳಗೆ ಚಿನ್ನದ ತಂಡುಗಳನ್ನು ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿರುವುದು ಕಂಡು ಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿರುವ ಕಸ್ಟಮ್ಸ್‌ ಅಧಿಕಾರಿಗಳು, ತನಿಖೆ ಮುಂದುವರೆಸಿದ್ದಾರೆ.ಬಿಎಂಟಿಸಿ ಬಸ್‌ ನಿಲ್ದಾಣಗಳಲ್ಲಿ ಅಡ್ಡಾದಿಡ್ಡಿ ಪಾರ್ಕಿಂಗ್‌: ದಂಡ

ಕನ್ನಡಪ್ರಭ ವಾರ್ತೆ ಬೆಂಗಳೂರು

ನಗರದ ಬಿಎಂಟಿಸಿ ಬಸ್‌ ನಿಲ್ದಾಣಗಳ ಬಳಿ ವಿಶೇಷ ಕಾರ್ಯಾಚರಣೆ ನಡೆಸಿದ ನಗರ ಸಂಚಾರ ಪೊಲೀಸರು, ಎಲ್ಲೆಂದರಲ್ಲಿ ವಾಹನ ನಿಲುಗಡೆ ಮಾಡಿ ನಿಯಮ ಉಲ್ಲಂಘಿಸಿದ 456 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿ ₹2.54 ಲಕ್ಷ ದಂಡ ವಸೂಲಿ ಮಾಡಿದ್ದಾರೆ.

ನಗರದ ಮೆಜೆಸ್ಟಿಕ್‌, ಶಾಂತಿನಗರ, ಮೈಸೂರು ರಸ್ತೆ, ಯಶವಂತಪುರ, ಕೋರಮಂಗಲ ಸೇರಿದಂತೆ ನಗರದ ವಿವಿಧೆಡೆ ಇರುವ ಬಿಎಂಟಿಸಿ ಬಸ್‌ ನಿಲ್ದಾಣಗಳ ಬಳಿ ಗುರುವಾರ ಎಲ್ಲೆಂದರಲ್ಲಿ ವಾಹನ ನಿಲುಗಡೆ ಮಾಡಿದ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. 89 ಕಾರು, 54 ಆಟೋ ರಿಕ್ಷಾ, 88 ದ್ವಿಚಕ್ರ ವಾಹನಗಳು, 65 ಮ್ಯಾಕ್ಸಿ ಕ್ಯಾಬ್‌, 160 ಇತರೆ ವಾಹನಗಳು ಸೇರಿದಂತೆ ಒಟ್ಟು 456 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಸೂಲಿ ಮಾಡಿದ್ದಾರೆ.

ಈ ವಿಶೇಷ ಕಾರ್ಯಾಚರಣೆ ಮುಂದುವರೆಯಲಿದ್ದು, ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಂಚಾರ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.