ಕೇಬಲ್ ಕಳವು: ಬಾಲಕ ಸೇರಿ ಮೂವರಿಗೆ ಕಂಬಕ್ಕೆ ಕಟ್ಟಿ ಜನರಿಂದ ಧರ್ಮದೇಟು

KannadaprabhaNewsNetwork |  
Published : Jul 02, 2026, 01:45 AM IST
1ಕೆಎಂಎನ್ ಡಿ17,18 | Kannada Prabha

ಸಾರಾಂಶ

ಬೋರ್‌ವೆಲ್ ಹಾಗೂ ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ತಾಲೂಕಿನ ಗಂಟಗೌಡನಹಳ್ಳಿ ಗೇಟ್ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಬೋರ್‌ವೆಲ್ ಹಾಗೂ ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ತಾಲೂಕಿನ ಗಂಟಗೌಡನಹಳ್ಳಿ ಗೇಟ್ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ.

ತಾಲೂಕಿನ ಸಾತನೂರು ಗ್ರಾಮದ ಭೈರೇಶ್ (18), ತರುಣ್ (18) ಹಾಗೂ ಮತ್ತೋರ್ವ ಅಪ್ರಾಪ್ತನನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ, ಅವರಿಗೆ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ತಾಲೂಕಿನ ಹೊಳಲು ಸಮೀಪದ ಚಂದಗಾಲು ಗ್ರಾಮದ ರೈತರ ಜಮೀನಿನಲ್ಲಿ ಆರೋಪಿಗಳು ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದಾಗ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಅವರನ್ನು ಹಿಡಿಯಲು ಯತ್ನಿಸಿದಾಗ ಎಲ್ಲರೂ ಬೈಕ್‌ನಲ್ಲಿ ಪರಾರಿಯಾಗಿದ್ದಾರೆ. ಅವರನ್ನು ಹಿಂಭಾಲಿಸಿಕೊಂಡು ಬರುವ ವೇಳೆ ಗಂಟಗೌಡನಹಳ್ಳಿ ಗೇಟ್ ಸಮೀಪ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಹಾಕಿಸುವಾಗ ಸಿಕ್ಕಿ ಬಿದ್ದಿದ್ದಾರೆ.

ತಕ್ಷಣ ಅವರನ್ನು ಹಿಡಿದು ಗ್ರಾಮಸ್ಥರೊಂದಿಗೆ ಕಂಬಕ್ಕೆ ಕಟ್ಟಿ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ನಂತರ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದು, ಸ್ಥಳಕ್ಕೆ ಪಿಎಸ್‌ಐ ಕಾಶಿನಾಥ್ ಬುಗಲಿ ಮತ್ತು ಸಿಬ್ಬಂದಿ ಧಾವಿಸಿ ಆರೋಪಿಗಳನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.

ಭೈರೇಶ್, ತರುಣ್ ಅವರುಗಳು ತಾಲೂಕಿನ ತಂಗಳಗೆರೆ, ಉಪ್ಪರಕನಹಳ್ಳಿ, ದ್ಯಾಪಸಂದ್ರ, ಮಾಯಪ್ಪನಕೊಪ್ಪಲು ಸೇರಿದಂತೆ ವಿವಿಧೆಡೆ ಕಳ್ಳತನ ನಡೆಸಿದ್ದಾರೆ ಎಂದು ಹೇಳಲಾಗಿದೆ. ವಿಚಾರಣೆ ನಂತರ ಸತ್ಯಾಂಶ ಹೊರಬರಲಿದೆ.

ಈ ಸಂಬಂಧ ಕೆರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ದೇಗುಲದಲ್ಲಿ ಕಳ್ಳತನ ಪೊಲೀಸರಿಂದ ಪರಿಶೀಲನೆ

ಕೆ.ಆರ್.ಪೇಟೆ:

ತಾಲೂಕಿನ ಮೋದೂರು ಗ್ರಾಮದ ಪಟ್ಟಲದಮ್ಮ ದೇವಾಲಯದಲ್ಲಿ ಮಂಗಳವಾರ ರಾತ್ರಿ ಕಳ್ಳತನದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಕೆ.ಆರ್.ಪೇಟೆ-ಬೂಕನಕೆರೆ ಮುಖ್ಯರಸ್ತೆಯಲ್ಲಿರುವ ಪಟ್ಟಲದಮ್ಮ ದೇವಾಲಯವನ್ನು ಇತ್ತೀಚೆಗೆ ಲೋಕಾರ್ಪಣೆ ಮಾಡಲಾಗಿತ್ತು. ನಿನ್ನೆ ರಾತ್ರಿ ದೇಗುಲದ ಕಿಟಿಕಿ ಸರಳುಗಳನ್ನು ಮಿಷನ್‌ನಿಂದ ಕತ್ತರಿಸಿ ಒಳನುಗ್ಗಿರುವ ಕಳ್ಳರು ದೇವಿ ಮೈ ಮೇಲೆ ಧರಿಸಿದ್ದ ಒಡವೆಗಳು, ಪೂಜೆಗೆ ಬಳಸುತ್ತಿದ್ದ ಬೆಳ್ಳಿ ಮತ್ತು ತಾಮ್ರದ ಸಾಮಗ್ರಿಗಳು ಸೇರಿದಂತೆ ಲೋಕಾರ್ಪಣೆಯಿಂದ ಇಲ್ಲಿಯವರೆವಿಗೂ ತೆರೆಯದೆ ಇದ್ದ ಹುಂಡಿಯನ್ನು ಕೂಡಾ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ತಾಲೂಕಿನಲ್ಲಿ ಹೆಚ್ಚು ಕಳ್ಳತನದ ಪ್ರಕರಣಗಳು ವರದಿಯಾಗುತ್ತಿವೆ. ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ತೆಗೆದುಕೊಂಡು ಕಳ್ಳರನ್ನು ಬಂಧಿಸಬೇಕು ಎಂದು ಗ್ರಾಮಸ್ಥರು ದೂರು ನೀಡಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಮಾಹಿತಿ ಆಯೋಗದಿಂದ ಮಳವಳ್ಳಿ ತಹಸೀಲ್ದಾರ್‌ಗೆ ೫೦ ಸಾವಿರ ರು. ದಂಡ
ಕಾಮಗಾರಿಗಾಗಿ ತೆಗೆದಿದ್ದ ಗುಂಡಿಗೆ ಬಿದ್ದು ಗಾಯಗೊಂಡ ಬೈಕ್ ಸವಾರ