ಕನ್ನಡಪ್ರಭ ವಾರ್ತೆ ಬೆಂಗಳೂರು
ರಾಯಚೂರು ಮೂಲದ ಮಾಳಪ್ಪ ಮತ್ತು ಚಂದ್ರಕಲಾ ದಂಪತಿ ಪುತ್ರಿ ಸಪ್ತಾ ಮೃತ ಮಗು. ಕೊಪ್ಪ-ಬೇಗೂರು ರಸ್ತೆಯಲ್ಲಿ ಇರುವ ಹಾಲೋ ಬ್ಲಾಕ್ ಇಟ್ಟಿಗೆ ತಯಾರಿಸುವ ಕಾರ್ಖಾನೆಯಲ್ಲಿ ಮಂಗಳವಾರ ಬೆಳಗ್ಗೆ 10ರ ಸುಮಾರಿಗೆ ಈ ದುರ್ಘಟನೆ ನಡೆದಿದೆ.
ಮಾಳಪ್ಪ ದಂಪತಿ ಈ ಹಾಲೋ ಬ್ಲಾಕ್ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿಯೇ ಮಗುವಿನೊಂದಿಗೆ ಕಾರ್ಮಿಕರ ಶೆಡ್ನಲ್ಲಿ ಉಳಿದುಕೊಳ್ಳುತ್ತಿದ್ದರು. ಬೆಳಗ್ಗೆ ದಂಪತಿ ಎಂದಿನಂತೆ ಕಾರ್ಖಾನೆಯಲ್ಲಿ ಕೆಲಸದಲ್ಲಿ ನಿರತರಾಗಿದ್ದರು. ಅಲ್ಲೇ ಸಮೀಪದಲ್ಲಿ ತಮ್ಮ ಒಂದೂವರೆ ವರ್ಷದ ಮಗು ಸಪ್ತ ಆಟವಾಡುತ್ತಿತ್ತು. ಇದೇ ಸಮಯಕ್ಕೆ ಇಟ್ಟಿಗೆ ಲೋಡ್ ಮಾಡಿಕೊಂಡು ಹೋಗಲು ಬಂದಿದ್ದ ಕ್ಯಾಂಟರ್ ವಾಹನದ ಚಕ್ರ ಮಗುವಿನ ಮೇಲೆ ಉರುಳಿದ ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿದೆ.ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಕ್ಯಾಂಟರ್ ವಾಹನವನ್ನು ಜಪ್ತಿ ಮಾಡಿದ್ದಾರೆ. ಇನ್ನು ಘಟನೆ ಬಳಿಕ ಚಾಲಕ ಸ್ಥಳದಲ್ಲೇ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಲಕನ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ರಸ್ತೆಯ ವಿಭಜಕಕ್ಕೆ ಗುದ್ದಿದ ಬೈಕ್: ಸವಾರ ಸಾವು
ವೇಗವಾಗಿ ದ್ವಿಚಕ್ರ ವಾಹನ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸವಾರ ಮೃತಪಟ್ಟಿರುವ ಘಟನೆ ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಸವಾರ ಅಭಿಷೇಕ್ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಈ ವಿಚಾರವಾಗಿ ಸೋಮವಾರ ರಾತ್ರಿ ಮನೆಯಲ್ಲಿ ತಾಯಿ ಮತ್ತು ತಮ್ಮನ ಜತೆಗೆ ಜಗಳವಾಗಿತ್ತು. ಬಳಿಕ ಅಭಿಷೇಕ್ ದ್ವಿಚಕ್ರ ವಾಹನದಲ್ಲಿ ಸಮೀಪದಲ್ಲೇ ಇದ್ದ ಚಿಕ್ಕಮ್ಮನ ಮನೆಗೆ ತೆರಳಿ ರಾತ್ರಿ 10.30ರ ಸುಮಾರಿಗೆ ಊಟ ಮಾಡಿ ಹೊರಗೆ ಬಂದಿದ್ದ. ಬಳಿಕ ಉಲ್ಲಾಳ ರಸ್ತೆಯಲ್ಲಿ ವಿದ್ಯಾನಿಕೇತನ್ ಸರ್ಕಲ್ ಕಡೆಯಿಂದ ಅಮ್ಮಾ ಆಶ್ರಮದ ಕಡೆಗೆ ವೇಗವಾಗಿ ದ್ವಿಚಕ್ರ ವಾಹನ ಚಲಾಯಿಸಿಕೊಂಡು ಬರುವಾಗ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಗುದ್ದಿದ್ದಾನೆ.
ಅತಿಯಾದ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ.