ವಿಚ್ಛೇದಿತ ಪತ್ನಿ, ಪುತ್ರಗೆ ಜೀವನಾಂಶ ನೀಡಲು ನಿರುದ್ಯೋಗದ ನೆಪ ಬೇಡ

KannadaprabhaNewsNetwork |  
Published : Jun 05, 2024, 01:30 AM ISTUpdated : Jun 05, 2024, 04:47 AM IST
ಹೈಕೋರ್ಟ್‌ | Kannada Prabha

ಸಾರಾಂಶ

ನಿರುದ್ಯೋಗ ನೆಪ ಹೇಳಿ ಪತಿಯು ತನ್ನ ವಿಚ್ಛೇದಿತ ಪತ್ನಿ ಹಾಗೂ ಮಗುವಿಗೆ ಜೀವನಾಂಶ ಪಾವತಿಸುವ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಅವಕಾಶವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

 ಬೆಂಗಳೂರು :  ನಿರುದ್ಯೋಗ ನೆಪ ಹೇಳಿ ಪತಿಯು ತನ್ನ ವಿಚ್ಛೇದಿತ ಪತ್ನಿ ಹಾಗೂ ಮಗುವಿಗೆ ಜೀವನಾಂಶ ಪಾವತಿಸುವ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಅವಕಾಶವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ವಿಚ್ಛೇದಿತ ಪತ್ನಿಗೆ ಮಾಸಿಕ ಏಳು ಸಾವಿರ ಹಾಗೂ ಅಪ್ರಾಪ್ತ ಮಗುವಿಗೆ ಮೂರು ಸಾವಿರ ರು. ಜೀವನಾಂಶ ಪಾವತಿಸುವಂತೆ ತನಗೆ ಸೂಚಿಸಿದ ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮುಗ್ದಮ್ ಅವರ ಪೀಠ ಈ ಸ್ಪಷ್ಟನೆ ನೀಡಿ, ಕೌಟುಂಬಿಕ ನ್ಯಾಯಾಲಯದ ಆದೇಶದಂತೆ ವಿಚ್ಛೇದಿತ ಮತ್ತು ಮಗುವಿಗೆ ಜೀವನಾಂಶ ಪಾವತಿಸುವಂತೆ ಅರ್ಜಿದಾರನಿಗೆ ಸೂಚಿಸಿದೆ.

ವಿಚಾರಣೆ ವೇಳೆ ಅರ್ಜಿದಾರ ಪರ ವಕೀಲರು, ಅರ್ಜಿದಾರ ಸದ್ಯ ಕೆಲಸ ಕಳೆದುಕೊಂಡು ನಿರುದ್ಯೋಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ವಿಚ್ಛೇದಿತ ಪತ್ನಿ ಹಾಗೂ ಮಗುವಿಗೆ ಜೀವನಾಂಶ ಪಾವತಿಸುವ ಸ್ಥಿತಿಯಲ್ಲಿ ಇಲ್ಲ. ಆದ್ದರಿಂದ ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು ಎಂದು ಕೋರಿದರು.

ಈ ವಾದ ಒಪ್ಪದ ನ್ಯಾಯಪೀಠ, ಅರ್ಜಿದಾರ ಮತ್ತು ಆತನ ವಿಚ್ಚೇದಿತ ಪತ್ನಿ ದೂರವಾಗಿ ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದಾರೆ. ವಿಚ್ಛೇದಿತ ಪತ್ನಿಯೊಂದಿಗೆ ಅಪ್ರಾಪ್ತ ಮಗು ನೆಲೆಸಿದೆ. ಉದ್ಯೋಗವಿಲ್ಲ ಎಂಬ ನೆಪ ಹೇಳಿ ಅವರಿಗೆ ಜೀವನಾಂಶ ನೀಡುವ ಜವಾಬ್ದಾರಿಯಿಂದ ಅರ್ಜಿದಾರ ಹಿಂದೆ ಸರಿಯುವುದನ್ನು ಒಪ್ಪಲಾಗದು. ಸದ್ಯ ಹಣದುಬ್ಬರದಿಂದ ಜನಸಮೂಹ ತತ್ತರಿಸಿದೆ. ಜೀವನ ನಿರ್ವಹಣಾ ವೆಚ್ಚವೂ ಗಣನೀಯವಾಗಿ ಏರಿಕೆಯಾಗಿದೆ. ಇದರಿಂದ ಜೀವನ ನಿರ್ವಹಣೆ ಸುಲಭದ ಮಾತಲ್ಲ. ಹಾಗಾಗಿ, ವಿಚ್ಛೇದಿತ ಪತ್ನಿ ಹಾಗೂ ಮಗುವಿಗೆ ಮಾಸಿಕ ಒಟ್ಟು 10 ಸಾವಿರ ರು. ಜೀವನಾಂಶ ಪಾವತಿಸಲು ಕೌಟುಂಬಿಕ ನ್ಯಾಯಾಲಯ ಸೂಚಿಸಿರುವುದು ಸಮಂಜಸವಾಗಿದೆ ಎಂದು ಆದೇಶಿಸಿದೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಎಕ್ಸ್ ಪ್ರೆಸ್ ವೇನಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ
ಕದೀಮರಿಗೆ ಸಾರ್ವಜನಿಕರಿಂದ ಧರ್ಮದೇಟು..!