ಮೂರು ಕಾರುಗಳ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

KannadaprabhaNewsNetwork |  
Published : Jun 10, 2025, 03:39 AM ISTUpdated : Jun 10, 2025, 04:47 AM IST
Dhar road accident

ಸಾರಾಂಶ

ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಐವರು ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಅಗರಲಿಂಗನದೊಡ್ಡಿ ಗ್ರಾಮದ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.

  ಮದ್ದೂರು : ಮೂರು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಐವರು ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಅಗರಲಿಂಗನದೊಡ್ಡಿ ಗ್ರಾಮದ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.

ಬೆಂಗಳೂರು ಪಾದರಾಯನಪುರದ ಅಯೂಸ್ ಖಾನ್ (21) ಹಾಗೂ ಗೋವಿಂದಪುರದ ಉಮರ್ ನಗರದ ಆಟೋ ಚಾಲಕ ಮಕ್ಸೂದ್ ಉಲ್ಲಾಖಾನ್ (35) ಮೃತಪಟ್ಟವರು. ಇವರ ಜೊತೆ ಕಾರು ಚಾಲನೆ ಮಾಡುತ್ತಿದ್ದ ಬೆಂಗಳೂರಿನ ನಾಗವಾರದ ಮೊಜಾಯದ್ ಪಾಷ ತೀವ್ರವಾಗಿ ಗಾಯಗೊಂಡಿದ್ದು, ಈತನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಪರಿಸ್ಥಿತಿ ಗಂಭೀರವಾಗಿದೆ.

ಅಪಘಾತಕ್ಕೀಡಾದ ಮತ್ತೊಂದು ಕಾರಿನಲ್ಲಿದ್ದ ಬೆಂಗಳೂರಿನ ಬಸವರಾಜು, ಪಾರ್ವತಿ, ಇವರ ಮಕ್ಕಳಾದ ಆರು ವರ್ಷದ ನಾಗರತ್ನ ಹಾಗೂ ನಾಲ್ಕು ವರ್ಷದ ನಾಗರಾಜು ಸಹ ಗಾಯಗೊಂಡಿದ್ದು, ಇವರನ್ನು ಮದ್ದೂರು, ಮಂಡ್ಯ, ಆಸ್ಪತ್ರೆ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆಯಲ್ಲಿ ಸ್ಕೋಡಾ, ಇಟಿಯಾಸ್ ಹಾಗೂ ಇನೋವಾ ಕಾರ್ ಸೇರಿದಂತೆ ಮೂರು ಕಾರುಗಳು ತೀವ್ರವಾಗಿ ಜಖಂ ಗೊಂಡಿವೆ. ಮೃತಪಟ್ಟಿರುವ ಮಕ್ಸೂದ್, ಆಯೂಸಖಾನ್ ಬೆಂಗಳೂರಿಂದ ಮೈಸೂರಿಗೆ ತೆರಳುತ್ತಿದ್ದರು. ಮೈಸೂರಿನಿಂದ ಮದುವೆ ಕಾರ್ಯ ಮುಗಿಸಿ ಬಸವರಾಜು, ಪತ್ನಿ ಪಾರ್ವತಿ ತಮ್ಮ ಇಬ್ಬರು ಮಕ್ಕಳೊಂದಿಗೆ ತಮ್ಮ ಕಾರಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದರು.

ರಾತ್ರಿ 9:15 ರ ಸುಮಾರಿಗೆ ಬೆಂಗಳೂರು- ಮೈಸೂರು ಹೆದ್ದಾರಿಯ ಅಗರಲಿಂಗನ ದೊಡ್ಡಿ ಗ್ರಾಮದ ತೈಲೂರು ಕೆರೆ ಬಳಿ ಬಸವರಾಜು ಚಾಲನೆ ಮಾಡುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ನಂತರ ಮೈಸೂರು ಮಾರ್ಗದ ರಸ್ತೆಗೆ ಜಿಗಿದು ಮೃತರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದು ಅಪಘಾತ ಸಂಭವಿಸಿ ಸಾವು-ನೋವು ಉಂಟಾಗಿದೆ. ಇನ್ನೊಂದು ಕಾರಿನಲ್ಲಿ ಇದ್ದ ಪ್ರಯಾಣಿಕರಿಗೆ ಯಾವುದೇ ಹಾನಿ ಆಗಿಲ್ಲ. ಅಪಘಾತದಿಂದಾಗಿ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು.

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಸಂಚಾರಿ ಠಾಣೆಯ ಪಿಎಸ್ಐಗಳಾದ ರಾಮಸ್ವಾಮಿ, ಕಮಲಾಕ್ಷಿ ಹಾಗೂ ಸಿಬ್ಬಂದಿ ಮಳೆ ಆರ್ಭಟದ ನಡುವೆಯೇ ಅಪಘಾತಕೀಡಾದ ವಾಹನಗಳಲ್ಲಿದ್ದ ಮೃತರ ಶವ ಮತ್ತು ಗಾಯಾಳುಗಳನ್ನು ಹೊರ ತೆಗೆದು ಆಸ್ಪತ್ರೆಗೆ ಸಾಗಿಸಿದ ನಂತರ ವಾಹನಗಳನ್ನು ರಸ್ತೆ ಬದಿಗೆ ಸರಿಸಿ ಹೆದ್ದಾರಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಸಂಬಂಧ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತರ ಶವಗಳ ಮರಣೋತ್ತರ ಪರೀಕ್ಷೆ ನಂತರ ವಾರಸುದಾರರ ವಶಕ್ಕೆ ಒಪ್ಪಿಸಲಾಯಿತು.

ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ಕೃಷ್ಣಪ್ಪ, ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

PREV
Read more Articles on

Recommended Stories

ಜಮೀನು ಅಕ್ರಮ ಪರಭಾರೆ: ಇಬ್ಬರ ಬಂಧನ
ರೈತನ ಬ್ಯಾಂಕ್ ಖಾತೆಯಲ್ಲಿದ್ದ ಕೋಟ್ಯಂತರ ರು.ಗೆ ಕದೀಮರಿಂದ ಕನ್ನ..!