ಮಂಡ್ಯ : ಗೂಡ್ಸ್ ಟೆಂಪೋವೊಂದರಲ್ಲಿ ಅನಧಿಕೃತವಾಗಿ ಸಾಗಾಣಿಕೆ ಮಾಡುತ್ತಿದ್ದ ೮೦ ಸಾವಿರ ರು. ಮೌಲ್ಯದ ೩೦೦ ಚೀಲಗಳ ಯೂರಿಯಾ ರಸಗೊಬ್ಬರವನ್ನು ಕೃಷಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ತಾಲೂಕಿನ ಇಂಡುವಾಳು ಗ್ರಾಮದ ಬಳಿ ಕಳೆದ ರಾತ್ರಿ ನಡೆದಿದೆ.
ತಾಲೂಕಿನ ಕಾಳೇನಹಳ್ಳಿ ಬಳಿ ಗೂಡ್ಸ್ ಟೆಂಪೋಗೆ ತುಂಬಿಕೊಂಡು 300 ಚೀಲ ರಸಗೊಬ್ಬರ ತುಂಬಿಕೊಂಡು ಹೋಗುತ್ತಿರುವ ಬಗ್ಗೆ ಮಾಹಿತಿ ತಿಳಿದ ಕೃಷಿ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ತೆರಳಿದ್ದಾರೆ. ಈ ವೇಳೆ ಗೂಡ್ಸ್ ವಾಹನ ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಸಂಚರಿಸುತ್ತಿತ್ತು.
ಹಿಂದಿನಿಂದ ಆ ವಾಹನವನ್ನು ಹಿಂಬಾಲಿಸಿಕೊಂಡು ಬಂದು ತಾಲೂಕಿನ ಇಂಡುವಾಳು ಗ್ರಾಮದ ಬಳಿ ಅಡ್ಡಗಟ್ಟಿ ವಶಕ್ಕೆ ತೆಗೆದುಕೊಳ್ಳುವಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಕೃಷಿ ಅಧಿಕಾರಿಗಳು ವಾಹನವನ್ನು ಅಡ್ಡಗಟ್ಟಿದಾಗ ನಿಲ್ಲಿಸಿದ ಚಾಲಕ ವಾಹನದಿಂದ ಇಳಿದು ಪರಾರಿಯಾಗಿದ್ದಾನೆ. ಅಧಿಕಾರಿಗಳು ವಾಹನ ಮತ್ತು ಗೊಬ್ಬರವನ್ನು ಪೊಲೀಸರ ವಶಕ್ಕೆ ನೀಡಿ ಪ್ರಕರಣ ದಾಖಲಿಸಿದ್ದಾರೆ.
ಪ್ರತಿ ಚೀಲ ಯೂರಿಯಾವನ್ನು ರೈತರಿಗೆ 266 ರು.ಗಳಿಗೆ ವಿತರಿಸಲಾಗುತ್ತಿದ್ದು, ವಾಹನದಲ್ಲಿ ಸಾಗಿಸುತ್ತಿದ್ದ ಗೊಬ್ಬರ ಕಾಳಸಂತೆಗೆ ಅಥವಾ ಉತ್ಪಾದನಾ ಕಂಪನಿಗೆ ಸಾಗಿಸಲಾಗುತ್ತಿತ್ತೇ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ತನಿಖೆಯ ಬಳಿಕವಷ್ಟೇ ಎಲ್ಲ ಮಾಹಿತಿ ತಿಳಿಯಲಿದೆ.
ಬಿತ್ತನೆ ಬೀಜ, ರಸಗೊಬ್ಬರ ಮಾರಾಟಗಾರರು ನಿಯಮಬಾಹಿರವಾಗಿ ಚಟುವಟಿಕೆಗಳನ್ನು ನಡೆಸುತ್ತಿರುವುದು ಕಂಡುಬಂದಲ್ಲಿ ಅಂತಹವರ ವಿರುದ್ದ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಯಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಚಾಲಕನ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.