ಬಿಜೆಪಿ ಶಾಸಕ ಬೈರತಿ ವಿರುದ್ಧ ಲುಕ್‌ ಔಟ್‌ ನೋಟಿಸ್‌ ಜಾರಿ?

Published : Dec 22, 2025, 06:30 AM IST
Bairati Basavaraju MLA

ಸಾರಾಂಶ

ರೌಡಿಶೀಟರ್‌ ಶಿವಪ್ರಕಾಶ್‌ ಅಲಿಯಾಸ್‌ ಬಿಕ್ಲು ಶಿವು ಹತ್ಯೆ ಪ್ರಕರಣದಲ್ಲಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಶಾಸಕ ಬೈರತಿ ಬಸವರಾಜು ಅವರ ಪತ್ತೆಗಾಗಿ ಸಿಐಡಿ ಪೊಲೀಸರು ಲುಕ್‌ಔಟ್‌ ನೋಟಿಸ್‌ ಹೊರಡಿಸಲು ಮುಂದಾಗಿದ್ದಾರೆ.

  ಬೆಂಗಳೂರು :  ರೌಡಿಶೀಟರ್‌ ಶಿವಪ್ರಕಾಶ್‌ ಅಲಿಯಾಸ್‌ ಬಿಕ್ಲು ಶಿವು ಹತ್ಯೆ ಪ್ರಕರಣದಲ್ಲಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಶಾಸಕ ಬೈರತಿ ಬಸವರಾಜು ಅವರ ಪತ್ತೆಗಾಗಿ ಸಿಐಡಿ ಪೊಲೀಸರು ಲುಕ್‌ಔಟ್‌ ನೋಟಿಸ್‌ ಹೊರಡಿಸಲು ಮುಂದಾಗಿದ್ದಾರೆ.

ಬೆಳಗಾವಿ ಅಧಿವೇಶನಕ್ಕೆ ಹೋಗಿದ್ದ ಶಾಸಕ ಬೈರತಿ ಬಸವರಾಜು ಅ‍ವರು ಅಲ್ಲಿಂದಲೇ ಮಹಾರಾಷ್ಟ್ರ ಅಥವಾ ಗೋವಾದಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಿಐಡಿಯ ಮೂರು ತಂಡಗಳು ಅವರಿಗಾಗಿ ಎರಡ್ಮೂರು ರಾಜ್ಯಗಳಲ್ಲಿ ಶೋಧ ನಡೆಸುತ್ತಿವೆ. ಈ ಮಧ್ಯೆ ಅವರು ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಲುಕ್‌ಔಟ್‌ ನೋಟಿಸ್‌ ಹೊರಡಿಸಲು ಮುಂದಾಗಿದ್ದಾರೆ.

ಎಲ್ಲ ವಿಮಾನ ನಿಲ್ದಾಣಗಳ ಭದ್ರತಾ ವಿಭಾಗದ ಅಧಿಕಾರಿಗಳಿಗೆ ಲುಕ್‌ಔಟ್‌ ನೋಟಿಸ್‌ ನೀಡಲು ಮುಂದಾಗಿದ್ದಾರೆ. ಜತೆಗೆ ರೈಲು ನಿಲ್ದಾಣಗಳಿಗೂ ಮಾಹಿತಿ ನೀಡಲಾಗಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ. ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ಬಸವರಾಜು ಮೊಬೈಲ್‌ ಸ್ವಿಚ್ಡ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ.

ಪ್ರಕರಣದ ವಿವರ:

ಜು.15ರಂದು ಭಾರತೀನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್‌ ಬಿಕ್ಲು ಶಿವನನ್ನು ಆತನ ಮನೆ ಮುಂಭಾಗವೇ ಹತ್ತಾರು ಬಾರಿ ಇರಿದು ಭೀಕರವಾಗಿ ಹತ್ಯೆಗೈಯಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಭಾರತೀನಗರ ಠಾಣೆ ಪೊಲೀಸರು 17 ಮಂದಿಯನ್ನು ಬಂಧಿಸಿದ್ದರು. ಬಳಿಕ ಈ ಪ್ರಕರಣ ಸಿಐಡಿಗೆ ವರ್ಗಾವಣೆಯಾಗುತ್ತಿದ್ದಂತೆ ಪ್ರಮುಖ ಆರೋಪಿ ಜಗದೀಶ್‌ ಹಾಗೂ ಅಜಯ್ ಎಂಬುವರನ್ನು ಬಂಧಿಸಿದ್ದರು. ಪ್ರಕರಣದ ಐದನೇ ಆರೋಪಿಯಾಗಿರುವ ಬೈರತಿ ಬಸವರಾಜು ತಲೆಮರೆಸಿಕೊಂಡಿದ್ದಾರೆ.

ಬೈರತಿ ಬೇಲ್‌ ಭವಿಷ್ಯ ಇಂದು ನಿರ್ಧಾರ:

ಹೈಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಬೈರತಿ ಬಸವರಾಜು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಶನಿವಾರ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್‌ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ್ದು, ಜಾಮೀನು ಅರ್ಜಿ ಭವಿಷ್ಯ ನಿರ್ಧಾರವಾಗಲಿದೆ.

ಲುಕೌಟ್‌ ನೋಟಿಸ್‌ ಎಂದರೆ ಏನು?

- ತನಿಖಾ ಸಂಸ್ಥೆಗಳಿಗೆ ಬೇಕಾಗಿರುವ ಅಪರಾಧ ಪ್ರಕರಣದ ಆರೋಪಿ ದೇಶದಿಂದ ಪರಾರಿಯಾಗದಂತೆ ತಡೆಯಲು ಇರುವ ವಿಧಾನ

- ನಿರ್ದಿಷ್ಟ ವ್ಯಕ್ತಿ ವಿದೇಶಕ್ಕೆ ತೆರಳಲು ಬಂದರೆ ಆತ/ಆಕೆಯನ್ನು ತಡೆದು, ಮಾಹಿತಿ ನೀಡುವಂತೆ ವಲಸೆ ವಿಭಾಗಕ್ಕೆ ನೀಡುವ ನಿರ್ದೇಶನ

- ಲುಕೌಟ್‌ ನೋಟಿಸ್‌ನಲ್ಲಿರುವ ವ್ಯಕ್ತಿ ಗಡಿ, ವಿಮಾನ ನಿಲ್ದಾಣ, ಬಂದರು ಮೂಲಕ ವಿದೇಶಕ್ಕೆ ಹೋಗಲು ಬಂದರೆ ತಡೆಹಿಡಿಯಲಾಗುತ್ತದೆ

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.
Read more Articles on

Recommended Stories

ಆನ್‌ಲೈನ್‌ನಲ್ಲಿ ಪರಿಚಯವಾದ ಯುವಕನಿಂದ ಗೃಹಿಣಿಗೆ ಕಿರುಕುಳ
20 ವಾಹನಕ್ಕೆ ಗುದ್ದಿಸಿದ ಟ್ರಕ್‌ನ್ನು 12 ಕಿ.ಮೀ. ಚೇಸ್‌ ಮಾಡಿದ ಪೊಲೀಸರು