;Resize=(412,232))
ಬೆಂಗಳೂರು : ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ವಾಹನ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ತಾಯಿ-ಮಗ ದಾರುಣವಾಗಿ ಮೃತಪಟ್ಟಿರುವ ಘಟನೆ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ದೊಡ್ಡಗೊಲ್ಲರಹಟ್ಟಿ ನಿವಾಸಿಗಳಾದ ಅಶ್ವಿನಿ (41) ಮತ್ತು ಇವರ ಮಗ ಅಭಿಲಾಷ್ (19) ಮೃತ ದುರ್ದೈವಿಗಳು. ಭಾನುವಾರ ಬೆಳಗ್ಗೆ ಸುಮಾರು 7.40ಕ್ಕೆ ಮೈಸೂರು-ಬೆಂಗಳೂರು ರಸ್ತೆಯ ಜುಡಿಯೋ ಶೋ ರೂಮ್ ಸಮೀಪ ಈ ದುರ್ಘಟನೆ ನಡೆದಿದೆ. ಘಟನೆ ಸಂಬಂಧ ಕ್ಯಾಂಟರ್ ವಾಹನದ ಚಾಲಕ ಶಿವ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರಾದ ಅಶ್ವಿನಿ ಚಾಮರಾಜಪೇಟೆಯ ಖಾಸಗಿ ಆಸ್ಪತ್ರೆಯಲ್ಲಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ಮಗ ಅಭಿಲಾಷ್ ಪ್ರಥಮ ವರ್ಷ ವಾಣಿಜ್ಯ ಪದವಿ ವ್ಯಾಸಂಗ ಮಾಡುತ್ತಿದ್ದ. ಬೆಳಗ್ಗೆ ದ್ವಿಚಕ್ರ ವಾಹನದಲ್ಲಿ ತಾಯಿಯನ್ನು ಕೆಲಸಕ್ಕೆ ಡ್ರಾಪ್ ಮಾಡಲು ಮನೆಯಿಂದ ಚಾಮರಾಜಪೇಟೆಗೆ ಹೊರಟಿದ್ದ. ಮೈಸೂರು-ಬೆಂಗಳೂರು ರಸ್ತೆಯ ಜುಡಿಯೋ ಶೋ ರೂಮ್ ಬಳಿ ಕ್ಯಾಂಟರ್ ಮತ್ತು ಕಾರೊಂದರ ನಡುವೆ ದ್ವಿಚಕ್ರ ವಾಹನ ಚಲಾಯಿಸಿದ್ದಾನೆ. ಈ ವೇಳೆ ಕ್ಯಾಂಟರ್ ವಾಹನ, ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಸಹಿತ ತಾಯಿ-ಮಗ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಳಿಕ ಸ್ಥಳೀಯರ ನೆರವಿನಿಂದ ಸಂಚಾರ ಪೊಲೀಸರು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷಿಸಿದ ವೈದ್ಯರು ಮಾರ್ಗ ಮಧ್ಯೆಯೇ ಇಬ್ಬರೂ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ಈ ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳದ ಸುತ್ತಮುತ್ತಲ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿ ಪರಿಶೀಲಿಸಲಾಗುತ್ತಿದೆ. ಕ್ಯಾಂಟರ್ ವಾಹನದ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಸಂಬಂಧ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.