ವಿಚಾರಣೆಗಾಗಿ ನ್ಯಾಯಾಂಗ ಬಂಧನದಲ್ಲಿದ್ದ ಆರು ಮಂದಿ ಪೊಲೀಸರ ವಶಕ್ಕೆ

KannadaprabhaNewsNetwork |  
Published : Jan 29, 2026, 01:30 AM IST
ಸರ್ಕಾರಿ ಭೂಮಿ ಕಬಳಿಕೆ ಪ್ರಕರಣ | Kannada Prabha

ಸಾರಾಂಶ

ನಕಲಿ ದಾಖಲೆ ಸೃಷ್ಟಿಸಿ ನೂರಾರು ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಕಬಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಆರು ಮಂದಿ ಆರೋಪಿಗಳನ್ನು ವಿಚಾರಣೆಗಾಗಿ ಪಟ್ಟಣ ಠಾಣೆಯ ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

ಕನ್ನಡಪ್ರಭ ವಾರ್ತೆ ನಾಗಮಂಗಲ

ನಕಲಿ ದಾಖಲೆ ಸೃಷ್ಟಿಸಿ ನೂರಾರು ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಕಬಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಆರು ಮಂದಿ ಆರೋಪಿಗಳನ್ನು ವಿಚಾರಣೆಗಾಗಿ ಪಟ್ಟಣ ಠಾಣೆಯ ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

ನಾಗಮಂಗಲ ತಾಲೂಕು ಕಚೇರಿಯ ಭೂಮಿ ಮತ್ತು ದರಖಾಸ್ತು ಶಾಖೆಯ ದ್ವಿತೀಯ ದರ್ಜೆ ಸಹಾಯಕ ಎಚ್.ವಿ.ಸತೀಶ್, ಶಿರಸ್ತೇದಾರ್ ರವಿಶಂಕರ್, ಕಾಂತಾಪುರ ವೃತ್ತದ ಗ್ರಾಮ ಸಹಾಯಕ ಎಸ್.ಯೋಗೇಶ್, ರೆಕಾರ್ಡ್‌ರೂಂನ ಶಿರಸ್ತೇದಾರ್ ಉಮೇಶ್, ರೆಕಾರ್ಡ್‌ರೂಂ ಶಾಖೆಯ ದ್ವಿತೀಯ ದರ್ಜೆ ಸಹಾಯಕ ಗುರುಮೂರ್ತಿ ಹಾಗೂ ಹಿಂದಿನ ಭೂಮಿ ಮತ್ತು ದರಖಾಸ್ತು ಶಾಖೆಯ ದ್ವಿತೀಯ ದರ್ಜೆ ಸಹಾಯಕ ವಿಜಯಕುಮಾರ್ ಎಂಬುವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಬೇರೆ ವ್ಯಕ್ತಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮೂಲ ಸರ್ಕಾರಿ ಭೂದಾಖಲೆಗಳನ್ನು ತಿದ್ದುಪಡಿ ಮಾಡಿ ನಕಲಿ ದಾಖಲೆ ಸೃಷ್ಟಿಸಿ ನೂರಾರು ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಕಬಳಿಸಿರುವ ಕುರಿತು ದೂರು ಸಲ್ಲಿಕೆಯಾಗಿದ್ದ ಹಿನ್ನೆಲೆಯಲ್ಲಿ ಮಂಡ್ಯ ಲೋಕಾಯುಕ್ತ ಎಸ್ಪಿ ಸುರೇಶ್‌ಬಾಬು ನೇತೃತ್ವದ ಲೋಕಾಯುಕ್ತ ಪೊಲೀಸರ ತಂಡ ಕಳೆದ ಜ.೧೩ರಂದು ನಾಗಮಂಗಲ ತಾಲೂಕು ಕಚೇರಿ ಸೇರಿದಂತೆ ಹಲವು ಕಡೆಗಳಲ್ಲಿ ದಿಢೀರ್ ದಾಳಿ ನಡೆಸಿ ಸಮಗ್ರ ಪರಿಶೀಲನೆ ನಡೆಸಿದ್ದರು.

ಈ ವೇಳೆ ತಾಲೂಕು ಕಚೇರಿಯ ದಾಖಲೆಗಳ ಕೊಠಡಿಯಲ್ಲಿರಬೇಕಾದ ಅಸಲು ಹಕ್ಕು ಬದಲಾವಣೆ ರಿಜಿಸ್ಟರ್ ಸೇರಿದಂತೆ ಕೆಲ ಮೂಲ ಭೂದಾಖಲೆಗಳು ತಾಲೂಕು ಕಚೇರಿಯ ಸಿಬ್ಬಂದಿಯ ಮನೆಗಳಲ್ಲಿ, ಜೆರಾಕ್ಸ್ ಅಂಗಡಿಯಲ್ಲಿ, ಇತರೆ ಖಾಸಗಿ ಅಂಗಡಿಯಲ್ಲಿ ಪತ್ತೆಯಾದರೆ, ಇನ್ನೂ ಹಲವು ದಾಖಲೆಗಳು ಹಾಗೂ ತಹಶೀಲ್ದಾರ್, ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳ ನಕಲಿ ಸೀಲ್‌ಗಳು ಮೈಸೂರಿನ ರಾಜರತ್ನ ಹೋಟೆಲ್‌ನ ಕ್ಯಾಶ್‌ಕೌಂಟರ್ ಟೇಬಲ್‌ನಲ್ಲಿ ಪತ್ತೆಯಾಗಿದ್ದವು.

ಭೂಮಿ ಮತ್ತು ದರಖಾಸ್ತು ಶಾಖೆ, ರೆಕಾರ್ಡ್ ರೂಂನಲ್ಲಿದ್ದ ಸರ್ಕಾರಿ ದಾಖಲೆಗಳನ್ನು ತಿದ್ದಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನೂರಾರು ಎಕರೆ ಭೂ ಕಬಳಿಕೆ ಮಾಡಿರುವುದರಿಂದ ಸರ್ಕಾರಕ್ಕೆ ಸುಮಾರು ೨೦೦ ಕೋಟಿ ರು. ಆರ್ಥಿಕ ನಷ್ಟ ಉಂಟುಮಾಡಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ತಾಲೂಕು ಕಚೇರಿಯ ೬ಮಂದಿ ಸಿಬ್ಬಂದಿ ಸೇರಿ ಪಟ್ಟಣದ ಟಿ.ಬಿ.ಬಡಾವಣೆಯ ಯಶವಂತ್, ಮೈಸೂರಿನ ಪತ್ರ ಬರಹಗಾರ ಚಿನ್ನಸ್ವಾಮಿ, ಹಿಂದಿನ ಭೂಮಿ ಮತ್ತು ದರಖಾಸ್ತು ಶಾಖೆಯ ದ್ವಿತೀಯ ದರ್ಜೆ ಸಹಾಯಕ ವಿಜಯಕುಮಾರ್, ಪಟ್ಟಣದ ಮಹಮ್ಮದ್ ವಾಸಿಕುಲ್ಲಾ ವಿರುದ್ಧ ಎಫ್‌ಐಆರ್ ದಾಖಲಿಸಿದ್ದ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ೧೦ ಮಂದಿ ಆರೋಪಿಗಳ ಪೈಕಿ ಐವರನ್ನು ಪೊಲೀಸರ ವಶಕ್ಕೆ ನೀಡಿದ್ದರು. ತಲೆಮರೆಸಿಕೊಂಡಿದ್ದ ಐವರು ಆರೋಪಿಗಳ ಪೈಕಿ ವಿಜಯಕುಮಾರ್ ಎಂಬಾತನನ್ನು ಪೊಲೀಸರು ದಸ್ತಗಿರಿ ಮಾಡಿದ್ದರು.

ಲೋಕಾಯುಕ್ತ ಪೊಲೀಸರಿಂದ ವಶಕ್ಕೆ ಪಡೆದಿದ್ದ ಎಲ್ಲಾ ಆರೋಪಿಗಳನ್ನು ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶಿವಕುಮಾರ್ ಅವರು ಪಟ್ಟಣದ ಹಿರಿಯ ಸಿವಿಲ್ ನ್ಯಾಯಾಧೀಶರೆದುರು ಹಾಜರು ಪಡಿಸಿ ಹೆಚ್ಚಿನ ವಿಚಾರಣೆ ನಡೆಸುವ ಸಲುವಾಗಿ ಎಲ್ಲಾ ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡುವಂತೆ ಮನವಿ ಮಾಡಿಕೊಂಡಿದ್ದರು. ಆದರೆ ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡದೆ ೧೪ ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರಿಸುವಂತೆ ನ್ಯಾಯಾಧೀಶರು ನಿರ್ದೇಶನ ನೀಡಿದ್ದರು.

ಜ.೨೭ಕ್ಕೆ ಆರೋಪಿಗಳ ನ್ಯಾಯಾಂಗ ಬಂಧನ ಮುಗಿದು ಮತ್ತಷ್ಟು ದಿನಗಳ ಕಾಲ ವಿಸ್ತರಿಸಲಾಗಿತ್ತು. ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ನಡೆಸುವ ಸಲುವಾಗಿ ಆರು ಮಂದಿ ಆರೋಪಿಗಳನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕೊಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ ಪಟ್ಟಣ ಠಾಣೆಯ ಪೊಲೀಸ್ ಅಧಿಕಾರಿಗಳು ೬ ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಕೆ.ಆರ್.ಪೇಟೆ ನ್ಯಾಯಾಲಯಕ್ಕೆ ಪ್ರಕರಣ ವರ್ಗ!

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಮಂಗಲ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರು ಸಕಾರಾತ್ಮಕವಾಗಿ ಸ್ಪಂದಿಸದಿರುವ ಅರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ನೂರಾರು ಕೋಟಿ ರು. ಆರ್ಥಿಕ ಮೌಲ್ಯದ ಅಕ್ರಮ ಭೂಕಬಳಿಕೆ ಪ್ರಕರಣವನ್ನು ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ ಎಂದು ತಿಳಿದುಬಂದಿದೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಬಿಲ್ಡರ್‌ ಮನೇಲಿ 18 ಕೋಟಿ ಮೌಲ್ಯದಚಿನ್ನ ಕದ್ದವರ ಪತ್ತೆಗೆ 3 ವಿಶೇಷ ತಂಡ
ಫಾರಿನ್‌ ಟೂರ್‌ ಡ್ರಗ್ಸ್ ಮಾಫಿಯಾ ವಿರುದ್ಧ ಭರ್ಜರಿ ಬೇಟೆ