ಕನ್ನಡಪ್ರಭ ವಾರ್ತೆ ಬೆಂಗಳೂರು
ಹಾಸನದ ಪುರದಮ್ಮ ದೇವಾಲಯದ ಪೂಜಾರಿ ದಯಾನಂದ್ ಬಂಧಿತನಾಗಿದ್ದು, ಕೆಲ ದಿನಗಳ ಹಿಂದೆ ಬಾಗಲಗುಂಟೆ ಸಮೀಪದ ನೆಲೆಸಿರುವ ಸಂತ್ರಸ್ತೆಯನ್ನು ಲೈಂಗಿಕವಾಗಿ ಪೂಜಾರಿ ಶೋಷಿಸಿದ್ದ. ಈ ಬಗ್ಗೆ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಅತ್ಯಾಚಾರ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶೋಕಿಲಾಲ ಪೂಜಾರಿ:ಹಾಸನದ ಪುರದಮ್ಮ ದೇವಾಲಯವು ಶಕ್ತಿ ದೇವತೆಯಾಗಿ ಜನ ಮಾಸದಲ್ಲಿ ನೆಲೆಸಿದೆ. ಹಲವು ವರ್ಷಗಳಿಂದ ಈ ದೇವಾಲಯದಲ್ಲಿ ದಯಾನಂದ್ ಪೂಜಾರಿಯಾಗಿದ್ದು, ದೇವರ ಹೆಸರು ಬಳಸಿಕೊಂಡು ಮಾಟ ಮಂತ್ರ ಹಾಗೂ ವಶೀಕರಣ ಹೀಗೆ ಅನಾಚಾರ ಆಚರಣೆಗಳಲ್ಲಿ ಆತ ನಿರತನಾಗಿದ್ದ ಎಂಬ ಆರೋಪಗಳು ಕೇಳಿಬಂದಿವೆ. ದೇವಾಲಯದ ಹೆಸರಿನಲ್ಲಿ ಸಂಪಾದಿಸಿದ ಹಣದಲ್ಲಿ ದಯಾನಂದ್ ವೈಭೋಗದ ಜೀವನ ಸಾಗಿಸುತ್ತಿದ್ದ. ಮೈ ತುಂಬ ಚಿನ್ನಾಭರಣ ಧರಿಸಿ ಐಷರಾಮಿ ಕಾರುಗಳಲ್ಲೇ ಓಡಾಡುತ್ತಿದ್ದ ಆತ, ತನ್ನ ಶ್ರೀಮಂತ ಜೀವನ ಶೈಲಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಲಗಳಲ್ಲಿ ಹಂಚಿಕೊಳ್ಳುತ್ತಿದ್ದ. ಆತನಿಗೆ ಶೋಕಿ ಖಯಾಲಿ ವಿಪರೀತ ಇತ್ತು ಎಂದು ಪೊಲೀಸರು ಹೇಳಿದ್ದಾರೆ.
ಕಾರಿನಲ್ಲೇ ಯುವತಿ ಮೇಲೆ ಅತ್ಯಾಚಾರ
ಸಂತ್ರಸ್ತೆ ಪಿಜಿ ಬಳಿ ಹೋಗಿ ಆಕೆಯನ್ನು ಕಾರಿನಲ್ಲಿ ಕೂರಿಸಿಕೊಂಡು ದಯಾನಂದ್ ತೆರಳಿದ್ದಾನೆ. ಆದರೆ ಪೂಜೆಗೆ ಕರೆದೊಯ್ಯದೆ ಮೈಸೂರು ರಸ್ತೆಗೆ ಕರೆದುಕೊಂಡು ಹೋದ ಆತ, ದಾರಿ ಮಧ್ಯೆ ಕಾರಿನಲ್ಲೇ ಆಕೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಕೃತ್ಯದ ಬಗ್ಗೆ ಯಾರಿಗಾದರೂ ಬಾಯ್ಬಿಟ್ಟರೆ ನಿನ್ನ ಮಾರ್ಫ್ ಮಾಡಿದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಮರ್ಯಾದೆ ಕಳೆಯುವುದಾಗಿ ದಯಾನಂದ್ ಬೆದರಿಸಿದ್ದ. ಬಳಿಕ ಸಂತ್ರಸ್ತೆಯನ್ನು ಬ್ಲ್ಯಾಕ್ಮೇಲ್ ಮಾಡಿ ₹40 ಸಾವಿರ ಸುಲಿಗೆ ಮಾಡಿದ ಆರೋಪಿ, ಆಕೆ ಕೆಲಸ ಮಾಡುವ ಕಂಪನಿ ಬಳಿಗೆ ತೆರಳಿ ಕೂಡ ಬೆದರಿಸಿದ್ದಾನೆ. ಆಗ ಮತ್ತೆ ಆಕೆಯನ್ನು ಹೋಟೆಲ್ಗೆ ಕರೆದೊಯ್ದು ದಯಾನಂದ್ ಲೈಂಗಿಕವಾಗಿ ಶೋಷಣೆ ಮಾಡಿದ್ದ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.ಈ ಲೈಂಗಿಕ ದೌರ್ಜನ್ಯ ಸಹಿಸಲಾರದೆ ಕೊನೆಗೆ ಬಾಗಲಗುಂಟೆ ಠಾಣೆ ಪೊಲೀಸರಿಗೆ ಸಂತ್ರಸ್ತೆ ದೂರು ನೀಡಿದ್ದಳು. ಈ ದೂರನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಮೊಬೈಲ್ ಕರೆಗಳ ಮಾಹಿತಿ ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಮೂಲಗಳು ಹೇಳಿವೆ.