ಜಾರ್ಖಂಡ್‌ ಮನೆ ಕೆಲಸದ ಆಳಿನ ಬಳಿ ಹಣದ ರಾಶಿ!

KannadaprabhaNewsNetwork |  
Published : May 07, 2024, 01:00 AM ISTUpdated : May 07, 2024, 07:51 AM IST
ಹಣದ ರಾಶಿ | Kannada Prabha

ಸಾರಾಂಶ

ಕಾಂಗ್ರೆಸ್‌ ಮಂತ್ರಿಯ ಪಿಎ ನೌಕರನ ಬಳಿ ₹30 ಕೋಟಿ ವಶಪಡಿಸಿಕೊಂಡಿದ್ದು, 6 ಯಂತ್ರಗಳನ್ನು ಬಳಸಿ ಇಡೀ ದಿನ ಎಣಿಸಿದರೂ ಲೆಕ್ಕ ಸಿಗದಷ್ಟು ಹಣದ ರಾಶಿ ಪತ್ತೆಯಾಗಿದೆ.

ರಾಂಚಿ: ಭ್ರಷ್ಟಾಚಾರ ಪ್ರಕರಣದ ಸಂಬಂಧ ಜಾರ್ಖಂಡ್‌ನ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ಬಂಧನವಾದ ಬೆನ್ನಲ್ಲೇ, ಜೆಎಂಎಂ ಮಿತ್ರ ಪಕ್ಷವಾಗಿರುವ ಕಾಂಗ್ರೆಸ್ ಸಚಿವ ಆಲಂಗೀರ್‌ ಆಲಂ ಅವರ ಆಪ್ತ ಕಾರ್ಯದರ್ಶಿಯ ಮನೆಯ ಕೆಲಸದವನ ಬಳಿ 30 ಕೋಟಿ ರು. ಹಣದ ರಾಶಿಯೇ ಪತ್ತೆ ಆಗಿರುವುದು ಸಂಚಲನಕ್ಕೆ ಕಾರಣವಾಗಿದೆ.

ಜಾರ್ಖಂಡ್‌ನ ಅಧಿಕಾರಿಯೊಬ್ಬರ ಮೇಲಿನ ಭ್ರಷ್ಟಾಚಾರದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ಸೋಮವಾರ ಇಲ್ಲಿ ಆಲಂ ಆಪ್ತ ಅಧಿಕಾರಿಯ ಮನೆ ಕೆಲಸದವರ ಮನೆ ಮೇಲೆ ದಾಳಿ ನಡೆಸಿದಾಗ ಬೆಚ್ಚಿ ಬೀಳಿಸುವಷ್ಟು ನಗದು ಸಿಕ್ಕಿದೆ. ಅಲ್ಲದೆ, ಭಾರೀ ಪ್ರಮಾಣದ ಚಿನ್ನಾಭರಣ ಮತ್ತು ಇತರೆ ಮಹತ್ವದ ದಾಖಲೆಗಳು ಲಭ್ಯವಾಗಿವೆ.

ಇದು ರಾಜಕೀಯ ಸಂಚಲನಕ್ಕೆ ಕಾರಣವಾಗಿದ್ದು ಕಾಂಗ್ರೆಸ್‌ ಹಾಗೂ ಇಂಡಿಯಾ ಕೂಟದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಆಗಿದ್ದೇನು?:

ಜಾರ್ಖಂಡ್‌ನ ಗ್ರಾಮೀಣಾಭಿವೃದ್ಧಿ ಇಲಾಖೆಯ ಮಾಜಿ ಮುಖ್ಯ ಎಂಜಿನಿಯರ್‌ ವೀರೇಂದ್ರಕುಮಾರ್ ರಾಮ್‌ ಅವರನ್ನು ಕಳೆದ ವರ್ಷ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ. ಅಧಿಕಾರಿಗಳು ಬಂಧಿಸಿದ್ದರು. ಅಲ್ಲದೆ ರಾಮ್‌ಗೆ ಸೇರಿದ 39 ಕೋಟಿ ರು. ಮೌಲ್ಯದ ಆಸ್ತಿಯನ್ನು ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದರು. ಅದೇ ಪ್ರಕರಣದ ಭಾಗವಾಗಿ ಇ.ಡಿ. ಅಧಿಕಾರಿಗಳ ತಂಡವು ಸೋಮವಾರ ಜಾರ್ಖಂಡ್ ಸಚಿವ, ಕಾಂಗ್ರೆಸ್‌ ಮುಖಂಡ ಆಲಂಗೀರ್‌ ಆಲಂರ ಆಪ್ತ ಕಾರ್ಯದರ್ಶಿ ಸಂಜೀವ್‌ ಲಾಲ್‌ ನಂಟಿನ ಹಲವು ಆಸ್ತಿಗಳ ಮೇಲೆ ದಾಳಿ ನಡೆಸಿದೆ.

ಈ ಪೈಕಿ ಸಂಜೀವ್‌ ಲಾಲ್‌ ಮನೆ ಕೆಲಸದವರ ಮನೆಯಲ್ಲಿ 30 ಕೋಟಿ ರು. ನಗದು ಪತ್ತೆಯಾಗಿದೆ. ನೋಟುಗಳನ್ನು ಎಣಿಸಲು 6 ಯಂತ್ರಗಳನ್ನು ಬಳಸಲಾಗಿದ್ದು, ಎಣಿಕೆ 1 ದಿನದಿಂದ ನಡೆಯುತ್ತಿದೆ. ಅದು ಪೂರ್ಣಗೊಂಡಾಗ ನಗದು ಮೌಲ್ಯ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ.

ನಂಗೇನೂ ಗೊತ್ತಿಲ್ಲ- ಆಲಂ:

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪಕುರ್‌ ಕ್ಷೇತ್ರದ ಕಾಂಗ್ರೆಸ್‌ ಶಾಸಕರೂ ಆಗಿರುವ ಆಲಂಗೀರ್‌ ಆಲಂ ‘ಯಾಕೆ ದಾಳಿ ನಡೆದಿದೆ ಎಂದು ನನಗೆ ಗೊತ್ತಿಲ್ಲ. ಸಂಜೀವ್‌ ಲಾಲ್‌ ನನಗೆ ಸರ್ಕಾರ ನೀಡಿದ ಅಧಿಕಾರಿ. ಈ ಹಿಂದೆ ಅವರು ಇತರೆ ಹಲವು ಸಚಿವರ ಬಳಿಯೂ ಕಾರ್ಯನಿರ್ವಹಿಸಿದ್ದರು’ ಎಂದಷ್ಟೇ ಹೇಳಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ರಾಣಾಗೆ ಏಮ್ಸ್‌ನಲ್ಲಿ ದಯಾಮರಣ ಪ್ರಕ್ರಿಯೆ ಆರಂಭ
‘ಒನ್‌ ಬ್ಯಾಟಲ್‌ ಆಫ್ಟರ್‌ ಅನದರ್‌’ಗೆ ‘ಅತ್ಯುತ್ತಮ ಚಿತ್ರ’ ಆಸ್ಕರ್‌ ಗೌರವ