ಇಂದು ಸಿಜೆಐ ಗವಾಯಿ ನಿವೃತ್ತಿ : ನಾಳೆ ಹೊಸ ಸಿಜೆ ಆಗಿ ಸೂರ್‍ಯಕಾಂತ್‌ ಪ್ರಮಾಣ

KannadaprabhaNewsNetwork |  
Published : Nov 23, 2025, 02:00 AM ISTUpdated : Nov 23, 2025, 05:38 AM IST
cji Gavai

ಸಾರಾಂಶ

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶ ಬಿ.ಆರ್‌.ಗವಾಯಿ ಭಾನುವಾರ ನಿವೃತ್ತಿ ಹೊಂದಲಿದ್ದಾರೆ. ನ್ಯಾ. ಸೂರ್ಯಕಾಂತ್‌ ಅವರು ಹೊಸ ಸಿಜೆ ಆಗಿ ಸೋಮವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ. 6 ತಿಂಗಳು ಕಾಲ ಉನ್ನತ ಹುದ್ದೆಯಲ್ಲಿದ್ದ  ಅವರು, ಈ ಹುದ್ದೆಗೆ ಏರಿದ ಮೊದಲ ಬೌದ್ಧ ಮತ್ತು 2ನೇ ದಲಿತ ವ್ಯಕ್ತಿ ಆಗಿದ್ದರು.

ನವದೆಹಲಿ: ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಾಧೀಶ ಬಿ.ಆರ್‌.ಗವಾಯಿ ಭಾನುವಾರ ನಿವೃತ್ತಿ ಹೊಂದಲಿದ್ದಾರೆ. ನ್ಯಾ. ಸೂರ್ಯಕಾಂತ್‌ ಅವರು ಹೊಸ ಸಿಜೆ ಆಗಿ ಸೋಮವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

6 ತಿಂಗಳು ಕಾಲ ನ್ಯಾಯಾಂಗದ ಉನ್ನತ ಹುದ್ದೆಯಲ್ಲಿದ್ದ ಗವಾಯಿ ಅವರು, ಈ ಹುದ್ದೆಗೆ ಏರಿದ ಮೊದಲ ಬೌದ್ಧ ಮತ್ತು 2ನೇ ದಲಿತ ವ್ಯಕ್ತಿ ಆಗಿದ್ದರು.

ದೇಶದ 52ನೇ ಸಿಜೆ ಆಗಿ ಅಧಿಕಾರ ನಡೆಸಿದ ಗವಾಯಿ ಅವರು ವಕ್ಫ್ ತಿದ್ದುಪಡಿ ಕಾಯ್ದೆಯ ಕೆಲ ಅಂಶಗಳು, ಬುಲ್ಡೋಜರ್‌ ನ್ಯಾಯ- ಹೀಗೆ ಕೆಲವು ವಿವಾದಿತ ಕ್ರಮಗಳಿಗೆ ತಡೆ ನೀಡಿ ಸುದ್ದಿ ಮಾಡಿದ್ದರು. ಜೊತೆಗೆ ಭಗವಾನ್‌ ವಿಷ್ಣು ಬಗ್ಗೆ ಅವರು ಮಾಡಿದ ಟಿಪ್ಪಣಿ ವಿವಾದಕ್ಕೆ ಕಾರಣವಾಗಿತ್ತು.

ಬಂಗಾಳದಲ್ಲಿ ಬಾಬ್ರಿ ಮಸೀದಿ ನಿರ್ಮಾಣ: ಟಿಎಂಸಿ ಶಾಸಕ ವಿವಾದ

ಕೋಲ್ಕತಾ: ‘ಡಿ.6ಕ್ಕೆ ಬಾಬ್ರಿ ಮಸೀದಿ ಧ್ವಂಸದ ವರ್ಷಾಚರಣೆ ಹಿನ್ನೆಲೆಯಲ್ಲಿ ಅದೇ ದಿನ ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ರೀತಿಯಲ್ಲಿಯೇ ಮಸೀದಿ ನಿರ್ಮಾಣಕ್ಕೆ ಶಿಲಾನ್ಯಾಸ ನಡೆಯಲಿದೆ’ ಎಂದು ತೃಣಮೂಲ ಕಾಂಗ್ರೆಸ್‌ ಶಾಸಕ ಹುಮಾಯೂನ್ ಕಬೀರ್‌ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ಕಾರ್ಯಕ್ರಮವೊಂದರಲ್ಲಿ ಈ ಬಗ್ಗೆ ಮಾತನಾಡಿದ್ದ ಅವರು ‘ ಮುರ್ಷಿದಾಬಾದ್‌ನಲ್ಲಿ ಡಿ.6ಕ್ಕೆ ಬಾಬ್ರಿ ಮಸೀದಿ ನಿರ್ಮಾಣಕ್ಕೆ ಶಂಕು ಸ್ಥಾಪನೆ ನಡೆಯಲಿದೆ. 3 ವರ್ಷಗಳಲ್ಲಿ ಪೂರ್ಣ ನಿರ್ಮಾಣವಾಗಲಿದೆ’ ಎಂದಿದ್ದಾರೆ.

ಟಿಎಂಸಿ ಶಾಸಕನ ಹೇಳಿಕೆಗೆ ಬಿಜೆಪಿ ಕಿಡಿಕಾರಿದ್ದು, ‘ಬಾಬ್ರಿ ಮಸೀದಿಯನ್ನು ಪುನಃ ಸ್ಥಾಪಿಸುತ್ತೇವೆ ಎನ್ನುವುದು ತುಷ್ಟೀಕರಣ ರಾಜಕೀಯವಲ್ಲದೆ ಬೇರೇನೂ ಅಲ್ಲ. ಮಸೀದಿಯನ್ನು ನಿರ್ಮಿಸುವುದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ ಸರಿಯಾದ ಸ್ಥಳದಲ್ಲಿರಬೇಕು. ಅವರು ಮಸೀದಿಯನ್ನು ರಾಜಕೀಯಕ್ಕೆ ಬಯಸುತ್ತಿದ್ದಾರೆ’ ಎಂದು ಹೇಳಿದೆ.

ಇತ್ತ ಕಾಂಗ್ರೆಸ್‌ ‘ನಮ್ಮ ಪಕ್ಷ ಅಭಿವೃದ್ಧಿ ವಿಚಾರಗಳ ಬಗ್ಗೆ ಮಾತ್ರ ಗಮನವಹಿಸುತ್ತದೆ’ ಎಂದು ಹೇಳಿ ಅಂತರ ಕಾಯ್ದುಕೊಂಡಿದೆ. ಕಬೀರ್‌ ಇಂತಹ ಹೇಳಿಕೆ ನೀಡುತ್ತಿರುವುದು ಇದೇ ಮೊದಲೇನಲ್ಲ. 2024ರಲ್ಲಿಯೂ ‘ ರಾಜ್ಯದಲ್ಲಿ ಬಾಬ್ರಿ ಮಸೀದಿ ರೀತಿಯಲ್ಲಿಯೇ ಮಸೀದಿ ನಿರ್ಮಿಸುತ್ತೇನೆ’ ಎಂದು ವಿವಾದ ಸೃಷ್ಟಿಸಿದ್ದರು.

ಗೆಲ್ಲಿಸಿದರೆ ಅಭಿವೃದ್ಧಿ, ಇಲ್ದಿದ್ರೆ ಇಲ್ಲ : ಮತದಾರರಿಗೆ ಅಜಿತ್‌ ಪವಾರ್‌ ಧಮ್ಕಿ!

ಪುಣೆ: ‘ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕಿ ಗೆಲ್ಲಿಸಿದರೆ ನಿಮಗೆ ಮಾತು ಕೊಟ್ಟಂತೆ ಅನುದಾನ ನೀಡುತ್ತೇನೆ. ನೀವು ನಮ್ಮನ್ನು ತಿರಸ್ಕರಿಸಿದರೆ ನಾವೂ ಅದನ್ನೇ ಮಾಡುತ್ತೇವೆ. ನಿಮ್ಮ ಬಳಿ ಮತವಿದೆ, ನನ್ನ ಬಳಿ ಹಣವಿದೆ’ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್‌ ಮತದಾರರಿಗೆ ಶುಕ್ರವಾರ ನೇರಾನೇರ ಬೆದರಿಕೆ ಹಾಕಿದ್ದಾರೆ.ಮಾಲೇಗಾಂವ್‌ ನಗರ ಪಂಚಾಯತ್‌ನ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ‘ನೀವು ಎನ್‌ಸಿಪಿಯ ಎಲ್ಲಾ 18 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದರೆ, ನಾನು ಭರವಸೆ ನೀಡಿದ್ದನ್ನು ನೀಡಲು ಬದ್ಧನಾಗಿದ್ದೇನೆ. ಆದರೆ ನೀವು ತಿರಸ್ಕರಿಸಿದರೆ, ನಾನು ಸಹ ತಿರಸ್ಕರಿಸುತ್ತೇನೆ. ನಿಮ್ಮ ಬಳಿ ಮತಗಳಿವೆ, ನನ್ನ ಬಳಿ ಹಣವಿದೆ’ ಎಂದರು.

ಶಬರಿಮಲೆ ಚಿನ್ನಕ್ಕೆ ಕನ್ನ: ಕೇಂದ್ರೀಯ ತನಿಖೆ ಸಾಧ್ಯತೆ

ಕಲ್ಲಿಕೋಟೆ: ಶಬರಿಮಲೆ ದ್ವಾರಪಾಲಕ ಮೂರ್ತಿಗಳು ಹಾಗೂ ದ್ವಾರದ ಚಿನ್ನಕ್ಕೆ ಕನ್ನ ಹಾಕಿದ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ಏಜೆನ್ಸಿಗಳು ವಹಿಸಿಕೊಳ್ಳಬಹುದು ಎಂದು ಕೇಂದ್ರ ಸಚಿವ ಜಾರ್ಜ್‌ ಕುರಿಯನ್‌ ಹೇಳಿದ್ದಾರೆ.

ಶನಿವಾರ ಮಾತನಾಡಿದ ಅವರು, ‘ಕಪ್ಪುಹಣ ಹರಿದಾಟದ ಸಾಧ್ಯತೆ ಇದ್ದರೆ, ಕೇಂದ್ರ ತನಿಖಾ ಸಂಸ್ಥೆಗಳು ಮಧ್ಯ ಪ್ರವೇಶಿಸಬಹುದು. ‘ಪ್ರಕರಣವನ್ನು ಹಣಕಾಸಿನ ಅವ್ಯವಹಾರ ಎಂದು ಎಫ್‌ಐಆರ್‌ ದಾಖಲಿಸಿಕೊಂಡಿದ್ದೇ ಇದಕ್ಕೆ ಕಾರಣ. ಇದು ರಾಜಕೀಯವಾಗುವುದಿಲ್ಲ, ಕಾನೂನಿನಲ್ಲಿಯೇ ಅವಕಾಶವಿದೆ. ಅಂಥವರನ್ನು ಅಯ್ಯಪ್ಪಸ್ವಾಮಿ ಎಂದಿಗೂ ಸುಮ್ಮನೇ ಬಿಡುವುದಿಲ್ಲ’ ಎಂದರು,ಜೊತೆಗೆ ಪ್ರಕರಣದಲ್ಲಿ ಈಗಾಗಲೇ ಬಂಧಿತರಾಗಿರುವವರನ್ನು ‘ನಾಸ್ತಿಕರು’ ಎಂದು ಕರೆದ ಸಚಿವರು, ‘ಬಂಧನವಾದಾಗ ಎಲ್ಲರ ಮುಖದಲ್ಲಿಯೂ ನಗು ಇತ್ತು. ತಮ್ಮ ಸಿದ್ಧಾಂತವನ್ನು ಸಾಧಿಸಿದೆವು ಎಂಬ ಸಾರ್ಥಕತೆ ಅವರಲ್ಲಿತ್ತು. ಆದರೆ ಯಾರೂ ತಲೆಕೆಡಿಸಿಕೊಳ್ಳಬೇಕಿಲ್ಲ. ಅಯ್ಯಪ್ಪ ಸ್ವಾಮಿ ಯಾರನ್ನೂ ಸುಮ್ಮನೇ ಬಿಡುವುದಿಲ್ಲ’ ಎಂದರು.

ಶಬರಿಮಲೆ ಜನಸಂದಣಿ ನಿಯಂತ್ರಣಕ್ಕೆ ಆರ್‌ಎಎಫ್‌ ನಿಯೋಜನೆ

ಶಬರಿಮಲೆ (ಕೇರಳ): ಇಲ್ಲಿನ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಭಾರಿ ಜನದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಕೇರಳ ಸರ್ಕಾರವು ಕ್ಷಿಪ್ರ ಕಾರ್ಯಪಡೆಯನ್ನು (ಆರ್‌ಎಎಫ್‌) ನಿಯೋಜಿಸಿದೆ.ಕೊಯಮತ್ತೂರಿನ ಕೇಂದ್ರ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌)ನ 140 ಜನರ ತಂಡವು ಈಗಾಗಲೇ ಇಲ್ಲಿಗೆ ಬಂದಿದ್ದು, ಮೂರು ಪಾಳಿಯಲ್ಲಿ 32 ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ. ಇವರೊಂದಿಗೆ 10 ಜನರ ತುರ್ತು ಸ್ಪಂದನ ತಂಡವೂ (ಕ್ಯೂಆರ್‌ಟಿ) ಸಹ ಸನ್ನಿಧಾನದಲ್ಲಿರಲಿದ್ದು, 24 ತಾಸೂ ತುರ್ತು ಸ್ಥಿತಿಗಳಲ್ಲಿ ಕಾರ್ಯನಿರ್ವಹಿಸಲಿದೆ. 2 ತಿಂಗಳು ಕಾಲ ನಡೆಯುವ ಮಂಡಲ-ಮಕರವಿಳಕ್ಕೂ ಉತ್ಸವದ ಅವಧಿವರೆಗೂ ಈ ತಂಡ ಇಲ್ಲಿಯೇ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.
Read more Articles on

Recommended Stories

ಶಬರಿಮಲೆಗೆ ಸ್ತ್ರೀ ಪ್ರವೇಶ ಬೇಡ : ಸುಪ್ರೀಂಗೆ ಕೇರಳ
ಇಲ್ಲೂ ಹಿಂಸೆ ಆದೀತು ಹುಷಾರ್‌: ರಾಜ್ಯಗಳಿಗೆ ಕೇಂದ್ರದಿಂದ ಅಲರ್ಟ್