ಚಿಕ್ಕಬಳ್ಳಾಪುರ : ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲುಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ ನಂಬುತ್ತಾರೆ, ಸತ್ಯವನ್ನಲ್ಲ. ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿರುವ ಬಿಜೆಪಿಯವರಿಗೆ ಸತ್ಯ ಹೇಳಿ ಗೊತ್ತೇ ಇಲ್ಲ. ಅವರು ನಂಬುತ್ತಾರೋ ಬಿಡುತ್ತಾರೋ ನಾವೆಲ್ಲಾ ಒಟ್ಟಾಗಿದ್ದೇವೆ. ಮುಂದಿನ ಐದು ವರ್ಷ ನಾನೇ ಸಿಎಂ. ನಮ್ಮ ಸರ್ಕಾರ ಬಂಡೆಯಂತೆ ಐದು ವರ್ಷ ಆಡಳಿತ ನಡೆಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ನಂದಿಗಿರಿಧಾಮದಲ್ಲಿ ಸಂಪುಟ ಸಭೆ ಹಿನ್ನೆಲೆಯಲ್ಲಿ ನಂದಿಯ ಭೋಗ ನಂದೀಶ್ವರ ದೇವಾಲಯಕ್ಕೆ ಸಚಿವರು, ಶಾಸಕರೊಂದಿಗೆ ಆಗಮಿಸಿ ಭೋಗನಂದೀಶ್ವರನಿಗೆ ಪೂಜೆ ಸಲ್ಲಿಸಿದ ನಂತರ ನಂದಿ ಬೆಟ್ಟಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು.
ಬಿಜೆಪಿ ಅಧಿಕಾರದಲ್ಲಿದ್ದಾಗ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದ ಸಿಎಂ, ನೀರಾವರಿ, ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ಶಿಕ್ಷಣ, ಆರೋಗ್ಯ ಕ್ಷೇತ್ರಗಳಲ್ಲಿ ಏನು ಮಾಡಿದ್ದಾರೆ. ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿತ್ತು. ಎಚ್.ಡಿ.ಕುಮಾರಸ್ವಾಮಿಯವರು ಒಂದು ವರ್ಷ ಎರಡು ತಿಂಗಳು ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರದಲ್ಲಿದ್ದರು. ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರಲ್ಲದೇ, ಬರೀ ಸುಳ್ಳು ಹೇಳಿಕೊಂಡು ಜನರನ್ನು ತಪ್ಪುದಾರಿಗೆ ಎಳೆಯುವ ಪ್ರಯತ್ನವನ್ನು ಬಿಜೆಪಿಯವರು ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಹೊಸಪೇಟೆಯಲ್ಲಿ ನಡೆದ ನಮ್ಮ ಸರ್ಕಾರದ 2 ವರ್ಷದ ಸಾಧನಾ ಸಮಾವೇಶದಲ್ಲಿ ಮಳೆಯಿದ್ದರೂ ಸುಮಾರು ಮೂರು ಲಕ್ಷಕ್ಕಿಂತ ಹೆಚ್ಚು ಜನ ಸೇರಿದ್ದರು. ಜನರು ಸರ್ಕಾರದ ಪರವಾಗಿ ಸುಮ್ಮನೆ ಬರುತ್ತಾರೆಯೇ ಎಂದು ಪ್ರಶ್ನಿಸಿದರು.
ಐದು ವರ್ಷ ನಾನೇ ಮುಖ್ಯಮಂತ್ರಿ:
ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೇನೆ ಎಂದು ಸ್ಪಷ್ಟಪಡಿಸಿದ ಸಿಎಂ, ನವೆಂಬರ್ನಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರು ಇಳಿಯಲಿದ್ದಾರೆ ಎಂಬ ಬಿಜೆಪಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಬಿಜೆಪಿ ನಮ್ಮ ಹೈಕಮಾಂಡ್ ಅಲ್ಲ. ಆರ್.ಅಶೋಕ್, ವಿಜಯೇಂದ್ರ, ಛಲವಾದಿ ನಾರಾಯಣಸ್ವಾಮಿ ಹೇಳಿದೆಲ್ಲಾ ಸತ್ಯವಲ್ಲ ಎಂದರು.
ಸಚಿವ ಸ್ಥಾನ, ವರಿಷ್ಠರಿಂದ ಅಂತಿಮ ತೀರ್ಮಾನ:
ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸಚಿವರಾಗುವ ಅಧಿಕಾರವಿದೆ. ಸಚಿವ ಸ್ಥಾನದ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. 142 ಜನ ನಮ್ಮ ಪಕ್ಷದವರಿದ್ದಾರೆ, 34 ಜನರನ್ನು ಮಾತ್ರ ಸಚಿವರನ್ನಾಗಿಸಬಹುದು, ಎಲ್ಲರನ್ನು ಮಾಡಲಾಗುವುದಿಲ್ಲ ಎಂದು ಸಿಎಂ ತಿಳಿಸಿದರು.