ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) ಮಾಜಿ ಮುಖ್ಯಸ್ಥ, ಭಾರತೀಯ ತನಿಖಾ ಸಂಸ್ಥೆಗಳು ಆರ್ಥಿಕ ಅಪರಾಧಿ ಎಂದು ಘೋಷಿಸಿರುವ ಲಲಿತ್ ಮೋದಿ, ಇದೀಗ ‘ತೆರಿಗೆ ವಂಚಕರ ಸ್ವರ್ಗ’ ಎಂದೇ ಖ್ಯಾತವಾಗಿರುವ ದಕ್ಷಿಣ ಪೆಸಿಫಿಕ್ ದ್ವೀಪ ದೇಶವಾಗಿರುವ ವನುವಾಟು ದ್ವೀಪರಾಷ್ಟ್ರದ ಪೌರತ್ವ ಪಡೆದಿದ್ದಾರೆ.
ಈ ಬಗ್ಗೆ ಮಾತನಾಡಿರುವ ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ‘ಮೋದಿ ಕೋರಿಕೆ ಪರಿಶೀಲಿಸಲಾಗುವುದು. ಅವರು ದಕ್ಷಿಣ ಪೆಸಿಫಿಕ್ ದ್ವೀಪ ರಾಷ್ಟ್ರವಾದ ವನವಾಟುವಿನ ಪೌರತ್ವವನ್ನು ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕಾನೂನಿನಡಿಯಲ್ಲಿ ಅವರ ವಿರುದ್ಧ ಪ್ರಕರಣವನ್ನು ಮುಂದುವರಿಸುತ್ತೇವೆ’ ಎಂದಿದ್ದಾರೆ.
ವನವಾಟು ಆಯ್ಕೆ ಏಕೆ?:ವನವಾಟು ದೇಶವು ಗೋಲ್ಡನ್ ಪಾಸ್ಪೋರ್ಟ್ ಎಂಬ ಯೋಜನೆಯನ್ನು ಹೊಂದಿದ್ದು, ಇದರಲ್ಲಿ ಶ್ರೀಮಂತರು ಹಣ ಕೊಟ್ಟು ಪೌರತ್ವವನ್ನು ಪಡೆಯಬಹುದು. ಇಲ್ಲಿ ಯಾವುದೇ ವೈಯಕ್ತಿಕ ತೆರಿಗೆ ಇಲ್ಲ. ಅಂದರೆ ಎಲ್ಲಿಯೇ ಸಂಪಾದಿಸಿದರೂ ವನವಾಟು ಸರ್ಕಾರಕ್ಕೆ ತೆರಿಗೆ ಕಟ್ಟಬೇಕಾಗಿಲ್ಲ. ಇದೇ ಕಾರಣಕ್ಕೆ ಲಲಿತ್ ಮೋದಿ ವನವಾಟು ದೇಶವನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ವನವಾಟು ಪಾಸ್ಪೋರ್ಟ್ ಹೊಂದಿದ್ದರೆ ಬ್ರಿಟನ್, ಯುರೋಪಿಯನ್ ರಾಷ್ಟ್ರಗಳು ಸೇರಿದಂತೆ 120ಕ್ಕೂ ಹೆಚ್ಚು ದೇಶಗಳಿಗೆ ವೀಸಾ ಇಲ್ಲದೆ ಪ್ರವೇಶ ಮಾಡಬಹುದು.