ಕಚತೀವು ದ್ವೀಪ ಲಂಕೆಗೆ ಇಂದಿರಾ ಕೊಟ್ಟಿದ್ದು ಹೇಗೆ: ರಹಸ್ಯ ಬಹಿರಂಗ

KannadaprabhaNewsNetwork |  
Published : Apr 01, 2024, 12:52 AM ISTUpdated : Apr 01, 2024, 04:21 AM IST
ಕಚತೀವು | Kannada Prabha

ಸಾರಾಂಶ

ಭಾರತ ಮತ್ತು ಶ್ರೀಲಂಕಾ ನಡುವೆ ಇರುವ  ಕಚತೀವು ದ್ವೀಪವನ್ನು ಅಂದಿನ ಪಂ। ಜವಾಹರಲಾಲ್‌ ನೆಹರು ಹಾಗೂ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್‌ ಸರ್ಕಾರಗಳು ತಮ್ಮ ನಿರ್ಲಕ್ಷ್ಯದಿಂದ ಶ್ರೀಲಂಕಾಗೆ ಬಿಟ್ಟುಕೊಟ್ಟಿದ್ದವು ಎಂಬ ‘ರಹಸ್ಯ’ ವಿಷಯವೊಂದು  ಬಯಲಾಗಿದೆ.

ನವದೆಹಲಿ: ಭಾರತ ಮತ್ತು ಶ್ರೀಲಂಕಾ ನಡುವೆ ಇರುವ ಪಾಕ್‌ ಜಲಸಂಧಿಯಲ್ಲಿ ಕಚತೀವು ದ್ವೀಪವನ್ನು ಅಂದಿನ ಪಂ। ಜವಾಹರಲಾಲ್‌ ನೆಹರು ಹಾಗೂ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್‌ ಸರ್ಕಾರಗಳು ತಮ್ಮ ನಿರ್ಲಕ್ಷ್ಯದಿಂದ ಶ್ರೀಲಂಕಾಗೆ ಬಿಟ್ಟುಕೊಟ್ಟಿದ್ದವು ಎಂಬ ‘ರಹಸ್ಯ’ ವಿಷಯವೊಂದು ಮಾಹಿತಿ ಹಕ್ಕು ಅಡಿ ಕೇಳಲಾಗಿದ್ದ ಪ್ರಶ್ನೆಯೊಂದರಿಂದ ಬಯಲಾಗಿದೆ. 

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಸಲ್ಲಿಸಿದ್ದ ಆರ್‌ಟಿಐ ಅರ್ಜಿಯಲ್ಲಿ ಈ ವಿಷಯವನ್ನು ವಿವರವಾಗಿ ತಿಳಿಸಲಾಗಿದೆ. ‘ಭಾರತದ ಮೊದಲ ಪ್ರಧಾನಿ ಪಂ। ಜವಾಹರಲಾಲ್‌ ನೆಹರು ಕಾಲದಿಂದಲೂ ಕಚತೀವು ದ್ವೀಪದ ವಿಚಾರದಲ್ಲಿ ಕೇಂದ್ರ ಸರ್ಕಾರ ನಿರ್ಲಕ್ಷ್ಯ ಧೋರಣೆಯನ್ನೇ ತಾಳುತ್ತಾ ಬಂದಿತ್ತು. 1974ರಲ್ಲಿ ಅಧಿಕೃತವಾಗಿ ಆ ದ್ವೀಪವನ್ನು ಶ್ರೀಲಂಕಾಗೆ ಬಿಟ್ಟುಕೊಟ್ಟಿತು’ ಎಂದು ಉಲ್ಲೇಖಿಸಲಾಗಿದೆ. 

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ತಮಿಳುನಾಡಿನಲ್ಲಿ ಛಾಪು ಮೂಡಿಸಲು ಯತ್ನ ನಡೆಸುತ್ತಿದೆ. ಇಂಥ ಸಂದರ್ಭದಲ್ಲಿ ಬಯಲಾದ ಈ ವಿಚಾರವು ಬಿಜೆಪಿ ಹಾಗೂ ವಿಪಕ್ಷಗಳ ನಡುವೆ ‘ಹಣಾಹಣಿ ವಿಷಯ’ವಾಗಿ ಮಾರ್ಪಾಟಾಗುವುದು ಖಚಿತವಾಗಿದೆ.

ಉತ್ತರದಲ್ಲಿ ಏನಿದೆ?:ಕಚತೀವು ದ್ವೀಪವನ್ನು ಬ್ರಿಟಿಷರು ರಾಮನಾಥಪುರದ ರಾಜನಿಗೆ 1875ರಲ್ಲಿ ಜಮೀನ್ದಾರಿ ಕಾಯ್ದೆಯಡಿ ಆತನ ಹೆಸರಿಗೆ ಬರೆದುಕೊಟ್ಟಿದ್ದರು. ಆತ ಆಗ ಸಿಲೋನ್‌ ಎಂದು ಕರೆಯಲಾಗುತ್ತಿದ್ದ ಶ್ರೀಲಂಕಾಗೆ ಯಾವುದೇ ಕಪ್ಪಕಾಣಿಕೆಯನ್ನು ನೀಡದೆ ರಾಜ್ಯಭಾರ ಮಾಡುತ್ತಿದ್ದನು. ಆದರೆ ಭಾರತಕ್ಕೆ ಸ್ವಾತಂತ್ರ್ಯ ದೊರೆತ ಬಳಿಕ ಭಾರತೀಯ ನೌಕಾಪಡೆಯು ಸಿಲೋನ್‌ ವಾಯುಪಡೆಯು ಕಚತೀವುನಲ್ಲಿ ಸಮರಾಭ್ಯಾಸ ಮಾಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿತು. ಈ ವೇಳೆ ಕಚತೀವು ದ್ವೀಪದ ಮೇಲೆ ಸಿಲೋನ್‌ ತನ್ನ ಹಕ್ಕು ಸಾಧಿಸಲು ಪ್ರಾರಂಭಿಸಿತು.‘ಬ್ರಿಟಿಷರು ಮತ್ತು ಚೀನೀಯರು ರಚಿಸಿದ ಭೂಪಟದಲ್ಲಿ ಕಚತೀವು ದ್ವೀಪ ಶ್ರೀಲಂಕಾದಲ್ಲೇ ಇದೆ. ಹೀಗಾಗಿ ಅದು ನಮಗೇ ಸೇರಬೇಕು’ ಎಂದು ಶ್ರೀಲಂಕಾ ಪ್ರತಿಪಾದಿಸಿ 1955ರ ಅಕ್ಟೋಬರ್‌ನಲ್ಲಿ ಆ ಪ್ರದೇಶದಲ್ಲಿ ಸಮರಾಭ್ಯಾಸವನ್ನೂ ನಡೆಸಿತು. 

ಬಳಿಕ ಪಂ। ನೆಹರು ಸಹ 1960ರಲ್ಲಿ ಲೋಕಸಭೆಯಲ್ಲಿ ಉತ್ತರ ನೀಡಿ, ‘ಕಚತೀವು ಎಂಬಂತಹ ಸಣ್ಣ ದ್ವೀಪದ ಕುರಿತು ತಕರಾರು ತೆಗೆಯಲು ನಮಗೆ ಆಸಕ್ತಿ ಇಲ್ಲ. ಭಾರತವು ಆ ಪ್ರದೇಶದ ಮೇಲೆ ಹಕ್ಕು ಸಾಧಿಸುವುದನ್ನು ಕೈಬಿಡುತ್ತದೆ’ ಎಂದು ಘೋಷಿಸಿದರು.‘ಬಳಿಕ ಇಂದಿರಾ ಗಾಂಧಿ 1968ರಲ್ಲಿ ಪ್ರಧಾನಿಯಾಗಿದ್ದಾಗ ಅದನ್ನು ಶ್ರೀಲಂಕೆಗೆ ಹಸ್ತಾಂತರಿಸಲು ಕಾನೂನು ಪ್ರಕ್ರಿಯೆಯನ್ನು ಆರಂಭಿಸಿ ಮದ್ರಾಸ್‌ ಸರ್ಕಾರದ ಅಭಿಪ್ರಾ ಕೇಳಿದರು. ಆಗ ಮುಖ್ಯಮಂತ್ರಿಯಾಗಿದ್ದ ಎಂ.ಕರುಣಾನಿಧಿ ಸಮಂಜಸ ಉತ್ತರ ಕೊಟ್ಟರೂ ಸಹ ಕೇಂದ್ರ ಸರ್ಕಾರ ‘ಸಾಕ್ಷ್ಯಾಧಾರ ಕೊರತೆ’ ಎಂದು ಪರಿಗಣಿಸಿ 1974ರಲ್ಲಿ ಆ ಪ್ರದೇಶವನ್ನು ಶ್ರೀಲಂಕೆಗೆ ಅಧಿಕೃತವಾಗಿ ಹಸ್ತಾಂತರಿಸಿತು’ ಎಂದು ಆರ್‌ಟಿಐ ಉತ್ತರದಲ್ಲಿ ವಿವರಿಸಲಾಗಿದೆ.

ಎಲ್ಲಿದೆ ಕಚತೀವು ದ್ವೀಪ:ಕಚತೀವು ದ್ವೀಪವು ಪಾಕ್‌ ಜಲಸಂಧಿಯಲ್ಲಿದ್ದು, ಸುಮಾರು 1.9 ಚದರ ಕಿ.ಮೀ. ವಿಸ್ತೀರ್ಣವನ್ನು ಹೊಂದಿದೆ. ಇದು ನಿರ್ಜನ ದ್ವೀಪವಾಗಿದ್ದು, ಕೇವಲ ಚರ್ಚ್‌ವೊಂದರ ಅವಶೇಷ ಮಾತ್ರ ಉಳಿದುಕೊಂಡಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಕ್ಯಾನ್ಸರ್‌ ಅಂಶದ ಆತಂಕ: ದೇಶವ್ಯಾಪಿ ಮೊಟ್ಟೆ ಟೆಸ್ಟ್‌
ವೈದ್ಯೆಯ ಹಿಜಾಬ್‌ ಎಳೆದ ಸಿಎಂ ನಿತೀಶ್‌: ವಿವಾದ