ಗೌಡ್ರು ಕುಟುಂಬವಾದಿ ಆಗಿದ್ದರೆ ಸಿದ್ದುಗೆ ಕುರ್ಚಿಸಿಗ್ತಿರಲಿಲ್ಲ: ಎಚ್ಡಿಕೆ

KannadaprabhaNewsNetwork |  
Published : Feb 23, 2026, 01:45 AM IST
ಎಚ್‌ಡಿಕೆ | Kannada Prabha

ಸಾರಾಂಶ

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಕುಟುಂಬವಾದಿಗಳು. ದೇವೇಗೌಡರ ಕುಟುಂಬ ಬಿಟ್ಟು ಒಕ್ಕಲಿಗರು ರಾಜ್ಯದಲ್ಲಿ ಸಿಎಂ ಆದರೆ ಅದು ಕಾಂಗ್ರೆಸ್‌ನಿಂದ ಮಾತ್ರ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಒಕ್ಕಲಿಗರ ಮೇಲೆ ನಿಮಗಿರುವ ಪ್ರೀತಿ ತೋರಿಸಲು ಇದು ಸಕಾಲ. ಕೂಡಲೇ ಕುರ್ಚಿ ತ್ಯಜಿಸಿ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಅವರು ಒತ್ತಾಯಿಸಿದ್ದಾರೆ.

ಒಕ್ಕಲಿಗರ ಬಗ್ಗೆ ಪ್ರೇಮ ಇದ್ದರೆ ಸಿಎಂ ಹುದ್ದೆ ಕುರಿತಒಪ್ಪಂದದ ಬಗ್ಗೆ ಹೇಳಿ, ಮುಖ್ಯಮಂತ್ರಿ ಸ್ಥಾನ ತ್ಯಜಿಸಿಸಚಿವ ಇರಲಿ, ಸಿದ್ದು ಬೋರ್ಡ್‌ ಅಧ್ಯಕ್ಷ ಕೂಡ ಆಗ್ತಿರಲಿಲ್ಲ

ಸಿದ್ದರಾಮಯ್ಯ ಅವರು ಕುರ್ಚಿಗಾಗಿ ಜಾತಿ ಎಳೆದು ತಂದಿದ್ದಾರೆ ಎಂದು ನಾನು ಹೇಳಿದ್ದು ತಮಾಷೆಗೆ ಅಲ್ಲ

ಅವರಿಗೆ ಸಿಕ್ಕಿರುವ ಅಧಿಕಾರ, ಸಾಮಾಜಿಕ ನ್ಯಾಯದ ಹರಿಕಾರ ಎಂಬ ಪೋಷಾಕು ಗೌಡರು ಕೊಟ್ಟ ದೇಣಿಗೆರಾಜಕೀಯ ಶಕ್ತಿ, ಬದುಕು ಕೊಟ್ಟ ದೇವೇಗೌಡರ ಕಡೆ ಸಿದ್ದರಾಮಯ್ಯ ಬೊಟ್ಟು ಮಾಡುವುದು ಆಘಾತಕಾರಿ

ಗೌಡರು ಕುಟುಂಬವಾದಿ ಆಗಿದ್ದರೆ ಒಂದು ನಿಗಮದ ಅಧ್ಯಕ್ಷ ಹುದ್ದೆಯೂ ಸಿದ್ದರಾಮಯ್ಯ ಅವರಿಗೆ ಸಿಗುತ್ತಿರಲಿಲ್ಲ

ರಾಜಕೀಯ ಸ್ವಾರ್ಥಕ್ಕೆ 13 ನಾಯಕರ ಹೆಸರು ಹೇಳಿದ್ದೀರಿ. ಅವರೆಲ್ಲ ನೆರಳು ಕೊಟ್ಟ ವೃಕ್ಷಕ್ಕೆ ಕೊಡಲಿ ಹಾಕಿದವರು

---ಕನ್ನಡಪ್ರಭ ವಾರ್ತೆ ಬೆಂಗಳೂರು

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಕುಟುಂಬವಾದಿಗಳು. ದೇವೇಗೌಡರ ಕುಟುಂಬ ಬಿಟ್ಟು ಒಕ್ಕಲಿಗರು ರಾಜ್ಯದಲ್ಲಿ ಸಿಎಂ ಆದರೆ ಅದು ಕಾಂಗ್ರೆಸ್‌ನಿಂದ ಮಾತ್ರ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಒಕ್ಕಲಿಗರ ಮೇಲೆ ನಿಮಗಿರುವ ಪ್ರೀತಿ ತೋರಿಸಲು ಇದು ಸಕಾಲ. ಕೂಡಲೇ ಕುರ್ಚಿ ತ್ಯಜಿಸಿ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಅವರು ಒತ್ತಾಯಿಸಿದ್ದಾರೆ.

‘ಸಿದ್ದರಾಮಯ್ಯ ಅವರು ಕುರ್ಚಿಗಾಗಿ ಜಾತಿ ಎಳೆದು ತಂದಿದ್ದಾರೆ ಎಂದು ನಾನು ತಮಾಷೆಗೆ ಹೇಳಿದ್ದಲ್ಲ. ಇವತ್ತು ನಿಮಗೆ (ಸಿದ್ದರಾಮಯ್ಯ) ಸಿಕ್ಕಿರುವ ಅಧಿಕಾರ, ಸಾಮಾಜಿಕ ನ್ಯಾಯದ ಹರಿಕಾರ ಎಂಬ ಪೋಷಾಕು ದೇವೇಗೌಡರು ಕೊಟ್ಟಿರುವ ದೇಣಿಗೆ’ ಎಂದೂ ತಿರುಗೇಟು ನೀಡಿದ್ದಾರೆ.

‘ಸಾಮಾಜಿಕ ನ್ಯಾಯದ ಸೋಗುಗಾರ, ಸಾಮಾಜಿಕ ನ್ಯಾಯದ ಸಂಹಾರಿ ನೀವು. ನಿಮಗೆ ರಾಜಕೀಯ ಶಕ್ತಿ-ಬದುಕು ಕೊಟ್ಟ ದೇವೇಗೌಡರ ಕಡೆ ಬೊಟ್ಟು ಮಾಡುವುದು ಆಘಾತಕಾರಿ. ನೀವೂ ದೇವೇಗೌಡರ ಸಾಮಾಜಿಕ ನ್ಯಾಯದ ಫಲ ಮತ್ತು ಫಲಾನುಭವಿ. ದೇವೇಗೌಡರು ಸ್ವಜಾತಿ, ಕುಟುಂಬ ಎಂದು ಅಂದು ಭಾವಿಸಿದ್ದರೆ ನೀವು ಹಣಕಾಸು ಮಂತ್ರಿ ಅಲ್ಲ, ಕನಿಷ್ಠ ಒಂದು ನಿಗಮದ ಅಧ್ಯಕ್ಷಗಿರಿಯೂ ನಿಮಗೆ ದಕ್ಕುತ್ತಿರಲಿಲ್ಲ’ ಎಂದು ಸಾಮಾಜಿಕ ಜಾಲತಾಣದ ಮೂಲಕ ಕುಮಾರಸ್ವಾಮಿ ಕುಟುಕಿದ್ದಾರೆ.

‘ನೀವು ಪಟ್ಟಿ ಮಾಡಿರುವ ಒಕ್ಕಲಿಗ ನಾಯಕರ ಹೆಸರುಗಳನ್ನು ಓದಿದೆ. ಪಾಪ, ನೀವು ಅವರ ಹೆಸರನ್ನು ಉಲ್ಲೇಖಿಸಿ ಅವರನ್ನೂ ಅಪಹಾಸ್ಯ ಮಾಡಿದ್ದೀರಿ. ನೀವೂ ಅಪಹಾಸ್ಯ ಮತ್ತು ನಗೆಪಾಟಲಿಗೀಡಾಗಿದ್ದೀರಿ. ನಿಮ್ಮ ರಾಜಕೀಯ ಸ್ವಾರ್ಥಕ್ಕೆ ಆ 13 ಜನರ ಶೆಲ್ಟರ್‌ ಪಡೆದಿದ್ದೀರಿ. ಹಾಗಾದರೆ, ಅವರೆಲ್ಲರೂ ದೇವೇಗೌಡರಿಂದ ಅಧಿಕಾರ ಅನುಭವಿಸಲೇ ಇಲ್ಲವೇ? ಅವರೆಲ್ಲರೂ ನಿಮ್ಮಂತೆಯೇ ದೇವೇಗೌಡರ ಶ್ರಮ, ತ್ಯಾಗದಿಂದ ಅಧಿಕಾರ ಉಂಡು, ಪೊಗದಸ್ತಾಗಿ ಬೆಳೆದು ಬೇಲಿ ಹಾರಿದವರು. ನೀವು ಹೇಳಿದಂತೆ ಕುಟುಂಬವೇ ಮಿಗಿಲು ಎಂದು ಗೌಡರು ಭಾವಿಸಿದ್ದರೆ ನೀವೂ ಸೇರಿ ಯಾರೊಬ್ಬರೂ ಶಾಸಕ, ಮಂತ್ರಿ, ಸಂಸದ ಆಗುತ್ತಲೇ ಇರಲಿಲ್ಲ. ನೀವೆಲ್ಲರೂ ನೆರಳು ಕೊಟ್ಟ ವೃಕ್ಷಕ್ಕೆ ನಿರ್ದಯದಿಂದ ಕೊಡಲಿ ಹಾಕಿದಿರಿ. ಉಂಡು ಹೋದರಿ, ಕೊಂಡೂ ಹೋದಿರಿ’ ಎಂದು ಟಾಂಗ್‌ ನೀಡಿದ್ದಾರೆ.

ಎಸ್‌ಎಂಕೆ ಹೆಸರು ಹೇಳುವ ಯೋಗತ್ಯೆ ಇಲ್ಲ:

ನಿಮ್ಮ ಸ್ವಾರ್ಥಕ್ಕೆ ಜಾತಿ ಎಳೆದು ತಂದಂತೆ ಹಿರಿಯರಾದ ಕೆಂಗಲ್ ಹನುಮಂತಯ್ಯ, ಕಡಿದಾಳ್ ಮಂಜಪ್ಪ, ಎಸ್.ಎಂ.ಕೃಷ್ಣ ಅವರನ್ನು ಏಕೆ ಎಳೆದು ತರುತ್ತೀರಿ? ಎಸ್.ಎಂ.ಕೃಷ್ಣ ಅವರ ಹೆಸರೇಳುವ ಸಾಸಿವೆ ಕಾಳಷ್ಟು ಯೋಗ್ಯತೆ, ನೈತಿಕತೆ ನಿಮಗಿದೆಯೇ? ಹಿ ಈಸ್‌ ಅನ್‌ಪಾಲಿಷ್ಡ್‌ ಡೈಮಂಡ್‌ ಎಂದು ಸೋನಿಯಾ ಗಾಂಧಿ ಅವರ ಮುಂದೆ ಹೇಳಿ ನೀವು ಕಾಂಗ್ರೆಸ್‌ ಮೆಟ್ಟಿಲು ಹತ್ತಲು ಕಾರಣರಾದ ಎಸ್.ಎಂ.ಕೃಷ್ಣ ಅವರನ್ನು ಎಷ್ಟು ಕ್ರೂರವಾಗಿ ವಂಚಿಸಿದಿರೆನ್ನುವುದು ಜಗತ್ತು ಬಲ್ಲ ಸತ್ಯ. ರಾಜಕೀಯದ ಕಡೆಗಾಲದಲ್ಲಿ ಅವರನ್ನು ನೀವೆಷ್ಟು ತುಚ್ಛವಾಗಿ ನಡೆಸಿಕೊಂಡಿರಿ ಎನ್ನುವುದನ್ನೂ ಜನ ಮರೆತಿಲ್ಲ. ಅನ್‌ಪಾಲಿಷ್ಡ್‌ ಡೈಮಂಡ್‌ ಕೃಷ್ಣ ಅವರಿಗೆ ಚೂರಿ ಹಾಕಿದ್ದನ್ನು ಎಲ್ಲರೂ ಬಲ್ಲರು ಎಂದು ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.

ಒಕ್ಕಲಿಗ ನಾಯಕರ ಬಗ್ಗೆ ಉದಾರತೆ ತೋರಿ:

ಒಕ್ಕಲಿಗ ಸಮುದಾಯಕ್ಕೆ ಸಮರ್ಥ ನಾಯಕತ್ವ ನೀಡುವ ಕಾಂಗ್ರೆಸ್‌ ಉದಾರತೆಯನ್ನು ನಾನು ಸ್ವಾಗತಿಸುವೆ. ಈ ಉದಾರತೆ ನಿಮಗೂ ಬೇಕಲ್ಲವೇ? ಈಗ ನೀವು ಉದಾರತೆ ತೋರಬೇಕು. ಎರಡನೇ ಅವಧಿಗೆ ನೀವು ಸಿಎಂ ಆಗುವ ಮುನ್ನ ಆಗಿದ್ದ ಅಗ್ರಿಮೆಂಟ್‌ ಬಗ್ಗೆ ಬಹಿರಂಗವಾಗಿ ಹೇಳುವ ಉದಾರತೆ ತೋರಿ. ದಿಲ್ಲಿಯಲ್ಲಿ ನಿಮ್ಮಿಬ್ಬರ ನಡುವೆ ಆಗಿದ್ದ ಆ ಅಗ್ರಿಮೆಂಟ್‌ಗೆ ಸಾಕ್ಷಿ ಆಗಿದ್ದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ವೇಣುಗೋಪಾಲ್, ಸುರ್ಜಿವಾಲಾಗೆ ನಿಮ್ಮ ಸಾಮಾಜಿಕ ನ್ಯಾಯ, ಒಕ್ಕಲಿಗ ಪ್ರೀತಿಯ ಪರಾಕಾಷ್ಠೆ ಈಗೀಗ ಅರ್ಥವಾಗಿದೆ ಎಂದು ಭಾವಿಸುತ್ತೇನೆ. ಅವರ ಮಾನಸಿಕ ಸ್ವಾಸ್ಥ್ಯ ಸರಿ ಇದೆ ನಾನು ನಂಬಿದ್ದೇನೆ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಸಮರ್ಥರ ರಾಜಕೀಯ ನರಮೇಧ:

ನಿಮ್ಮ ಸಾಮಾಜಿಕ ನ್ಯಾಯಕ್ಕೆ ಅಂತಃಕರಣವಿಲ್ಲ. ಇದ್ದಿದ್ದರೆ ನಿಮಗಿಂತ ಮೊದಲೇ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಆಗಬೇಕಿತ್ತು. ಇದ್ದ ಪ್ರತಿಪಕ್ಷ ಸ್ಥಾನವನ್ನೂ ಕಿತ್ತುಕೊಂಡು ಅವರನ್ನು ಅಪಮಾನಿಸಿ ದಿಲ್ಲಿಗೆ ಓಡಿಸಿದಿರಿ. ಇನ್ನೊಬ್ಬ ದಲಿತ ನಾಯಕ ಡಾ.ಜಿ.ಪರಮೇಶ್ವರ್ ಅವರನ್ನು ನಿಮ್ಮ ದಾರಿಗೆ ಅಡ್ಡ ಬರುತ್ತಾರೆಂದು ಚುನಾವಣೆ ಕಣದಲ್ಲೇ ಮುಗಿಸಿದಿರಿ, ನಿಮ್ಮನ್ನು ಕಾಂಗ್ರೆಸ್ಸಿಗೆ ಕರೆತಂದ ಹೆಚ್.ವಿಶ್ವನಾಥ್‌ ಅವರನ್ನು ಎಲ್ಲಿ ಇಟ್ಟಿದ್ದೀರಿ? ನೀವು ಸಿಎಂ ಪಟ್ಟಕ್ಕೆ ಏರಿ ಕೂತಿರಿ? ಎರಡು ಬಾರಿ ನೀವು ಅರ್ಹತೆಯಿಂದ ಸಿಎಂ ಆಗಿಲ್ಲ. ಪಕ್ಷದಲ್ಲಿದ್ದ ಸಮರ್ಥರನ್ನು ಸಾಮಾಜಿಕ ನ್ಯಾಯದ ನೆಪಲ್ಲಿ ರಾಜಕೀಯ ನರಮೇಧ ಮಾಡಿ ಆಕ್ರಮಿಸಿದ್ದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೆಷ್ಟು ಸುಳ್ಳು ಹೇಳುತ್ತೀರಿ? ಇನ್ನೆಷ್ಟು ದಿನ ಈ ಊಸರವಳ್ಳಿ ಅವತಾರ? ನೀವು ಅಸಲಿಗೆ ಅಹಿಂದ ನಾಯಕ, ಸಾಮಾಜಿಕ ನ್ಯಾಯದ ಪ್ರತಿನಿಧಿಯೇ ಆಗಿದ್ದರೆ ನೀವು ಹುಟ್ಟಿದ ಜಾತಿಯನ್ನು ಎಳೆದು ತರುತ್ತಿರಲಿಲ್ಲ. ಇನ್ನು ಮುಂದೆ ಬಸವಣ್ಣ, ನಾರಾಯಣ ಗುರು, ಕುವೆಂಪು, ದೇವರಾಜ ಅರಸು ಮೊದಲಾದ ಮಹನೀಯರ ಹೆಸರೇಳಬೇಡಿ. ನಿಮಗಿಂತ ವಯಸ್ಸಿನಲ್ಲಿ ಚಿಕ್ಕವನಾದ ನಾನು ನಿಮಗೆ ನೀಡುವ ವಿನಮ್ರ ಸಲಹೆ ಇದು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.---

-ಕೋಟ್-

ಒಕ್ಕಲಿಗ ಸಮುದಾಯಕ್ಕೆ ಸಮರ್ಥ ನಾಯಕತ್ವ ನೀಡುವ ಕಾಂಗ್ರೆಸ್‌ ಉದಾರತೆಯನ್ನು ನಾನು ಸ್ವಾಗತಿಸುವೆ. ಈ ಉದಾರತೆ ನಿಮಗೂ ಬೇಕಲ್ಲವೇ ಸಿದ್ದರಾಮಯ್ಯ? ಎರಡನೇ ಅವಧಿಗೆ ನೀವು ಸಿಎಂ ಆಗುವ ಮುನ್ನ ಆಗಿದ್ದ ಅಗ್ರಿಮೆಂಟ್‌ ಬಗ್ಗೆ ಬಹಿರಂಗವಾಗಿ ಹೇಳುವ ಉದಾರತೆ ತೋರಿ.

-ಎಚ್.ಡಿ.ಕುಮಾರಸ್ಲಾಮಿ, ಕೇಂದ್ರ ಕೈಗಾರಿಕಾ ಸಚಿವ

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮೈಸೂರು ವೀಳ್ಯದೆಲೆ, ನಂಜನಗೂಡು ರಸಬಾಳೆ ಇಂಡಿಯ ಲಿಂಬೆಕಾಯಿ ಬಗ್ಗೆ ಪ್ರಧಾನಿ ಮೋದಿ ಫಿದಾ
ಭಾರತ-ಅಮೆರಿಕದ ವ್ಯಾಪಾರಒಪ್ಪಂದ ಮಾತುಕತೆ ಮುಂದಕ್ಕೆ