ರೈತರ ಪ್ರತಿಭಟನೆ ತಡೆಯಲು ಸಾನಿಕ್‌ ಅಸ್ತ್ರ ಬಳಕೆ!

KannadaprabhaNewsNetwork |  
Published : Feb 15, 2024, 01:33 AM ISTUpdated : Feb 15, 2024, 07:58 AM IST
ಸಾನಿಕ್ ಯಂತ್ರ | Kannada Prabha

ಸಾರಾಂಶ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೆಹಲಿಗೆ ಮೆರವಣಿಗೆ ಹೊರಟಿರುವ ರೈತರನ್ನು ತಡೆಯಲು ದೆಹಲಿ ಪೊಲೀಸರು ಈ ಬಾರಿ ಸಾನಿಕ್‌ ಅಸ್ತ್ರದ ಮೊರೆ ಹೋಗಿದ್ದಾರೆ.

ನವದೆಹಲಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೆಹಲಿಗೆ ಮೆರವಣಿಗೆ ಹೊರಟಿರುವ ರೈತರನ್ನು ತಡೆಯಲು ದೆಹಲಿ ಪೊಲೀಸರು ಈ ಬಾರಿ ಸಾನಿಕ್‌ ಅಸ್ತ್ರದ ಮೊರೆ ಹೋಗಿದ್ದಾರೆ. 

ಇದು ಏಕಮುಖವಾಗಿ ತೀವ್ರತರವಾದ ಶಬ್ದವನ್ನು ಹೊರಡಿಸುವ ಮೂಲಕ ಜನರು ಆ ದಿಕ್ಕಿನತ್ತ ಪ್ರಯಾಣಿಸುವುದನ್ನು ತಪ್ಪಿಸಲಿದೆ. ಈ ಶಬ್ದ ಆಲಿಸಿದವರು ಕಿವುಡಾಗುವ ಸಾಧ್ಯತೆಯೂ ಇರುತ್ತದೆ.

ಅಮೆರಿಕದಿಂದ ಆಮದು ಮಾಡಿಕೊಂಡಿರುವ ಎಲ್‌ಆರ್‌ಎಡಿ (ದೂರ ಪ್ರಯಾಣಿಸಬಲ್ಲ ತೀವ್ರ ಶಬ್ದ ಹೊರಡಿಸಬಲ್ಲ ಸಾಧನ) ಸಾಧನಗಳನ್ನು ಅಳವಡಿಸಿದೆ. 

ಇವುಗಳನ್ನು ಗುಂಪು ಚದುರಿಸಬಲ್ಲ ಫಿರಂಗಿ ಎಂದೂ ಕರೆಯಲಾಗುತ್ತದೆ. ಈ ಸ್ಪೀಕರ್‌ಗಳು ಏಕಮುಖವಾಗಿ ತೀವ್ರವಾದ ಶಬ್ದದ ಅಲೆಗಳನ್ನು ಹೊರಡಿಸುತ್ತವೆ. 

ಇದನ್ನು ಕೇಳಿಸಿಕೊಳ್ಳುವುದು ಮನುಷ್ಯರಿಗೆ ಅಸಹನೀಯವಾಗುವುದಲ್ಲದೇ, ಕಿವಿಗಳು ಕಿವುಡಾಗುವ ಸಾಧ್ಯತೆಗಳು ಇವೆ. 

2013ರಲ್ಲಿ ದೆಹಲಿ ಪೊಲೀಸರು ಈ ಸಾಧನವನ್ನು ಅಮೆರಿಕದಿಂದ ಆಮದು ಮಾಡಿಕೊಂಡಿದ್ದರು, ಇವುಗಳ ಬೆಲೆ 30 ಲಕ್ಷ ರು.ನಷ್ಟಿದೆ. 

ಸಾನಿಕ್‌ ಅಸ್ತ್ರವಷ್ಟೇ ಅಲ್ಲದೇ, ಗುಂಪು ಚದುರಿಸುವುದಕ್ಕಾಗಿ ಪೊಲೀಸರು ಗುಂಡು ಹಾರಿಸುವುದನ್ನು ಅಭ್ಯಾಸ ಮಾಡುತ್ತಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. 

ರೈತರನ್ನು ತಡೆಯಲು ಈಗಾಗಲೇ ಬ್ಯಾರಿಕೇಡ್‌, ಭಾರಿ ಗಾತ್ರದ ಸಿಮೆಂಟ್‌ ಗೋಡೆ, ಮುಳ್ಳುತಂತಿ, ಮೊಳೆಗಳನ್ನು ಪೊಲೀಸರು ಗಡಿಗಳಲ್ಲಿ ಅಳವಡಿಸಿದ್ದಾರೆ.

ಡ್ರೋನ್‌ ದಾಳಿ ತಡೆಯಲು ರೈತರಿಂದ ಗಾಳಿಪಟ ಹಾರಾಟ!
ಶಂಭು ಗಡಿ (ಹರ್ಯಾಣ): ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ಡ್ರೋನ್‌ ಮೂಲಕ ಅಶ್ರುವಾಯು ಸಿಡಿಸಿ ರೈತರನ್ನು ಚದುರಿಸುತ್ತಿದ್ದು, ಇತ್ತ ಪ್ರತಿಭಟನಾನಿರತ ರೈತರು ಪಂಜಾಬ್‌-ಹರ್ಯಾಣ ಗಡಿಯಲ್ಲಿ ಡ್ರೋನ್‌ ವಿಫಲಗೊಳಿಸಲು ಗಾಳಿಪಟ ಹಾರಿಸುತ್ತಿದ್ದಾರೆ.

ದಪ್ಪ ದಾರದ ಗಾಳಿಪಟ ಹಾರಾಟ ನಡೆಸಿದರೆ ಅವುಗಳ ದಾರ ಡ್ರೋನ್‌ ರೆಕ್ಕೆಗೆ ಸಿಕ್ಕಿ ನಂತರ ಡ್ರೋನ್‌ ಕ್ರಾಷ್ ಆಗುತ್ತದೆ ಎಂಬ ಉದ್ದೇಶದಿಂದ ರೈತರು ಗಾಳಿಪಟ ಹಾರಿಸುತ್ತಿದ್ದಾರೆ.

ಇದರ ಜೊತೆಗೆ ಅಶ್ರುವಾಯು ದಾಳಿಗೆ ಯಾವುದೇ ಹಾನಿಯಾಗದಂತೆ ತಡೆಯಲು ನೀರಿನ ಬಾಟಲಿಗಳು ಹಾಗೂ ಒದ್ದೆ ಬಟ್ಟೆಗಳನ್ನು ರೈತರು ಧರಿಸುತ್ತಿದ್ದಾರೆ. 

ಇದಲ್ಲದೆ ಹೊಗೆ ನಿರೋಧಕ ಮಾಸ್ಕ್ ಧರಿಸಿ ಪ್ರತಿಭಟನೆಯಲ್ಲಿ ರೈತರು ಪಾಲ್ಗೊಳ್ಳುತ್ತಿದ್ದಾರೆ.

ಮಾತುಕತೆಯಿಂದ ಎಲ್ಲ ಸಾಧ್ಯ, ಕತಾರ್‌ ಇದಕ್ಕೆ ಉದಾಹರಣೆ: ಠಾಕೂರ್‌
ನವದೆಹಲಿ: ರೈತರು ಪ್ರತಿಭಟನೆ ನಿಲ್ಲಿಸಿ ಮಾತುಕತೆಗೆ ಬರಬೇಕು. ಇದಕ್ಕೆಲ್ಲ ಮಾತುಕತೆ ಒಂದೇ ಪರಿಹಾರ. 

ಕತಾರ್‌ನಲ್ಲಿ ಗಲ್ಲು ಭೀತಿಯಲ್ಲಿದ್ದ ಭಾರತೀಯರ ರಕ್ಷಣೆಯೇ ಇದಕ್ಕೆ ಉದಾಹರಣೆ ಎಂದು ಕೇಂದ್ರ ವಾರ್ತಾ ಸಚಿವ ಅನುರಾಗ್‌ ಸಿಂಗ್‌ ಠಾಕೂರ್‌ ಹೇಳಿದ್ದಾರೆ.

ಮಾಧ್ಯಮದ ಜೊತೆ ಮಾತನಾಡಿದ ಅವರು,‘ನಾವು ಕತಾರ್‌ನಲ್ಲಿ ಬಂಧಿತರಾಗಿದ್ದ ಮಾಜಿ ಯೋಧರನ್ನು ಮಾತುಕತೆ ಮೂಲಕ ರಕ್ಷಿಸಿ ಕರೆತಂದಿದ್ದೇವೆ. 

ಇದರ ಜೊತೆಗೆ ಉಕ್ರೇನ್‌ ಯುದ್ಧ, ಕೋವಿಡ್ ಸಮಯದಲ್ಲಿ ಅತಂತ್ರರಾಗಿದ್ದ ಭಾರತೀಯರನ್ನು ಮಾತುಕತೆ ಮೂಲಕ ಸುರಕ್ಷಿತವಾಗಿ ಕರೆತಂದಿದ್ದೇವೆ. 

ಎಲ್ಲದಕ್ಕೂ ಮಾತುಕತೆ ಪರಿಹಾರ. ರೈತರು ಹಿಂಸೆ ಮಾರ್ಗ ಹಿಡಿಯಬಾರದು’ ಎಂದು ಆಗ್ರಹಿಸಿದರು.

ದಿಲ್ಲಿ ಚಲೋ: 2ನೇ ದಿನವೂ ದಿಲ್ಲಿ ರಸ್ತೆಗಳಲ್ಲಿ ಟ್ರಾಫಿಕ್‌ ಜಾಂ:
ನವದೆಹಲಿ: ಪಂಜಾಬ್‌ ಹಾಗೂ ಹರ್ಯಾಣ ರೈತರ ನಡೆಸುತ್ತಿರುವ ದಿಲ್ಲಿ ಚಲೋ ಪ್ರತಿಭಟನೆಯಿಂದಾಗಿ ದೆಹಲಿಯ ರಸ್ತೆಗಳಲ್ಲಿ 2ನೇ ದಿನವಾದ ಬುಧವಾರವೂ ಭಾರಿ ವಾಹನ ದಟ್ಟಣೆ ಉಂಟಾಗಿದೆ.

ದೆಹಲಿಯ ಸಿಂಘು ಹಾಗೂ ತಿಕ್ರಿ ಗಡಿಯಲ್ಲಿ ವಾಹನ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ಹೇರಿರುವ ಕಾರಣ ಘಾಜಿಪುರ ಗಡಿಯಲ್ಲಿ ಭಾರಿ ವಾಹನ ದಟ್ಟಣೆ ಏರ್ಪಟ್ಟಿತ್ತು. 

ಇದರೊಂದಿಗೆ ಅಪ್ಸರಾ ಗಡಿಯಲ್ಲಿಯೂ ವಾಹನ ಸಂಚಾರ ಆಮೆಗತಿಯಲ್ಲಿ ಸಾಗಿತ್ತು.

 ಬದಲಿ ಮಾರ್ಗದಲ್ಲಿ ಸಾಗಿದರೂ ದಟ್ಟಣೆ ಕೊಂಚ ಪ್ರಮಾಣದಲ್ಲಿಯೂ ಕಡಿಮೆ ಆಗದೇ ಮುಖ್ಯರಸ್ತೆಯ ಆಸುಪಾಸಿನಲ್ಲಿನ ಸಣ್ಣ ಪುಟ್ಟ ಮಾರ್ಗಗಳೆಲ್ಲ ವಾಹನಗಳಿಂದ ಕೂಡಿತ್ತು.

ದೆಹಲಿಯ ಹರ್ಯಾಣ ಗಡಿಯಲ್ಲಿ ಪ್ರತಿಭಟನಾಕಾರರು ಮುಂದೆ ಸಾಗದಂತೆ ರಸ್ತೆಗಳಲ್ಲಿ ಗುಂಡಿ ತೋಡಿ ತಡೆ ಒಡ್ಡಲಾಗಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ತನ್ನದೇ ಸೈನಿಕರ ಸಾಯಲು ಬಿಟ್ಟ ದ್ರೋಹಿ ಪಾಕಿಸ್ತಾನ!
ಶಾಲೇಲಿ ಬ್ಲೇಡಿಂದ ಒಂದೇ ರೀತಿ ಕೈ ಕೊಯ್ದುಕೊಂಡ 35 ಮಕ್ಕಳು!