ಪಿಟಿಐ, ನವದೆಹಲಿಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ನಮ್ಮದೇ ಎಂದು ಮತ್ತೊಮ್ಮೆ ಪುನರುಚ್ಚರಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಿಒಕೆ ಇಂದು ನಮ್ಮ ದೇಶದ ಭೂಭಾಗವಾಗದೇ ಇರುವುದಕ್ಕೆ ದೇಶದ ಮೊದಲ ಪ್ರಧಾನಿ ಜವಾಹರ ಲಾಲ್ ನೆಹರು ಎಸಗಿದ ಎರಡು ಪ್ರಮಾದಗಳೇ ಕಾರಣ ಎಂದು ಕಿಡಿಕಾರಿದ್ದಾರೆ. ಜೊತೆಗೆ ನೆಹರು ಮಾಡಿದ ತಪ್ಪಿನಿಂದಾಗಿ ಜಮ್ಮು ಮತ್ತು ಕಾಶ್ಮೀರದ ಜನರು ಕಷ್ಟ ಅನುಭವಿಸುವಂತಾಯಿತು ಎಂದು ದೂರಿದ್ದಾರೆ.ಬುಧವಾರ ಲೋಕಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಮೀಸಲು (ತಿದ್ದುಪಡಿ) ಹಾಗೂ ಜಮ್ಮು ಮತ್ತು ಕಾಶ್ಮೀರ ಕ್ಷೇತ್ರ ಪುನರ್ವಿಂಗಡನಾ (ತಿದ್ದುಪಡಿ) ಮಸೂದೆ ಕುರಿತು ಮಾತನಾಡಿದ ಅಮಿತ್ ಶಾ, ‘ತಿದ್ದುಪಡಿ ಮಸೂದೆಯು ಇಬ್ಬರು ಕಾಶ್ಮೀರಿ ಪಂಡಿತ ಸಮುದಾಯದ ವ್ಯಕ್ತಿಗಳನ್ನು ರಾಜ್ಯ ವಿಧಾನಸಭೆಗೆ ನಾಮನಿರ್ದೇಶನ ಮಾಡಲು ಅವಕಾಶ ಕಲ್ಪಿಸುತ್ತದೆ. ಜೊತೆಗೆ ಪಾಕ್ ಆಕ್ರಮಿತ ಕಾಶ್ಮೀರದಿಂದ ಹೊರಹಾಕಲ್ಪಟ್ಟ ವ್ಯಕ್ತಿಗಳಿಗೆ ಮೀಸಲಿಡಲಾಗುತ್ತದೆ. ಈ ಎರಡೂ ತಿದ್ದುಪಡಿಗಳು ಕಳೆದ 70 ವರ್ಷಗಳಿಂದ ತಮ್ಮ ಹಕ್ಕುಗಳಿಂದ ವಂಚಿತರಾದವರಿಗೆ ನ್ಯಾಯ ದೊರಕಿಸಿಕೊಡುತ್ತವೆ ಮತ್ತು ಸ್ಥಳಾಂತರಗೊಂಡವರಿಗೆ ಶಾಸನಸಭೆಯಲ್ಲಿ ತಮ್ಮ ಧ್ವನಿಯಾಗಲು ಅವಕಾಶ ಕಲ್ಪಿಸುತ್ತವೆ’ ಎಂದರು.
ಇನ್ನು, ‘2ನೇ ಪ್ರಮಾದವೆಂದರೆ ಕಾಶ್ಮೀರ ವಿಷಯವನ್ನು ಆತುರಾತುರವಾಗಿ ವಿಶ್ವಸಂಸ್ಥೆ ಬಳಿಗೆ ಕೊಂಡೊಯ್ದಿದ್ದು. ಈ ವಿಷಯವನ್ನು ಭಾರತ ವಿಶ್ವಸಂಸ್ಥೆಯ ಸಂವಿಧಾನದ 51ನೇ ವಿಧಿಯ ಅನ್ವಯ ದಾಖಲಿಸಬೇಕಿತ್ತೇ ವಿನಃ 35ನೇ ವಿಧಿಯ ಅನ್ವಯ ಅಲ್ಲ’ ಎಂದು ಅಮಿತ್ ಶಾ ಟೀಕಿಸಿದರು.2 ಪ್ರಮಾದ 1. 1962ರ ಪಾಕ್ ವಿರುದ್ಧದ ಯುದ್ಧದಲ್ಲಿ ಗೆಲ್ಲುವ ಮೊದಲೇ ಕದನ ವಿರಾಮ ಘೋಷಿಸಿದ್ದು. ಇದು ತಪ್ಪು ನಿರ್ಧಾರವಾಗಿತ್ತು ಎಂದು ಸ್ವತಃ ನೆಹರು ಹೇಳಿಕೊಂಡಿದ್ದರು.2. ಕಾಶ್ಮೀರ ವಿಷಯವನ್ನು ಆತುರಾತುರವಾಗಿ ವಿಶ್ವಸಂಸ್ಥೆ ಬಳಿಗೆ ಕೊಂಡೊಯ್ದಿದ್ದು. ವಿಶ್ವಸಂಸ್ಥೆಯ 51ನೇ ವಿಧಿ ಬದಲು 35ನೇ ವಿಧಿ ಅನ್ವಯ ದಾಖಲಿಸಿದ್ದು.