ಶಿಂಧೆ ‘ದ್ರೋಹಿ’ ಎಂದ ಖ್ಯಾತ ಹಾಸ್ಯ ಕಲಾವಿದ ಕುನಾಲ್‌ ಕಾಮ್ರಾ ವಿರುದ್ಧ ಶಿವಸೈನಿಕರ ದಾಂಧಲೆ

KannadaprabhaNewsNetwork |  
Published : Mar 25, 2025, 12:48 AM ISTUpdated : Mar 25, 2025, 04:22 AM IST
kunal kamra

ಸಾರಾಂಶ

ಖ್ಯಾತ ಹಾಸ್ಯ ಕಲಾವಿದ ಕುನಾಲ್‌ ಕಾಮ್ರಾ ಅವರು ಕಾರ್ಯಕ್ರಮವೊಂದರಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್‌ ಶಿಂಧೆ ಅವರನ್ನು ‘ದ್ರೋಹಿ’ ಎಂದು ಕರೆದದ್ದು ಭಾರೀ ವಿವಾದಕ್ಕೆ ಕಾರಣವಾಗಿದೆ.

ಮುಂಬೈ: ಖ್ಯಾತ ಹಾಸ್ಯ ಕಲಾವಿದ ಕುನಾಲ್‌ ಕಾಮ್ರಾ ಅವರು ಕಾರ್ಯಕ್ರಮವೊಂದರಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್‌ ಶಿಂಧೆ ಅವರನ್ನು ‘ದ್ರೋಹಿ’ ಎಂದು ಕರೆದದ್ದು ಭಾರೀ ವಿವಾದಕ್ಕೆ ಕಾರಣವಾಗಿದೆ. ಇದರಿಂದ ಸಿಟ್ಟಿಗೆದ್ದ ಶಿವಸೇನಾ ಕಾರ್ಯಕರ್ತರು ಕಾಮ್ರಾ ಕಾರ್ಯಕ್ರಮ ನಡೆಸಿದ ಸಭಾಂಗಣವನ್ನು ಪುಡಿಗಟ್ಟಿದ್ದಾರೆ. ಹೀಗಾಗಿ ಕೃತ್ಯ ಎಸಗಿದ 12 ಶಿವಸೇನಾ ಕಾರ್ಯಕರ್ತರನ್ನು ಬಂಧಿಸಿ ಬಳಿಕ ಜಾಮೀನು ಮೇಲೆ ಬಿಡುಗಡೆ ಮಾಡಲಾಗಿದೆ.

ಅತ್ತ ತಮ್ಮ ವಿಡಿಯೋ ವಿವಾದ ಹುಟ್ಟುಹಾಕುತ್ತಿದ್ದಂತೆ ಮುಂಬೈ ಬಿಟ್ಟಿದ್ದ ಕಾಮ್ರಾ ತಮಿಳುನಾಡಿನಲ್ಲಿ ಇರುವುದು ಪತ್ತೆಯಾಗಿದೆ. ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬಂಧನಕ್ಕೆ ಬಲೆ ಬೀಸಿದ್ದಾರೆ.

ಈ ಪ್ರಕಣ ರಾಜಕೀಯ ವಾಗ್ಯುದ್ಧಕ್ಕೂ ಕಾರಣವಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯದ ನೆಪದಲ್ಲಿ ನಿಂದನೆ ಸಲ್ಲದು. ಕಾಮ್ರಾ ಕ್ಷಮೆ ಕೇಳಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಆಗ್ರಹಿಸಿದ್ದಾರೆ. ಆದರೆ ಶಿಂಧೆ ವಿರೋಧಿಯಾದ ಶಿವಸೇನೆ (ಯುಬಿಟಿ) ನಾಯಕ ಉದ್ಧವ್‌ ಠಾಕ್ರೆ, ಕಾಮ್ರಾ ಹೇಳಿಕೆ ಸಮರ್ಥಿಸಿದ್ದಾರೆ.

ಆಗಿದ್ದೇನು?:

ಭಾನುವಾರ ರಾತ್ರಿ ಖಾರ್‌ ಪ್ರದೇಶದ ಕಾಂಟಿನೆಂಟಲ್‌ ಹೋಟೆಲ್‌ನ ಸ್ಟುಡಿಯೋದಲ್ಲಿ ನಡೆದ ‘ಹ್ಯಾಬಿಟ್ಯಾಟ್‌ ಕಾಮೆಡಿ ಕ್ಲಬ್‌’ ಹೆಸರಿನ ಹಾಸ್ಯ ಕಾರ್ಯಕ್ರಮದ ವೇಳೆ, 2022ರಲ್ಲಿ ಶಿವಸೇನೆ ಇಬ್ಭಾಗವಾದ ಬಗ್ಗೆ ಮಾತನಾಡತೊಡಗಿದ ಕಾಮ್ರಾ, ‘ಡಿಸಿಎಂ ಶಿಂಧೆ ಒಬ್ಬ ದ್ರೋಹಿ’ ಎಂದಿದ್ದಾರೆ. ಜೊತೆಗೆ, ’ದಿಲ್‌ ತೋ ಪಾಗಲ್‌ ಹೈ’ ಹಾಡಿನ ಸಾಹಿತ್ಯವನ್ನು ಬದಲಿಸಿ ಶಿಂಧೆ ಕುರಿತು ನಿಂದನೀಯವಾಗಿ ಹಾಡಿದ್ದಾರೆ.

ಇದರ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಕುಪಿತರಾದ ಶಿವಸೇನೆಯ ಕಾರ್ಯಕರ್ತರು, ಕಾರ್ಯಕ್ರಮವನ್ನು ಚಿತ್ರೀಕರಿಸಲಾದ ಖಾರ್‌ ಪ್ರದೇಶದಲ್ಲಿರುವ ಯೂನಿಕಾಂಟಿನೆಂಟಲ್‌ ಹೋಟೆಲ್‌ನ ಹ್ಯಾಬಿಟಾಟ್‌ ಸ್ಟುಡಿಯೋವನ್ನು ಧ್ವಂಸ ಮಾಡಿದ್ದಾರೆ.

ಕಾಮ್ರಾಗೆ ವಿಡಿಯೋ ಮೂಲಕ ಎಚ್ಚರಿಕೆ ನೀಡಿರುವ ಸೇನೆಯ ಸಂಸದ ನರೇಶ್‌ ಮ್ಹಾಸ್ಕೆ, ‘ನಿಮ್ಮನ್ನು ದೇಶ ಬಿಡುವಂತೆ ಮಾಡಲಾಗುತ್ತದೆ’ ಎಂದಿದ್ದಾರೆ. ಶಿವಸೇನೆಯ ಮುಖಂಡ ರಾಹುಲ್‌ ಕನಾಲ್‌ ಮಾತನಾಡಿ, ‘ಇದು ಸ್ವಾಭಿಮಾನದ ವಿಷಯ. ನೀವು ಮುಂಬೈಗೆ ಬರುತ್ತಿದ್ದಂತೆ ಶಿವಸೇನೆ ಶೈಲಿಯ ಪಾಠ ಕಲಿಸಲಾಗುತ್ತದೆ’ ಎಂದು ಎಚ್ಚರಿಸಿದ್ದಾರೆ. ಜೊತೆಗೆ, ಹೋಟೆಲ್‌ ಮೇಲೆಯೂ 6 ಎಫ್‌ಐಆರ್‌ ಇವೆ ಎಂದಿದ್ದಾರೆ.

ಕಾರ್ಯಕರ್ತರ ಬಂಧನ, ಬಿಡುಗಡೆ:

ಅತ್ತ, ಕಾಮ್ರಾರ ಕಾರ್ಯಕ್ರಮ ನಡೆದ ಸಭಾಂಗಣ ಧ್ವಂಸಗೊಳಿಸಿದ ಸಂಬಂಧ ಕನಾಲ್‌ ಸೇರಿ 12 ಜನರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. 19 ಜನ ಕಾರ್ಯಕರ್ತರನ್ನು ಗುರುತಿಸಲಾಗಿದ್ದು, ಎಲ್ಲರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಖಾರ್‌ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಇದರ ಬಳಿಕ 12 ಬಂಧಿತರಿಗೆ ಜಾಮೀನು ದೊರಕಿದೆ.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಮುಸ್ಲಿಮರು ಸೂರ್‍ಯನಮಸ್ಕಾರ ಮಾಡ್ಬೇಕು : ಹೊಸಬಾಳೆ ಕರೆ
ಮರುಭೂಮಿ ಸೌದಿಯಲ್ಲಿ ಹಿಮಪಾತ, ಮಳೆ!