ನವದೆಹಲಿ: ದೇಶಾದ್ಯಂತ ಭಾರಿ ಗಮನ ಸೆಳೆದಿರುವ ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ ಪ್ರಕರಣದಲ್ಲಿ ಮೊದಲ ತಲದಂಡವಾಗಿದೆ. ದೇಗುಲದಲ್ಲಿ ನಡೆದ ಅಕ್ರಮದ ಸಂಬಂಧ ನೈತಿಕ ಹೊಣೆ ಹೊತ್ತು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಮ್ಮ ಹುದ್ದೆಗೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ಅವರೊಂದಿಗೆ ಟ್ರಸ್ಟ್ನ ಮತ್ತೊಬ್ಬ ಸದಸ್ಯ ಅನಿಲ್ ಮಿಶ್ರಾ ಕೂಡ ರಾಜೀನಾಮೆ ಸಲ್ಲಿಸಿದ್ದಾರೆ.
ದೇಗುಲಕ್ಕೆ ಭಕ್ತರು ನೀಡಿದ ಕೋಟ್ಯಂತರ ರು. ದೇಣಿಗೆಯಲ್ಲಿ ಅಕ್ರಮ ನಡೆದಿದೆ ಎಂದು ತಿಂಗಳ ಹಿಂದೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಗಂಭೀರ ಆರೋಪ ಮಾಡಿದ್ದರು. ಈ ಬೆನ್ನಲ್ಲೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಿ ಪ್ರಕರಣದ ತನಿಖೆಗೆ ಆದೇಶಿಸಿತ್ತು. ಇದು ಸರ್ಕಾರ ಮತ್ತು ವಿಪಕ್ಷಗಳ ನಡುವೆ ಭಾರಿ ಜಟಾಪಟಿಗೂ ಕಾರಣವಾಗಿತ್ತು.
ಈ ನಡುವೆ ಎಸ್ಐಟಿ, ಜೂ.23ರಂದು ಸರ್ಕಾರಕ್ಕೆ ಪ್ರಾಥಮಿಕ ವರದಿ ಸಲ್ಲಿಸಿ ಪ್ರಮುಖ ಆರೋಪಗಳನ್ನು ಮಾಡಿತ್ತು. ಅದರಲ್ಲಿ ದೇಣಿಗೆ ಎಣಿಕೆ ಕಾರ್ಯದಲ್ಲಿದ್ದ ಸಿಬ್ಬಂದಿ ಸೇರಿದಂತೆ ಟ್ರಸ್ಟ್ಗೆ ಸಂಬಂಧಪಟ್ಟವರು ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಸಿಸಿಟೀವಿ ಮೇಲ್ವಿಚಾರಣೆಯಲ್ಲಿ ಲೋಪ, ಲೆಕ್ಕಪತ್ರದಲ್ಲಿ ಪಾರದರ್ಶಕತೆಯ ಕೊರತೆ ಹಾಗೂ ಕುಂಭಮೇಳದ ಸಮಯದಲ್ಲಿ ಅತಿ ಹೆಚ್ಚಿನ ಮೊತ್ತದ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿತ್ತು.2 ದಿನಗಳ ಹಿಂದಷ್ಟೇ ಉತ್ತರ ಪ್ರದೇಶ ಪೊಲೀಸರು ಪ್ರಕರಣದ 8 ಪ್ರಮುಖ ಆರೋಪಿಗಳನ್ನು ಬಂಧಿಸಿದ್ದರು. ಈ ಪೈಕಿ ಓರ್ವ ಚಂಪತ್ ರಾಯ್ ಅವರ ಮಾಜಿ ಕಾರು ಚಾಲಕ ರಾಮಶಂಕರ್ ಯಾದವ್ ಅಲಿಯಾಸ್ ತಿನ್ನು ಯಾದವ್ ಎಂದು ತಿಳಿದುಬಂದಿತ್ತು. ಇದರ ಬೆನ್ನಲ್ಲೇ ರಾಯ್ ರಾಜೀನಾಮೆ ನೀಡಿದ್ದಾರೆ. ಇದು ಮಂದಿರದಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆದಿರುವ ಶಂಕೆಗೆ ಮತ್ತಷ್ಟು ಪುಷ್ಠಿ ನೀಡಿದೆ.
8 ಆರೋಪಿಗಳು ಅರೆಸ್ಟ್
ಅಯೋಧ್ಯಾ: ಇಲ್ಲಿನ ರಾಮ ಮಂದಿರದ ದೇಣಿಗೆ ಹಣ ಲೂಟಿ ಮಾಡಿದ ಪ್ರಕರಣದಲ್ಲಿ ಎಲ್ಲ 8 ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಎಲ್ಲರನ್ನೂ ಜೂ.29ರವರೆಗೆ ಪೊಲೀಸರ ವಶಕ್ಕೆ ಒಪ್ಪಿಸಿ ಕೋರ್ಟ್ ಆದೇಶಿಸಿದೆ.