ರಸ್ತೆ ಬದಿ ಕೂತು 2 ತಾಸು ಪ್ರತಿಭಟಿಸಿದ ರಾಜ್ಯಪಾಲ!

KannadaprabhaNewsNetwork |  
Published : Jan 28, 2024, 01:20 AM ISTUpdated : Jan 28, 2024, 07:03 AM IST
ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ | Kannada Prabha

ಸಾರಾಂಶ

ಕಾರ್ಯಕ್ರಮವೊಂದಕ್ಕೆ ರಾಜ್ಯಪಾಲರು ತೆರಳುತ್ತಿದ್ದಾಗ ಎಸ್‌ಎಫ್‌ಐ ಕಾರ್ಯಕರ್ತರು ಕಪ್ಪು ಪಟ್ಟಿ ತೋರಿಸಿ ಪ್ರತಿಭಟನೆ ನಡೆಸಿದ್ದಕ್ಕೆ ಸಿಟ್ಟಾದ ಆರೀಫ್‌ ಅವರು, ಕಾರಿನಿಂದ ಇಳಿದು ರಸ್ತೆ ಬದಿ 2 ತಾಸು ಕೂತು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪಿಟಿಐ ಕೊಲ್ಲಂ (ಕೇರಳ): ಕೇರಳದ ಎಡರಂಗ ಸರ್ಕಾರ ಹಾಗೂ ರಾಜ್ಯಪಾಲ ಆರೀಫ್‌ ಮೊಹಮ್ಮದ್‌ ಖಾನ್‌ ನಡುವಣ ಕಿತ್ತಾಟ ಶನಿವಾರ ಮತ್ತೊಂದು ಮಜಲು ತಲುಪಿದೆ. 

ಕಾರ್ಯಕ್ರಮವೊಂದಕ್ಕೆ ರಾಜ್ಯಪಾಲರು ತೆರಳುತ್ತಿದ್ದಾಗ ಎಸ್‌ಎಫ್‌ಐ ಕಾರ್ಯಕರ್ತರು ಕಪ್ಪು ಪಟ್ಟಿ ತೋರಿಸಿ ಪ್ರತಿಭಟನೆ ನಡೆಸಿದ್ದಕ್ಕೆ ಸಿಟ್ಟಾದ ಆರೀಫ್‌ ಅವರು, ಕಾರಿನಿಂದ ಇಳಿದು ರಸ್ತೆ ಬದಿ 2 ತಾಸು ಕೂತು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 

ಪ್ರತಿಭಟನಾಕಾರರ ವಿರುದ್ಧ ಕೇಸ್‌ ದಾಖಲಿಸಲು ತಾಕೀತು ಮಾಡಿ, ಎಫ್‌ಐಆರ್ ಪ್ರತಿಯನ್ನು ತಂದು ತೋರಿಸಿದ ಬಳಿಕವೇ ಅಲ್ಲಿಂದ ಹೊರಟಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ‘ರಾಜ್ಯಪಾಲರು ಈ ರೀತಿ ಪ್ರತಿಭಟಿಸಿ ಸಂವಿಧಾನದ ಮೌಲ್ಯ ಹಾಗೂ ಕಾನೂನನ್ನು ಗಾಳಿಗೆ ತೂರುತ್ತಿದ್ದಾರೆ’ ಎಂದು ಕಿಡಿಕಾರಿದ್ದಾರೆ.

ಈ ಘಟನೆ ಬೆನ್ನಲ್ಲೇ, ಕೇಂದ್ರ ಗೃಹ ಸಚಿವಾಲಯ ಆರೀಫ್‌ ಮೊಹಮ್ಮದ್‌ ಖಾನ್‌ ಅವರಿಗೆ ಝಡ್‌ ಪ್ಲಸ್‌ ಭದ್ರತೆ ನೀಡಿ ಆದೇಶ ಹೊರಡಿಸಿದೆ.

ಆಗಿದ್ದೇನು?
ರಾಜ್ಯಪಾಲರು ಕಾರಿನಲ್ಲಿ ತೆರಳುತ್ತಿದ್ದಾಗ ಕೊಟ್ಟರಾಕ್ಕರ ಎಂಬಲ್ಲಿ ಎಸ್‌ಎಫ್‌ಐ ಕಾರ್ಯಕರ್ತರು ಕಪ್ಪು ಪಟ್ಟಿ ಪ್ರದರ್ಶಿಸಿ ‘ಸಂಘೀ ಕುಲಾಧಿಪತಿಗಳೇ ವಾಪಸ್‌ ಹೋಗಿ’ ಎಂಬ ಬ್ಯಾನರ್‌ಗಳನ್ನು ಪ್ರದರ್ಶಿಸಿದರು. 

ಇದರಿಂದ ಕೋಪಗೊಂಡ ಗೌರ್ನರ್‌, ಕಾರು ನಿಲ್ಲಿಸಿ, ‘ಬನ್ನಿ ಬನ್ನಿ’ ಎನ್ನುತ್ತಾ ಎಸ್‌ಎಫ್‌ಐ ಪ್ರತಿಭಟನಾಕಾರರತ್ತ ಹೆಜ್ಜೆ ಹಾಕಿದರು. 

ತಕ್ಷಣವೇ ಪೊಲೀಸರು ಪ್ರತಿಭಟನಾಕಾರರು ಹಾಗೂ ಗೌರ್ನರ್‌ ನಡುವೆ ತಡೆಗೋಡೆಯಾಗಿ ನಿಂತರು. ಪ್ರತಿಭಟನಾಕಾರರನ್ನು ತೆರವುಗೊಳಿಸಿದರು.ಆದರೂ ಶಮನಗೊಳ್ಳದ ರಾಜ್ಯಪಾಲರು ಪಕ್ಕದ ಅಂಗಡಿಯೊಂದರಿಂದ ಕುರ್ಚಿ ಪಡೆದು ರಸ್ತೆ ಬದಿಯಲ್ಲೇ ಹಾಕಿಕೊಂಡು ಕೂತುಬಿಟ್ಟರು. 

ಪ್ರತಿಭಟನಾಕಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪಟ್ಟು ಹಿಡಿದು ಪೊಲೀಸರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ‘ನೀವು ಹೊರಡಿ’ ಎಂದು ಪೊಲೀಸರು ಎಷ್ಟೇ ಬೇಡಿಕೊಂಡರೂ ಅವರು ಮಣಿಯಲಿಲ್ಲ. 

‘ಪ್ರತಿಭಟನಾಕಾರರಿಗೇ ರಕ್ಷಣೆ ನೀಡುತ್ತಿದ್ದೀರಿ, ನಾನು ಹೋಗುವುದಿಲ್ಲ’ ಎಂದು ತಿರುಗೇಟು ನೀಡಿದರು. 17 ಎಸ್‌ಎಫ್‌ಐ ಪ್ರತಿಭಟನಾಕಾರರ ವಿರುದ್ಧ ಎಫ್‌ಐಆರ್‌ ದಾಖಲಿಸಿರುವ ಪ್ರತಿಯನ್ನು ಪೊಲೀಸರು ತೋರಿಸಿದ ಬಳಿಕವಷ್ಟೇ ರಾಜ್ಯಪಾಲರು ಅಲ್ಲಿಂದ ಹೊರಟರು. 

ಒಟ್ಟು 2 ತಾಸು ಅವರು ರಸ್ತೆ ಬದಿ ಕುಳಿತಿದ್ದರು.

PREV
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.

Recommended Stories

ಸುಪ್ರೀಂನಲ್ಲಿ ವಕೀಲೆ ಆದ ಬಂಗಾಳದ ಮುಖ್ಯಮಂತ್ರಿ ದೀದಿ!
7 ಲಕ್ಷ ಸೇಬು ಮರ ಉಳಿಸಲು ಚಿಪ್ಕೋ ಚಳವಳಿ : 3 ಕಾಶ್ಮೀರ ರೈಲ್ವೆಗಳ ರದ್ದು