ಚಾಮುಂಡಿಬೆಟ್ಟದಲ್ಲಿ ‘ಆಷಾಢ ವಿಐಪಿಗಳು’

KannadaprabhaNewsNetwork |  
Published : Jul 04, 2025, 11:48 PM ISTUpdated : Jul 05, 2025, 11:01 AM IST
ಚಾಮುಂಡಿಬೆಟ್ಟಕ್ಕೆ ದರ್ಶನ್‌ ಭೇಟಿ. | Kannada Prabha

ಸಾರಾಂಶ

ಎರಡನೇ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತರ ದಂಡೇ ಹರಿದು ಬಂತು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ದಂಪತಿ, ಕೃಷಿ ಸಚಿವ ಚಲುವರಾಯಸ್ವಾಮಿ, ಮಾಜಿ ಸಚಿವ ಎಚ್‌.ಡಿ.ರೇವಣ್ಣ, ಚಿತ್ರನಟ ದರ್ಶನ್‌ ದಂಪತಿ ಸೇರಿ ಗಣ್ಯರು ಆಗಮಿಸಿ, ದೇವಿಯ ದರ್ಶನ ಪಡೆದರು.

 ಮೈಸೂರು :  ಎರಡನೇ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತರ ದಂಡೇ ಹರಿದು ಬಂತು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ದಂಪತಿ, ಕೃಷಿ ಸಚಿವ ಚಲುವರಾಯಸ್ವಾಮಿ, ಮಾಜಿ ಸಚಿವ ಎಚ್‌.ಡಿ.ರೇವಣ್ಣ, ಚಿತ್ರನಟ ದರ್ಶನ್‌ ದಂಪತಿ ಸೇರಿ ಗಣ್ಯರು ಆಗಮಿಸಿ, ದೇವಿಯ ದರ್ಶನ ಪಡೆದರು.

ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸಿದ ಚಾಮುಂಡಿ:

ಆಷಾಢ ಶುಕ್ರವಾರದ ನಿಮಿತ್ತ ದೇವಿಗೆ ಲಕ್ಷ್ಮೀ ಅಲಂಕಾರ ಮಾಡಲಾಗಿತ್ತು. ಕಿತ್ತಳೆ, ನೀಲಿ ಬಣ್ಣದ ಸೀರೆಯುಟ್ಟ, ವಿವಿಧ ಹೂವುಗಳಿಂದ ಸಿಂಗಾರಗೊಂಡು ಕಂಗೊಳಿಸುತ್ತಿದ್ದ ಚಾಮುಂಡೇಶ್ವರಿಯನ್ನು ಕಂಡು ಭಕ್ತರು ಪುನೀತರಾದರು. ಮಾವಿನಕಾಯಿ, ಮೆಕ್ಕೆಜೋಳ, ಮೋಸಂಬಿ, ಅನಾನಸ್ ಸೇರಿದಂತೆ ವಿವಿಧ ಫಲಪುಷ್ಪಗಳಿಂದ ದೇವಸ್ಥಾನದ ಆವರಣವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು.

ಮುಂಜಾನೆ 3ರಿಂದಲೇ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯಗಳು ಆರಂಭವಾದವು. ಮೊದಲಿಗೆ ದೇವಿಗೆ ಮಹಾನ್ಯಾಸಪೂರ್ವಕ ರುದ್ರಾಭಿಷೇಕ, ಅಭಿಷೇಕ, ಪಂಚಾಮೃತ ಅಭಿಷೇಕ ಸಲ್ಲಿಸಿದ ಬಳಿಕ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ನೀಡಲಾಯಿತು. ನಂತರ ಬೆಳಗ್ಗೆ 11ಕ್ಕೆ ಪೂಜೆ ಸಲ್ಲಿಸಿ, ಮಹಾಮಂಗಳಾರತಿ ನೆರವೇರಿಸಲಾಯಿತು.

ಸರತಿ ಸಾಲಲ್ಲಿ ನಿಂತು ದರ್ಶನ:

ಮುಂಜಾನೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ಜಯಘೋಷ ಕೂಗುತ್ತ ಚಾಮುಂಡೇಶ್ವರಿಯ ದರ್ಶನ ಪಡೆದು ಪುನೀತರಾದರು. ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ವಾಹನಕ್ಕೆ ನಿರ್ಬಂಧ ವಿಧಿಸಿದ್ದರಿಂದ ಲಲಿತಮಹಲ್ ಬಳಿಯಿಂದ ಬಸ್ ವ್ಯವಸ್ಥೆ ಮಾಡಲಾಗಿತ್ತು. ಸಾವಿರಾರು ಮಂದಿ ಮೆಟ್ಟಿಲುಗಳಿಗೆ ಅರಿಶಿಣ ಕುಂಕುಮ ಹಚ್ಚುತ್ತಾ ಬೆಟ್ಟಕ್ಕೆ ಬಂದು ಭಕ್ತಿಭಾವ ಮೆರೆದರು. ಧರ್ಮದರ್ಶನದೊಂದಿಗೆ ₹300, ₹2,000 ವಿಶೇಷ ದರ್ಶನದ ಸರತಿ ಸಾಲಿನಲ್ಲೂ ಹೆಚ್ಚು ಜನ ಕಂಡು ಬಂದರು. 2000 ರೂ.ಟಿಕೆಟ್‌ ಗೆ ಹೆಚ್ಚಿನ ಬೇಡಿಕೆ ಇತ್ತು.

ಭಕ್ತರಿಗೆ ಅರಣ್ಯ ಮಾಹಿತಿ ಭವನದ ಆವರಣದಲ್ಲಿ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಉಪ್ಪಿಟ್ಟು, ಕೇಸರಿಬಾತ್‌ ವಿತರಿಸಲಾಯಿತು. ಧರ್ಮದರ್ಶನ ಮಾಡಿದವರಿಗೆ ಡ್ರೈ ಫ್ರೂಟ್ಸ್, ಮಹಿಳೆಯರಿಗೆ ಮಡಿಲಕ್ಕಿ ವಿತರಿಸಲಾಯಿತು.(ಬಾಕ್ಸ್)

ಗಣ್ಯರಿಂದ ದರ್ಶನ

ಚಾಮುಂಡಿಬೆಟ್ಟಕ್ಕೆ ಶುಕ್ರವಾರ ಗಣ್ಯರ ದಂಡೇ ಹರಿದು ಬಂತು. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಪತ್ನಿ ಉಷಾ ಜೊತೆ ಆಗಮಿಸಿ, ವಿಶೇಷ ಪೂಜೆ ನೆರವೇರಿಸಿದರು. ಕೃಷಿ ಸಚಿವ ಚಲುವರಾಯಸ್ವಾಮಿ, ಮಾಜಿ ಸಚಿವ ಎಚ್.ಡಿ.ರೇವಣ್ಣ, ಎಂಎಲ್ಸಿ ಸೂರಜ್ ರೇವಣ್ಣ, ಶಾಸಕ ಜಿ.ಡಿ.ಹರೀಶ್‌ ಗೌಡ ಕೂಡ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ನಟ ದರ್ಶನ್-ಪತ್ನಿ ವಿಜಯಲಕ್ಷ್ಮೀ, ನಿರ್ದೇಶಕ ದಿನಕರ್ ತೂಗುದೀಪ್- ಪತ್ನಿ ಮಾನಸ, ನಟರಾದ ಡಾಲಿ ಧನಂಜಯ್, ಧನ್ವೀರ್, ಚಿಕ್ಕಣ್ಣ, ಕುರಿ ಪ್ರತಾಪ್ ಸೇರಿದಂತೆ ಹಲವು ಗಣ್ಯರು ಭೇಟಿ ನೀಡಿ, ದೇವಿಯ ದರ್ಶನ ಪಡೆದರು.

ಈ ಮಧ್ಯೆ, ನಟ ದರ್ಶನ್ ಅಭಿಮಾನಿಗಳು ಚಾಮುಂಡಿಬೆಟ್ಟದ ಮೆಟ್ಟಿಲು ಹತ್ತಿ ಸಾಗಿದ ಭಕ್ತರಿಗೆ ಬಾದಾಮ್ ಪುರಿ, ಲಾಡು, ಮೈಸೂರು ಪಾಕ್ ವಿತರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು