ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ‘ಬಾಡೂಟ’ ಬೇಕೆಬೇಕು..!

KannadaprabhaNewsNetwork |  
Published : Dec 09, 2024, 12:45 AM IST
8ಕೆಎಂಎನ್ ಡಿ22 | Kannada Prabha

ಸಾರಾಂಶ

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ಜಿಲ್ಲೆಗಳು, ಹೊರ ರಾಜ್ಯಗಳಿಂದ ಆಗಮಿಸುವ ಸಾಹಿತ್ಯ ಪ್ರಿಯರಿಗೆ ಈಗಾಗಲೇ ಉತ್ತರ ಮತ್ತು ದಕ್ಷಿಣ ಕರ್ನಾಟಕ ಶೈಲಿಯ ಆಹಾರವನ್ನು ಉಣಬಡಿಸಲು ಆಹಾರ ಸಮಿತಿ ನಿರ್ಧರಿಸಿದೆ. ಆದರೆ, ಮಂಡ್ಯ ನೆಲದ ಆಹಾರ ಸಂಸ್ಕೃತಿಯಾದ ಮಾಂಸಹಾರ ಸೇವನೆಗೆ ಅವಕಾಶ ನೀಡದಿರುವುದು ಸರಿಯಲ್ಲ. ಅಲ್ಲದೇ, ಮಾಂಸಹಾರ ಸೇವನೆ ಕೀಳಾಗಿ ಕಾಣುತ್ತಿರುವುದು ಒಪ್ಪುವಂತದ್ದಲ್ಲ.

ಕನ್ನಡಪ್ರಭ ವಾರ್ತೆ ಮಂಡ್ಯ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕಡ್ಡಾಯವಾಗಿ ಮಾಂಸದೂಟ ನೀಡಬೇಕು ಹಾಗೂ ವಾಣಿಜ್ಯ ಮಳಿಗೆಗಳಲ್ಲಿ ಮಾಂಸಹಾರಿ ತಿನಿಸುಗಳ ಮಾರಾಟಕ್ಕೆ ಅವಕಾಶ ಕಲ್ಪಿಸಬೇಕು ಎಂದು ವಿವಿಧ ಸಂಘಟನೆಗಳ ಮುಖಂಡರ ಬಾಡೂಟ ಬಳಗ ಒತ್ತಾಯಿಸಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಕಾವೇರಿ ಉದ್ಯಾನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸಮ್ಮೇಳನ ಹೊರಡಿಸಿರುವ ನಿಬಂಧನೆಗಳಲ್ಲಿ ಬಾಡೂಟ ನಿಷೇಧಿಸಲಾಗಿದೆ ಎಂಬ ಹೇಳಿಕೆಗೆ ಅನೇಕರು ಆಕ್ಷೇಪ ವ್ಯಕ್ತಪಡಿಸಿದರು.

ಸಭೆಯಲ್ಲಿ ಬಹುತೇಕ ಮುಖಂಡರು, ಮಾಂಸಹಾರ ಅಪರಾಧವೆಂಬಂತೆ ಬಿಂಬಿಸಲಾಗಿದೆ. ಈ ಮೂಲಕ ಬಹುಜನರ ಮಾಂಸಹಾರಿ ಸೇವನೆಗೆ ಅಪಮಾನ ಮಾಡಿದಂತಾಗಿದೆ. ಆಹಾರ ಹಕ್ಕನ್ನು ಅವಮಾನಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ಜಿಲ್ಲೆಗಳು, ಹೊರ ರಾಜ್ಯಗಳಿಂದ ಆಗಮಿಸುವ ಸಾಹಿತ್ಯ ಪ್ರಿಯರಿಗೆ ಈಗಾಗಲೇ ಉತ್ತರ ಮತ್ತು ದಕ್ಷಿಣ ಕರ್ನಾಟಕ ಶೈಲಿಯ ಆಹಾರವನ್ನು ಉಣಬಡಿಸಲು ಆಹಾರ ಸಮಿತಿ ನಿರ್ಧರಿಸಿದೆ. ಆದರೆ, ಮಂಡ್ಯ ನೆಲದ ಆಹಾರ ಸಂಸ್ಕೃತಿಯಾದ ಮಾಂಸಹಾರ ಸೇವನೆಗೆ ಅವಕಾಶ ನೀಡದಿರುವುದು ಸರಿಯಲ್ಲ. ಅಲ್ಲದೇ, ಮಾಂಸಹಾರ ಸೇವನೆ ಕೀಳಾಗಿ ಕಾಣುತ್ತಿರುವುದು ಒಪ್ಪುವಂತದ್ದಲ್ಲ. ಈ ಕಾರಣದಿಂದ ಸಮ್ಮೇಳನದಲ್ಲಿ ಕಡ್ಡಾಯವಾಗಿ ಬಾಡೂಟ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿದರು.

ಇದೂವರೆಗೂ ನಡೆದಿರುವ ಎಲ್ಲ ಸಮ್ಮೇಳನಗಳಲ್ಲೂ ಸಸ್ಯಹಾರವನ್ನು ಮಾತ್ರವೇ ನೀಡಲಾಗುತ್ತಿದೆ. ಆಯಾ ನೆಲದ ಸಂಸ್ಕೃತಿಗೆ ಅನುಗುಣವಾಗಿ ಆಹಾರ ಕೊಡಲಾಗಿದೆ. ಅದೇ ಪರಂಪರೆಯನ್ನು ಮಂಡ್ಯದಲ್ಲೂ ಮುಂದುವರಿಸುವುದಾಗಿ ಹೇಳುತ್ತಲೇ ಬಹುಜನರ ಆಹಾರ ಸಂಸ್ಕೃತಿಯಾದ ಮಾಂಸಹಾರ ಸೇವನೆಗೆ ತಡೆಯುಂಟು ಮಾಡುವ ಅಥವಾ ಸಮ್ಮೇಳನಗಳಲ್ಲಿ ಮಾಂಸಹಾರ ಸೇವನೆಗೆ ಅವಕಾಶ ನೀಡದಂತೆ ಮಡಿವಂತಿಕೆಯನ್ನು ಪಾಲಿಸುವ ಒಳತಂತ್ರಗಳು ನಡೆಯುತ್ತಿದೆ ಎಂದು ದೂರಿದರು.

ಮಂಡ್ಯ ಭಾಗದ ಮುದ್ದೆ ಮತ್ತು ನಾಟಿಕೋಳಿ ಸಾರಿಗೆ ವಿಶೇಷ ಮಾನ್ಯತೆ ಇದ್ದು, ಈ ಆಹಾರ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಉದ್ದೇಶದಿಂದ ಸಮ್ಮೇಳನದಲ್ಲಿ ಮಾಂಸಹಾರದ ಕಡ್ಡಾಯವನ್ನು ಒತ್ತಾಯಿಸುತ್ತಿದ್ದೇವೆ ವಿನಃ ಇದರಲ್ಲಿ ಸಸ್ಯಹಾರಿಗಳನ್ನು ಗುರಿಯಾಗಿಸುವ ಯಾವುದೇ ಉದ್ದೇಶವಿಲ್ಲ. ಅಲ್ಲದೇ, ಸಸ್ಯಹಾರಿಗಳಿಗೆ ಪ್ರಿಯವಾದ ಎಲ್ಲ ಬಗೆಯ ಭೋಜನಗಳನ್ನು ಸವಿಯಲು ಅವರಿಗೆ ಪ್ರತ್ಯೇಕ ಅವಕಾಶವಿರುವುದರಿಂದ ಮಾಂಸಪ್ರಿಯರಿಗೂ ಸಮ್ಮೇಳನ ಸಮಾನ ಆಧ್ಯತೆ ನೀಡಬೇಕೆಂದು ಬಳಗದ ಸದಸ್ಯರು ಒತ್ತಾಯಿಸಿದರು.

ಈಗಾಗಲೇ ಈ ಬಗ್ಗೆ ಜಿಲ್ಲಾಡಳಿತದ ಮತ್ತು ಸಮ್ಮೇಳನದ ಮುಖ್ಯಸ್ಥರ ಗಮನ ಸೆಳೆಯಲಾಗಿದೆ. ನಾಳೆ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು. ಆಹಾರ ಸಮಿತಿ ಅಧ್ಯಕ್ಷರು, ಸ್ವಾಗತ ಸಮಿತಿ ಅಧ್ಯಕ್ಷರು ಮತ್ತು ಪರಿಷತ್ ರಾಜ್ಯಾಧ್ಯಕ್ಷರ ಗಮನಕ್ಕೂ ತರಲಾಗುವುದು ಎಂದರು.

ಒಂದು ವೇಳೆ ನಮ್ಮ ಒತ್ತಾಯಕ್ಕೆ ಸ್ಪಂದಿಸದಿದ್ದರೆ ಸ್ವಯಂ ಪ್ರೇರಿತವಾಗಿ ಸಮ್ಮೇಳನದ ಮೊದಲನೇ ದಿನ ಮೊಟ್ಟೆ ವಿತರಣೆ, ಎರಡನೇ ದಿನ ಮುದ್ದೆ ನಾಟಿ ಕೋಳಿ ಸಾಂಬಾರ್, ಮೂರನೇ ದಿನ ಬಿರಿಯಾನಿಯನ್ನು ವಿತರಿಸುವ ಚಿಂತನೆ ನಡೆಸಲಾಗಿದೆ. ಇದಕ್ಕೆ ಪೂರಕವಾಗಿ ಮನೆಗೊಂದು ಕೋಳಿಯನ್ನು ಸಂಗ್ರಹಿಸುವ ಅಭಿಯಾನ ನಡೆಸುವುದಾಗಿ ಮುಖಂಡರು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ಟಿ.ಎಲ್.ಕೃಷ್ಣೇಗೌಡ, ಸಿ.ಕುಮಾರಿ, ಟಿ.ಡಿ.ನಾಗರಾಜು, ಸಿ.ಎಂ.ದ್ಯಾವಪ್ಪ, ಸಿ.ಆರ್.ರಮೇಶ್, ಎಲ್.ಸಂದೇಶ್, ಎಚ್.ಡಿ.ಜಯರಾಂ, ಎಂ.ಬಿ.ನಾಗಣ್ಣಗೌಡ, ಲಕ್ಷ್ಮಣ್ ಚೀರನಹಳ್ಳಿ, ಶಂಕರಲಿಂಗೇಗೌಡ, ಲಂಕೇಶ್, ಕೀಲಾರ ಸುರೇಶ, ಕೀಲಾರ ಕೃಷ್ಣೇಗೌಡ, ಟಿ.ಯಶ್ವಂತ್, ಸುಂಡಹಳ್ಳಿ ಮಂಜುನಾಥ್, ಚಂದಗಾಲು ವಿಜಯಕುಮಾರ್, ಸಂತೋಷ್, ನರಸಿಂಹಮೂರ್ತಿ, ಜಿ.ಎನ್. ಕೆಂಪರಾಜು, ಶಿವರಾಂ, ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೊಳಚೆ ನೀರಲ್ಲಿ ತಟ್ಟೆ ತೊಳೆದ ಪ್ರಕರಣ; ಶಿಕ್ಷಕಿ ಅಮಾನತು
ಅಲೆಮಾರಿ ಜನಾಂಗದವರು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಲಿ: ಪಲ್ಲವಿ