ಕನ್ನಡಪ್ರಭ ವಾರ್ತೆ ಬಂಗಾರಪೇಟೆ
ತಾಲೂಕಿನಲ್ಲಿ ಬೇಸಿಗೆ ಕಾಲ ಈಗಾಗಲೇ ಆರಂಭವಾಗಿರುವ ಹಿನ್ನೆಲೆ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬರದಂತೆ ಗ್ರಾಪಂ ಪಿಡಿಒಗಳು ಈಗನಿಂದಲೇ ಮುಂಜಾಗ್ರತೆ ವಹಿಸಬೇಕೆಂದು ಸೂಚಿಸಲಾಗಿದೆ ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ತಿಳಿಸಿದರು. ತಾಲೂಕು ಕಚೇರಿಯ ಸಭಾಂಗಣದಲ್ಲಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲಿಕ್ಕೆ ಕರೆದಿದ್ದ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ಒಟ್ಟಾರೆಯಾಗಿ ಯಾವುದೇ ಗ್ರಾಮಗಳಲ್ಲೂ ಕುಡಿಯುವ ನೀರು ಸಮಸ್ಯೆ ಆಗದಂತೆ, ಸಮಗ್ರವಾಗಿ ನಿರ್ವಹಣೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.ನೀರಿನ ಕೊರತೆ ಆಗದಂತೆ ಕ್ರಮನಾನು ಸಹ ಕುಡಿಯುವ ನೀರಿನ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದೆ ಆಗಾಗ ಪರಿಶೀಲನೆ ಮಾಡುತ್ತಿದ್ದೇನೆ. ಯಾವುದೇ ಸಮಸ್ಯೆ ಬಾರದ ರೀತಿಯಲ್ಲಿ ಖಂಡಿತವಾಗಿಯೂ ಕ್ರಮವನ್ನು ತೆಗೆದುಕೊಳ್ಳುತ್ತೇನೆ. ಗ್ರಾಮಾಂತರವಾಗಲಿ ಅಥವಾ ನಗರ ವ್ಯಾಪ್ತಿಯಲ್ಲಾಗಬಹುದು, ಎಲ್ಲಾ ಕಡೆಯೂ ನೀರಿನ ಸಮಸ್ಯೆ ಬಾರದಂತೆ ಕ್ರಮಗಳನ್ನು ತೆಗೆದುಕೊಳ್ಳುತ್ತೇನೆ. ಈ ವಿಚಾರವಾಗಿ ಎಲ್ಲಾ ಅಧಿಕಾರಿಗಳನ್ನು ಕರೆಸಿ ಚರ್ಚೆ ಮಾಡಿ ಸೂಕ್ತ ನಿರ್ದೇಶನಗಳನ್ನು ನೀಡಿದ್ದೇನೆ ಎಂದರು.
ಈಗಾಗಲೇ ತಾಲೂಕಿನಲ್ಲಿ ನಾಲ್ಕೈದು ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಕಾಣಿಸಿಕೊಂಡಿದೆ, ತಾಲೂಕಿನಲ್ಲಿ ಹೆಚ್ಚಿಗೆ ನೀರಿನ ಸಮಸ್ಯೆ ಇಲ್ಲ, ನೀರಿನ ಸಮಸ್ಯೆ ಇರುವ ಕಡೆ ಕೊಳವೆಬಾವಿಗಳನ್ನು ಕೊರೆಸಿ ಪಂಪು ಮೋಟಾರನ್ನು ಅಳವಡಿಸಲು ಸೂಚನೆ ನೀಡಲಾಗಿದೆ. ಹಾಗೂ ಕೆಲವು ಕಡೆ ವಿದ್ಯುತ್ ಶಕ್ತಿ ಕೊರತೆಗೆ ಅಲ್ಲಿಯೂ ಬೆಸ್ಕಾಂ ಇಂಜಿನಿಯರ್ ಜೊತೆ ಮಾತನಾಡಿ, ಕೊಳವೆಬಾವಿಗಳಿಗೆ ವಿಳಂಬ ಮಾಡದೆ ತ್ವರಿತವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂದು ಕಟ್ಟುನಿಟ್ಟಾಗಿ ಆದೇಶ ನೀಡಲಾಗಿದೆ ಎಂದರು.ಈ ಸಂದರ್ಭದಲ್ಲಿ ತಹಸೀಲ್ದಾರ್ ರಶ್ಮಿ, ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ರವಿಕುಮಾರ್ ಹಾಗೂ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಿದ್ದರು.