ಶಿವಮೊಗ್ಗ: ಶಿಕಾರಿಪುರ ತಾಲೂಕು ಅಂಜನಾಪುರ ಡ್ಯಾಮ್ನಿಂದ 199 ಜನವಸತಿ ಪ್ರದೇಶಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ವಿಳಂಬ ಮಾಡದೇ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರುಗಳಿಗೆ ಶುದ್ಧವಾದ ಕುಡಿಯುವ ನೀರನ್ನು ಪೂರೈಸಲು ಅಗತ್ಯ ಕ್ರಮ ವಹಿಸಬೇಕು ಎಂದು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು.ಶಿವಮೊಗ್ಗದ ಪ್ರವಾಸಿ ಮಂದಿರದಲ್ಲಿ ಸೋಮವಾರ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಹಾಗೂ ಗುತ್ತಿಗೆದಾರರುಗಳ ಸಭೆ ಕರೆದು ಈ ಯೋಜನೆಯ ಅನುಷ್ಠಾನದಲ್ಲಿ ಈಗಾಗಲೇ ಸಾಕಷ್ಟು ವಿಳಂಬವಾಗಿದ್ದು, ಕಾಮಗಾರಿಯ ವೇಗವನ್ನು ಚುರುಕುಗೊಳಿಸುವಂತೆ ಸೂಚಿಸಿದರು.
ಅರಣ್ಯ ಪ್ರದೇಶದಲ್ಲಿ ಬರುವ ಜಾಗವನ್ನು ತ್ವರಿತ ಗತಿಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ನಿಯಮಾನುಸಾರ ನಿರಾಕ್ಷೇಪಣಾ ಪತ್ರವನ್ನು ನೀಡುವಂತೆ ಸಾಗರ ಉಪ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಪಂ ಸಿಇಒ ಎನ್.ಹೇಮಂತ್, ಸಾಗರ ಉಪ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್ ಕುಮಾರ್, ದಿಶಾ ಸಮಿತಿಯ ಸದಸ್ಯ ಕೆ.ಎಸ್.ಗುರುಮೂರ್ತಿ, ಎಂಜಿನಿಯರ್ ರೂಪ್ಲಾನಾಯ್ಕ, ಎಇಇ ಶ್ರೀ ನಾಗೇಶಪ್ಪ, ಕೆಎಲ್ಎಸ್ಆರ್ ಇನ್ ಫ್ರಾಟೆಕ್ ಲಿಮಿಟೆಡ್ ನ ನಿರ್ದೇಶಕ ಶ್ರೀನಿವಾಸ, ನಿಪ್ಪಾನ್ ಕೋಯಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಶ್ರೀ ನರೇಂದ್ರ ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.