ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ತಾಲೂಕಿನ ದಂಡಿಗನಹಳ್ಳಿ ಹೋಬಳಿ ಉದಯಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ೨೦೨೪-೨೫ನೇ ಸಾಲಿನ ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಆಯೋಜನೆ ಮಾಡಲಾಗಿತ್ತು.ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ಎಚ್.ಎನ್ ಮಂಜುರಾಜ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಅಡಗಿರುವ ಬಹುಮುಖ ಪ್ರತಿಭೆಯನ್ನು ಅನಾವರಣಗೊಳಿಸುವ ಬಹುಮುಖ್ಯವಾದ ಮಾಧ್ಯಮವೇ ಈ ಸಮಾರಂಭ. ಆದರೆ ಇಂದು ವಿದ್ಯಾರ್ಥಿಗಳಲ್ಲಿ ಸೃಜನಶೀಲ ಪ್ರತಿಭೆ ಮಾಯವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಮೊಬೈಲ್ ಬಳಕೆಯಿಂದ ಆಗುವ ಅನುಕೂಲ ಮತ್ತು ಅನಾನುಕೂಲಗಳನ್ನು ವಿವರಿಸುತ್ತಾ ಯಾವುದೇ ಕೆಲಸ ಮಾಡಿದರೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದರೆ ಯಶಸ್ಸು ಸಿಗುತ್ತದೆ ಎನ್ನುವ ಆಶಯವನ್ನು ವ್ಯಕ್ತಪಡಿಸಿದರು. ಅನಾವಶ್ಯಕವಾಗಿ ರೀಲ್ಸ್ ಮಾಡುತ್ತಾ ಕಾಲಕಳೆಯುವ ಬದಲು ಉಪಯುಕ್ತ ಕಾರ್ಯಕ್ರಮಗಳನ್ನು ಅಪ್ಲೋಡ್ ಮಾಡುವುದರ ಮೂಲಕ ಹಣ ಮತ್ತು ಕೀರ್ತಿ ಗಳಿಸಬಹುದೆಂದು ಉದಾಹರಣೆಗಳ ಮೂಲಕ ವಿವರಿಸಿದರು. ಆದರೆ ಇಂದಿನ ಯುವಜನತೆ ನೈಜ ಗುರಿಯನ್ನು ಸಾಧಿಸದೆ ಅನಾವಶ್ಯಕವಾಗಿ ಕಾಲಹರಣ ಮಾಡುತ್ತಿದ್ದಾರೆ ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಡಾ. ಎಂ.ಕೆ. ಮಹೇಶ್ ಮಾತನಾಡಿ, ಪಠ್ಯೇತರ ಚಟುವಟಿಕೆಗಳ ಮಹತ್ವವನ್ನು ವಿವರಿಸುತ್ತಾ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕಗಳು ತುಂಬಾ ಅನಿವಾರ್ಯವಾಗಿದೆ. ವಿದ್ಯಾರ್ಥಿಗಳಿಗೆ ಸೂಕ್ತವಾದ ವೇದಿಕೆಯನ್ನು ಪ್ರಾಮಾಣಿಕವಾಗಿ ಕಾಲೇಜು ಒದಗಿಸಿದೆ ಎಂದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲರಾದ ಡಾ. ಎಚ್.ಡಿ ಕುಮಾರ್ ಮಾತನಾಡುತ್ತಾ ಕಾಲೇಜು ವಿದ್ಯಾರ್ಥಿಗಳಿಗೆ ಸೂಕ್ತವಾದ ಸೌಲಭ್ಯವನ್ನು ಒದಗಿಸಲಾಗಿದೆ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವುದರ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಸಹಕಾರವನ್ನು ನೀಡಲಾಗಿದೆ ಎಂದರು. ನಮ್ಮ ಕಾಲೇಜಿನಿಂದ ೨೦೨೩-೨೪ರಲ್ಲಿ ೨೪ ವಿದ್ಯಾರ್ಥಿಗಳು, ೨೦೨೪-೨೫ ರಲ್ಲಿ ೨೬ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ರಾಜ್ಯದ ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಪ್ರವೇಶ ಪಡೆದಿದ್ದರು ಪ್ರತಿ ವರ್ಷದಂತೆ ಕಾಲೇಜಿನ ಸಮಾರೋಪ ಸಮಾರಂಭದಲ್ಲಿ ಸನ್ಮಾನಿಸಲಾಯಿತು.ಸಮಾರಂಭದಲ್ಲಿ ನೆರೆದಿದ್ದ ಅತಿಥಿಗಳನ್ನು ಸ್ಕೌಟ್ಸ್ ಅಂಡ್ ಗೈಡ್ಸ್ ಸಂಚಾಲಕರಾದ ಡಾ.ನಾಗೇಂದ್ರ ಅವರು ವಂದಿಸಿದರು. ಸಮಾರಂಭದಲ್ಲಿ ಕಾಲೇಜಿನ ಅಧ್ಯಾಪಕರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.