ಕನ್ನಡಪ್ರಭ ವಾರ್ತೆ ಹಾಸನ
ಕೋಮುವಾದಿ ಶಕ್ತಿಗಳಿಗೆ ಕಡಿವಾಣ ಹಾಕಲು ಮತ್ತು ಅಲ್ಲಿನ ಸಮಾಜದಲ್ಲಿ ಸಾಮರಸ್ಯ ಮೂಡಿಸಲು ಸ್ಪಷ್ಟವಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತೀರ್ಮಾನಿಸಿ, ನಾವು ಈ ಮೂಲಕ ಹಾಸನ ಜಿಲ್ಲೆಯ ಜನರ ಪರವಾಗಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದೇವೆ ಎಂದರು.
ಪ್ರಮುಖ ಬೇಡಿಕೆಗಳು:ಕರಾವಳಿ ಜಿಲ್ಲೆಗಳಲ್ಲಿ ಕೋಮುವಾದದ ವಿಷ ಜ್ವಾಲೆ ತೀವ್ರವಾಗುತ್ತಿರುವುದರಿಂದ ತಕ್ಷಣವೇ ಇದನ್ನು ಮತೀಯವಾದ ಉಲ್ಭಣಗೊಂಡಿರುವ "ರೆಡ್ ಝೋನ್ " ಎಂದು ಘೋಷಿಸಬೇಕು. ಇಲ್ಲಿ ಕೋಮು ಸೌಹಾರ್ದತೆ, ಪರಸ್ಪರ ಜನರಲ್ಲಿ ಸಾಮರಸ್ಯ ಮೂಡಿಸಲು ರಾಜ್ಯ ಸರ್ಕಾರವು ತಕ್ಷಣಕ್ಕೆ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ವಿಶೇಷ ಯೋಜನೆಗಳನ್ನು ರೂಪಿಸಿ, ಯುದ್ಧೋಪಾದಿಯಲ್ಲಿ ಅದನ್ನು ಜಾರಿಗೊಳಿಸಬೇಕು. ಗುಂಪು ಹತ್ಯೆ ಪ್ರಕರಣವನ್ನು ವಿಶೇಷ ತನಿಖಾ ತಂಡದ ಮೂಲಕ ಹೊಸ ಎಫ್ಐಆರ್ ದಾಖಲಿಸಿ ಮರು ತನಿಖೆ ನಡೆಸಬೇಕು. ಕುಡುಪು ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ, ದ್ವೇಷ ಭಾಷಣಗಳು, ಮತೀಯ ದ್ವೇಷದ ಕೊಲೆ, ಪ್ರತಿಕೊಲೆಗಳನ್ನು ತಡೆಯಲು ಯಾವ ಯತ್ನವನ್ನೂ ಮಾಡದ ಆರೋಪ ಹೊತ್ತಿರುವ ಅಂದಿನ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರನ್ನು ತನಿಖೆಗೆ ಒಳಪಡಿಸಬೇಕು. ಈ ಗುಂಪು ಹತ್ಯೆ, ಕೊಳತ್ತಮಜಲು ಅಬ್ದುಲ್ ರೆಹಮಾನ್ ಕೊಲೆ ಪ್ರಕರಣದಲ್ಲಿ ತಕ್ಷಣವೆ ಸಮರ್ಥ ವಿಶೇಷ ಅಭಿಯೋಜಕರನ್ನು ನೇಮಿಸಬೇಕು. ಈ ಅವಧಿಯಲ್ಲಿ ಮತೀಯ ದ್ವೇಷದಿಂದ ಹತ್ಯೆಗೀಡಾದ ಅಮಾಯಕರ ಕುಟುಂಬಗಳಿಗೆ ಪರಿಹಾರ ಧನ ಒದಗಿಸಿ ಪುನರ್ವಸತಿ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು. ಕರಾವಳಿ ಜಿಲ್ಲೆಗಳಲ್ಲಿ ದ್ವೇಷ ಭಾಷಣ, ಪ್ರತೀಕಾರದ ಕರೆಗಳನ್ನು ನೀಡುವ ವ್ಯಕ್ತಿಗಳ ಮೇಲೆ ಸರ್ಕಾರ ಯಾವುದೇ ಮುಲಾಜಿಲ್ಲದೆ ನಿರ್ದಾಕ್ಷಿಣ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ಇಂತಹ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಆರೋಪಿಗಳಿಗೆ ಸುಲಭದಲ್ಲಿ ಜಾಮೀನು, ತಡೆಯಾಜ್ಞೆಗಳು ದೊರಕದಂತೆ ನೋಡಲು ಪ್ರತ್ಯೇಕವಾಗಿ ವಿಶೇಷ ಅಭಿಯೋಜಕರನ್ನು ನೇಮಿಸಬೇಕು. ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಕೋಮುವಾದ ಪ್ರೇರಿತ ಕೊಲೆ, ಪ್ರತಿಕೊಲೆಗಳನ್ನು ವಿಶೇಷ ತನಿಖಾ ತಂಡದ ಮೂಲಕ ಮರು ತನಿಖೆಗೆ ಒಳಪಡಿಸಬೇಕು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಶಕದಿಂದ ಸರಣಿ ಹತ್ಯೆಗಳು ತಡೆಯಿಲ್ಲದೆ ನಡೆಯುತ್ತಾ ಬಂದಿದೆ. ರಾಜಕೀಯ ಬೆಂಬಲಗಳಿಲ್ಲದೆ ಇದು ಅಸಾಧ್ಯದ ಸಂಗತಿ. ಈ ಕುರಿತಾದ ಸಂಚು, ಉದ್ದೇಶಗಳನ್ನು ಬಯಲಿಗೆ ತರುವುದು, ಸತ್ಯ ಸಂಗತಿಗಳನ್ನು ಬಯಲಿಗೆ ತರುವುದು ಅತಿ ಅಗತ್ಯ. ಅದಕ್ಕಾಗಿ ಮೂರು ದಶಕದ ಅವಧಿಯಲ್ಲಿ ನಡೆದಿರುವ ಇಂತಹ ಕೊಲೆ, ಹಿಂಸೆಗಳನ್ನು ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಲು ಆದೇಶ ಹೊರಡಿಸಬೇಕು ಎಂದರು.
ಈ ಕೋಮುವಾದದ ವಿಷಜ್ವಾಲೆ ದಕ್ಷಿಣ ಕನ್ನಡದಿಂದ ಪ್ರೇರಣೆ ಪಡೆದು ಇತರ ಜಿಲ್ಲೆಗಳಿಗೂ ಹಬ್ಬುವ ಸೂಚನೆಗಳು ತೀವ್ರವಾಗಿ ಕಾಣುತ್ತಿರುವುದರಿಂದ ತಕ್ಷಣವೇ ಇದನ್ನು ತಡೆಗಟ್ಟಲು ಪ್ರಯತ್ನಿಸಬೇಕು. ಕರ್ನಾಟಕದಲ್ಲಿ ಕೋಮು ದ್ವೇಷ ಹರಡದಂತೆ ಕಟ್ಟು ನಿಟ್ಟಿನ ಕಾನೂನು ರೂಪಿಸಿ ಜಾರಿಗೊಳಿಸಿ ತಡೆಗಟ್ಟಲು ಕಠಿಣ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ಹಸಿರುಭೂಮಿ ಪ್ರತಿಷ್ಠಾನದ ಸಂಸ್ಥಾಪಕ ಆರ್. ಪಿ ವೆಂಕಟೇಶ್ ಮೂರ್ತಿ, ಹಿರಿಯ ದಲಿತ ಮುಖಂಡ ಎಚ್.ಕೆ. ಸಂದೇಶ್, ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಎಚ್.ಆರ್. ನವೀನ್ ಕುಮಾರ್, ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಎಂ.ಜಿ. ಪೃಥ್ವಿ, ದಸಂಸ ಮುಖಂಡ ರಾಜಶೇಖರ್ ಹುಲಿಕಲ್, ಮಾದಿಗ ದಂಡೋರ ಜಿಲ್ಲಾಧ್ಯಕ್ಷ ಟಿ.ಆರ್. ವಿಜಯ್ ಕುಮಾರ್, ಸಾಹಿತಿ ಹರೀಶ್ ಕಟ್ಟೆಬೆಳಗುಲಿ, ಟಿಪ್ಪು ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಮುಬಷಿರ್ ಅಹಮದ್, ತೌಫಿಕ್ ಅಹಮದ್, ಅನ್ಸರ್ ಅಹಮದ್, ಎಸ್ಎಫ್ಐ ಕಾರ್ಯದರ್ಶಿ ರಮೇಶ್ ಇತರರು ಇದ್ದರು.