ಸರ್ಕಾರಿ ನೌಕರರ ನೈತಿಕ ಸ್ಥೈರ್ಯ ಕುಗ್ಗಿಸಬೇಡಿ

KannadaprabhaNewsNetwork | Published : Apr 22, 2025 1:49 AM

ಸಾರಾಂಶ

ಸರ್ಕಾರಿ ನೌಕರರು ಸಾರ್ವಜನಿಕರನ್ನು ಪದೇ ಪದೇ ಕಚೇರಿಗಳಿಗೆ ಅಲೆಯುವಂತೆ ಮಾಡಬಾರದು ಮತ್ತು ಅನವಶ್ಯಕವಾಗಿ ಕಿರುಕುಳ ಕೊಡದೆ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಸರ್ಕಾರಿ ಕಚೇರಿಗಳ ಮೇಲೆ ಸಾರ್ವಜನಿಕರಿಗೆ ವಿಶ್ವಾಸ ಹೆಚ್ಚಾಗುವಂತೆ ನಡೆದುಕೊಂಡು ಜನರ ವಿಶ್ವಾಸವನ್ನು ಗಳಿಸಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಉತ್ತಮವಾಗಿ ಮತ್ತು ಪ್ರಾಮಾಣಿಕವಾಗಿ ತಮ್ಮ ಕರ್ತವ್ಯ ನಿರ್ವಹಿಸುವ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರ ಮೇಲೆ ವೈಯಕ್ತಿಕ ದ್ವೇಷ ಹಾಗೂ ರಾಜಕೀಯ ಪ್ರೇರಿತವಾಗಿ ಪ್ರಕರಣ ದಾಖಲಿಸಿ ಅವರನ್ನು ಬ್ಲಾಕ್‌ಮೇಲ್ ಮಾಡಿ ಅವರ ನೈತಿಕ ಸ್ಟೈರ್ಯ ಕುಗ್ಗಿಸುವುದು ಸರಿಯಲ್ಲ ಎಂದು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.

ಜಿಲ್ಲಾಡಳಿತ ಮತ್ತು ಜಿಲ್ಲಾ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ(2023) ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು.

ಜನರನ್ನು ಕಚೇರಿಗೆ ಅಲೆಸಬೇಡಿ

ಸರ್ಕಾರಿ ನೌಕರರು ಸಾರ್ವಜನಿಕರನ್ನು ಪದೇ ಪದೇ ಕಚೇರಿಗಳಿಗೆ ಅಲೆಯುವಂತೆ ಮಾಡಬಾರದು ಮತ್ತು ಅನವಶ್ಯಕವಾಗಿ ಕಿರುಕುಳ ಕೊಡದೆ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಸರ್ಕಾರಿ ಕಚೇರಿಗಳ ಮೇಲೆ ಸಾರ್ವಜನಿಕರಿಗೆ ವಿಶ್ವಾಸ ಹೆಚ್ಚಾಗುವಂತೆ ನಡೆದುಕೊಂಡು ಜನರ ವಿಶ್ವಾಸವನ್ನು ಗಳಿಸಿಕೊಳ್ಳಬೇಕು. ಸಾರ್ವಜನಿಕರೂ ಅತ್ಯಂತ ಜವಾಬ್ದಾರಿಯಿಂದ ನಡೆದುಕೊಳ್ಳುವ ಅಗತ್ಯವಿದೆ. ಅಧಿಕಾರಿಗಳು ಮತ್ತು ಸರ್ಕಾರಿ ನೌಕರರನ್ನು ಬ್ಲಾಕ್ ಮೇಲ್ ಮಾಡುವುದು, ಪ್ರಕರಣ ದಾಖಲಿಸುವ ಮೂಲಕ ಅವರ ನೈತಿಕ ಸ್ಟೈರ್ಯವನ್ನು ಕುಗ್ಗಿಸಬಾರದು ಎಂದು ಕರೆ ನೀಡಿದರು.

ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸನ್ನು ಜಾರಿ ಮಾಡಿ ವೇತನ ಪರಿಷ್ಕರಿಸಿ ನುಡಿದಂತೆ ನಡೆದುಕೊಂಡಿದೆ. ಬಜೆಟ್ ನಲ್ಲಿ ಸುಮಾರು 19ಸಾವಿರ ಕೋಟಿ ರೂಪಾಯಿಗಳಷ್ಟು ಹಣ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರ ವೇತನಕ್ಕಾಗಿಯೇ ವೆಚ್ಚವಾಗುತ್ತಿದೆ. ಅಧಿಕಾರಿಗಳು ಮತ್ತು ನೌಕರರು ಸಾರ್ವಜನಿಕರ ಕೆಲಸಗಳನ್ನು ನಿಗದಿತ ಕಾಲಮಿತಿಯೊಳಗೆ ಮಾಡಿಕೊಟ್ಟು ಆ ಮೂಲಕ ಪರಿಷ್ಕೃತ ವೇತನ ಶ್ರೇಣಿ ಜಾರಿ ಮಾಡಿ ಅನುಕೂಲ ಮಾಡಿದ ಸರ್ಕಾರಕ್ಕೂ ಒಳ್ಳೆಯ ಹೆಸರು ತಂದುಕೊಡಬೇಕು ಎಂದರು.

ಆರೋಗ್ಯ ಸಂಜೀವಿನಿ ಜಾರಿಗೆ ಬದ್ಧ

ಸರ್ಕಾರಿ ನೌಕರರ ಮಹತ್ವಾಕಾಂಕ್ಷಿ ಯೋಜನೆಯಾದ ನಗದು ರಹಿತ ಆರೋಗ್ಯ ಸೇವೆ ಪಡೆಯುವ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೆ ತರುವ ಸಂಬಂಧ ಸರ್ಕಾರ ಕ್ರಮವಹಿಸಿದ್ದು, ಶೀಘ್ರದಲ್ಲೇ ಈ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ದವಾಗಿದೆ. ಯಾವುದೇ ಅನುಮಾನ ಬೇಡ ಎಂದು ಸಚಿವರು ತಿಳಿಸಿದರು. ಜಿಲ್ಲಾ ಸರ್ಕಾರಿ ನೌಕರರ ಸಂಘ ಅಧ್ಯಕ್ಷ ಎ.ನಾರಾಯಣಸ್ವಾಮಿ ಮಾತನಾಡಿ, ಸರ್ಕಾರಿ ನೌಕರರಿಗೆ ಬಹಳ ಉಪಯೋಗ ಆಗಲಿರುವ ಆರೋಗ್ಯ ಸಂಜೀವಿನಿ ಯೋಜನೆಯನ್ನು ಹಾಗೂ ಹಳೆ ಪಿಂಚಣಿ ಯೋಜನೆಯನ್ನು ಆದಷ್ಟು ಶೀಘ್ರವಾಗಿ ಜಾರಿಗೆ ತರಬೇಕು ಎಂದು ಸಚಿವರ ಮುಖಾಂತರ ಮನವಿ ಮಾಡಿದರು.

ಸೇವಾ ಪ್ರಶಸ್ತಿ ಪ್ರದಾನ

ಕಂದಾಯ ಇಲಾಖೆಯ ಶಿರಸ್ತೇದಾರ್ ಸುಬ್ರಮಣಿ ಅವರು ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ ಆಗಿರುವುದಕ್ಕೆ ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ವಿವಿಧ ಇಲಾಖೆಗಳ 9 ಸರ್ಕಾರಿ ನೌಕರರಿಗೆ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಪ್ರದಾನ ಮಾಡಿ ಸನ್ಮಾನಿಸಿ ಗೌರವಿಸಲಾಯಿತುಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ರಮೇಶ್, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಪ್ರಕಾಶ್ ಜಿ.ಟಿ.ನಿಟ್ಟಾಲಿ, ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಕುಶಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಇದ್ದರು.

Share this article