ಪ್ರತಿಭಾನ್ವಿತ ಮಕ್ಕಳ ಬಹುಮಾಕ್ಕೆ 2 ಕೋಟಿ ರು. ಮೀಸಲು: ಶಾಸಕ ಡಾ.ಎಂ.ಚಂದ್ರಪ್ಪಕನ್ನಡಪ್ರಭ ವಾರ್ತೆ ಹೊಳಲ್ಕೆರೆ
ಮುಂಬರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಅಂಕಗಳನ್ನು ಗಳಿಸುವ ವಿದ್ಯಾರ್ಥಿಗಳಿಗೆ ತಲಾ 1 ಲಕ್ಷ ರು. ನಗದು ಬಹುಮಾನ ನೀಡಲಾಗುವುದು ಎಂದು ಶಾಸಕ ಡಾ.ಎಂ.ಚಂದ್ರಪ್ಪ ಘೋಷಣೆ ಮಾಡಿದರು.ಪಟ್ಟಣದ ಸಂವಿಧಾನಸೌಧದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಎರಡು ವರ್ಷ ಶಿಕ್ಷಣದಲ್ಲಿ ಹರುಷ, 2025-26ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆ ಕಾರ್ಯಾಗಾರ ಹಾಗೂ ಸರ್ಕಾರಿ ಸೌಲಭ್ಯಗಳ ವಿತರಣೆ ಮತ್ತು 10ನೇ ತರಗತಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ತಾಲೂಕಿನಲ್ಲಿ ಕನಿಷ್ಠ 200 ಮಕ್ಕಳಾದರೂ ಪ್ರತಿಶತ 100 ಅಂಕ ಗಳಿಸಬೇಕು. ಅದಕ್ಕಾಗಿ 2 ಕೋಟಿ ರು. ಮೀಸಲಿಡುತ್ತೇನೆ ಎಂದು ಅವರು ತಿಳಿಸಿದರು.ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆಯಬೇಕಾದರೆ ಈಗಿನಿಂದಲೇ ಕಷ್ಟಪಟ್ಟು ಓದಬೇಕು. ತಂದೆ-ತಾಯಿಗಳು ನಿಮ್ಮ ಮೇಲೆ ನಿರೀಕ್ಷೆಯಿಟ್ಟುಕೊಂಡಿರುತ್ತಾರೆ. ಗುರು-ಹಿರಿಯರಿಗೆ ಕೀರ್ತಿ ತರುವ ಜವಾಬ್ದಾರಿ ನಿಮ್ಮ ಮೇಲಿದೆ. ನೀವು ಓದುವ ಶಾಲೆಗಳಿಗೆ ದಿನಪತ್ರಿಕೆಗಳನ್ನು ಸರಬರಾಜು ಮಾಡಲಾಗುವುದು. ಪತ್ರಿಕೆಗಳನ್ನು ಓದುವ ಅಭ್ಯಾಸ ರೂಢಿಸಿಕೊಳ್ಳಿ. ಗುಣ ಮಟ್ಟದ ಶಾಲಾ-ಕಾಲೇಜುಗಳನ್ನು ಕಟ್ಟಿಸಿ ನುರಿತ ಶಿಕ್ಷಕರುಗಳನ್ನು ನೇಮಿಸಲಾಗಿದೆ. ಮಧ್ಯಾಹ್ನದ ಬಿಸಿಯೂಟ, ಪಠ್ಯಪುಸ್ತಕ, ಶೂ, ಸಾಕ್ಸ್, ಮೊಟ್ಟೆ, ಬಾಳೆಹಣ್ಣು ನೀಡಲಾಗುತ್ತಿದೆ. ಸರ್ಕಾರದಿಂದ ಎಲ್ಲಾ ಸೌಲಭ್ಯಗಳು ಸಿಗುತ್ತಿವೆ. ಯಾವುದೇ ಸೌಲತ್ತು ಇಲ್ಲದ ಕಷ್ಟದ ಕಾಲದಲ್ಲಿ ನಾವು ಓದಿದ್ದೇವೆ. ನಿಮಗೆ ಎಲ್ಲಾ ರೀತಿಯ ಅನುಕೂಲಗಳಿವೆ. ಸದುಪಯೋಗಪಡಿಸಿಕೊಳ್ಳಿ. ಯಾವುದೇ ಒಂದು ದೇಶ ಅಭಿವೃದ್ದಿಯಾಗಬೇಕಾದರೆ ವಿದ್ಯಾವಂತರ ಸಂಖ್ಯೆ ಜಾಸ್ತಿಯಾಗಬೇಕು. ಹಾಗಾಗಿ ಕಷ್ಟಪಟ್ಟು ಓದಿ ಪಿ.ಯು.ಸಿ. ನಂತರ ತಾಂತ್ರಿಕ ಶಿಕ್ಷಣಕ್ಕೆ ಸೀಟು ಗಳಿಸುವುದು ಸುಲಭವಲ್ಲ. ಶೇ.95ಕ್ಕಿಂತ ಹೆಚ್ಚಿನ ಅಂಕ ಪಡೆಯಬೇಕು ಎಂದು ವಿದ್ಯಾರ್ಥಿಗಳಿಗೆ ಶಾಸಕ ಡಾ.ಎಂ.ಚಂದ್ರಪ್ಪ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷ ವಿಜಯಸಿಂಹ ಖಾಟ್ರೋತ್, ಉಪಾಧ್ಯಕ್ಷೆ ನಾಗರತ್ನ ವೇದಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್, ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಲೋಕೇಶ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.