ಕನ್ನಡಪ್ರಭ ವಾರ್ತೆ ಮಡಿಕೇರಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕಿನ ಪೆರಾಜೆ, ಚೆಂಬು, ಸಂಪಾಜೆ, ಮದೆನಾಡು, ಮೇಕೇರಿ, ಹಾಗೂ ಹಾಕತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುರುವಾರ ಚಾಲನೆ ದೊರಕಿತು.
ಪೆರಾಜೆ ಗ್ರಾ.ಪಂ.ವ್ಯಾಪ್ತಿಯಲ್ಲಿ ರಸ್ತೆ, ಕುಡಿಯುವ ನೀರು, ಸೇತುವೆ ಕಾಮಗಾರಿ, ಹಾಗೆಯೇ ಚೆಂಬು ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆ ನಿರ್ಮಾಣಕ್ಕೆ ಚಾಲನೆ, ಆಟದ ಮೈದಾನ ನಿರ್ಮಾಣಕ್ಕಾಗಿ ಕ್ರೀಡಾ ಇಲಾಖೆಗೆ 4 ಎಕರೆ ಭೂಮಿ ಹಸ್ತಾಂತರ, ತಡೆಗೋಡೆ ಉದ್ಘಾಟನೆ, ಮದೆನಾಡು ಗ್ರಾ.ಪಂ.ವ್ಯಾಪ್ತಿಯ ಕಾಟಕೇರಿ ಬಳಿ 12.6 ಕೋಟಿ ರೂ ವೆಚ್ಚದಲ್ಲಿ 66/11 ಕೆ.ವಿ. ಸಾಮರ್ಥ್ಯದ ವಿದ್ಯುತ್ ಉಪ ಕೇಂದ್ರ ನಿರ್ಮಾಣಕ್ಕೆ ಭೂಮಿಪೂಜೆ, ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯ 4 ಕೋಟಿ ರು. ವೆಚ್ಚದ ರಸ್ತೆ ನಿರ್ಮಾಣ ಮತ್ತಿತರ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಸಾರ್ವಜನಿಕರ ಅಹವಾಲು ಆಲಿಸಿ ಮನವಿ ಪತ್ರಗಳನ್ನು ಸ್ವೀಕರಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ ರಸ್ತೆ, ಕುಡಿಯುವ ನೀರು, ವಿದ್ಯುತ್ ಸಂಪರ್ಕ ಸೇರಿದಂತೆ ವಿವಿಧ ಅಭಿವೃದ್ಧಿಗೆ ಸುಮಾರು 250 ಕೋಟಿ ರು.ಗೆ ಅನುಮೋದನೆ ನೀಡಿದೆ ಎಂದು ಎ.ಎಸ್.ಪೊನ್ನಣ್ಣ ಮಾಹಿತಿ ನೀಡಿದರು.
ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದ್ದು, ರಸ್ತೆ, ಕುಡಿಯುವ ನೀರು, ವಿದ್ಯುತ್ ಪೂರೈಕೆಗೆ ಪ್ರಥಮ ಆದ್ಯತೆ ನೀಡಿದೆ. ಆ ನಿಟ್ಟಿನಲ್ಲಿ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಸರ್ಕಾರ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದರು.
ಸಾರ್ವಜನಿಕರೊಬ್ಬರು ಮಾತನಾಡಿ, ಚೆಂಬು ಗ್ರಾ.ಪಂ.ಕಚೇರಿಯಿಂದ ಕುದುರೆಪಾಯ ಮಾರ್ಗದ ಮೂರು ಕಡೆಗಳಲ್ಲಿ ರಸ್ತೆಯನ್ನು ಅಗೆದಿದ್ದು, ಹಾಳು ಮಾಡಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮವಹಿಸಬೇಕು. ರಸ್ತೆ ಕಾಮಗಾರಿ ಹೆಸರಿನಲ್ಲಿ ದುರುಪಯೋಗ ಆಗಬಾರದು ಎಂದು ಶಾಸಕರ ಗಮನಕ್ಕೆ ತಂದರು.
ಚೆಂಬು ಗ್ರಾಮದ ಪ್ರಮುಖರಾದ ಹೊಸೂರು ಸೂರಜ್ ಮಾತನಾಡಿ ಪೆರಾಜೆ, ಚೆಂಬು, ಸಂಪಾಜೆ ಭಾಗಕ್ಕೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರು ಹೆಚ್ಚಿನ ಅನುದಾನ ಒದಗಿಸಿ ರಸ್ತೆ, ಕುಡಿಯುವ ನೀರು, ವಿದ್ಯುತ್ ಸಂಪರ್ಕ ಮತ್ತಿತರ ಮೂಲ ಸೌಲಭ್ಯಕ್ಕೆ ಒತ್ತು ನೀಡಿದ್ದಾರೆ. ಹಾಗೆಯೇ ದೇವಾಲಯಗಳ ಅಭಿವೃದ್ಧಿಗೂ ಸಹ ಕೈಜೋಡಿಸಿದ್ದಾರೆ ಎಂದು ಹೇಳಿದರು.