ಕನ್ನಡಪ್ರಭ ವಾರ್ತೆ ಬೇಲೂರು ಮಾನವೀಯ ಮೌಲ್ಯಗಳ ಜೊತೆಗೆ ನಾನು ಭವಿಷ್ಯದಲ್ಲಿ ಉತ್ತಮ ಸ್ಥಾನ ಪಡೆಯಬೇಕು ಎನ್ನುವ ಪ್ರೇರಣೆಯೊಂದಿಗೆ ಜೀವನವನ್ನು ಧೈರ್ಯದಿಂದ ಎದುರಿಸಬಲ್ಲೆ ಎಂಬ ಧೈರ್ಯವನ್ನು ಮೈಗೂಡಿಸಿಕೊಳ್ಳಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಹೇಳಿದರು.
ಬಿಜಿಎಸ್ ವಿದ್ಯಾಸಂಸ್ಥೆಯ ಪ್ರಾಂಶುಪಾಲ ದಿವ್ಯಕುಮಾರ್ ಮಾತನಾಡಿ, ಸ್ವಾಮೀಜಿಯವರ ಆಶಯದಂತೆ ಪ್ರತಿಯೊಬ್ಬ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಕಾರ್ಯಾಗಾರವನ್ನು ತಾಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಅವಕಾಶ ಕಲ್ಪಿಸಲಾಗುತ್ತಿದೆ. ಪರೀಕ್ಷೆ ಸಂದರ್ಭದಲ್ಲಿ ಭಯಬಿಟ್ಟು ಹಿಂದೇಟು ಹಾಕದಂತೆ ಪ್ರತಿನಿತ್ಯ ಶ್ರದ್ಧೆಯಿಂದ ಓದಿ ಶಿಕ್ಷಕರು ತಿಳಿಸಿದ ಮಾಹಿತಿಯನ್ನು ಗಮನದಲ್ಲಿಟ್ಟುಕೊಂಡು ಓದಬೇಕು. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಅತಿ ಹೆಚ್ಚಾಗಿ ಸಾಮಾಜಿಕ ಜಾಲತಾಣ ಬಳಸುತ್ತಿರುವುದರಿಂದ ಶಿಕ್ಷಣದ ಮೇಲೆ ಪರಿಣಾಮ ಬೀಳುತ್ತಿದೆ. ಇದರ ಬಗ್ಗೆ ಪೋಷಕರು ನಿಗಾವಹಿಸಬೇಕು. ವಿದ್ಯಾರ್ಥಿಗಳು ಹೆಚ್ಚಿನ ಅಂಕ ಪಡೆದು ಭವಿಷ್ಯದಲ್ಲಿ ಮುಂದೆ ಬರಬೇಕು ಎಂದರು.
ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಮಂಜುನಾಥ ರೆಡ್ಡಿ ಹಾಗೂ ಡಾ. ಶಿವಕುಮಾರ್ ಉಪನ್ಯಾಸ ನಡೆಸಿಕೊಟ್ಟರು. ಸರ್ವೋದಯ ಪ್ರಾಂಶುಪಾಲ ಪ್ರಕಾಶ್, ಗಿರೀಶ್, ರಾಜಮಲ್ ನಾಯಕ್, ಗೋಪಾಲ, ಅರೇಹಳ್ಳಿ ರಂಜಿತ್, ಇತರರು ಇದ್ದರು.