ಒಂದು ಟೈಲರ್ ಅಂಗಡಿಯಿಂದ ಆರಂಭವಾದ ಈ ರವಿಕೆ ಪುಸಂಗ ಕೋರ್ಟ್ ಮೆಟ್ಟಿಲೇರಿದಾಗ ಅದಕ್ಕೆ ಸಮಾಜ ಹೆಣ್ಣನ್ನು ನೋಡುವ ಪರಿಯೇ ಈ ಚಿತ್ರದ ಕತೆಯ ಎಳೆಯಾಗಿದೆ.
ಕನ್ನಡಪ್ರಭ ವಾರ್ತೆ ಉಡುಪಿ
ಸಿನಿಮಾ ಕಥೆಯ ಮೂಲಕ ಕೇವಲ ಮನರಂಜನೆ ಹಾಗೂ ಸಂದೇಶ ನೀಡಿದರೆ ಸಾಲದು, ನೋಡುಗರಿಗೆ ಆ ಚಿತ್ರ ತಮ್ಮದೆ, ತಮ್ಮ ಬದುಕಿನ ಭಾಗ ಎನ್ನುವ ಭಾವನೆ ಮೂಡಬೇಕು. ಹಾಗಾಗಿ ಈ ರವಿಕೆ ಪ್ರಸಂಗ ಸಿನಿಮಾದಲ್ಲಿ ರವಿಕೆಯಿಂದಲೇ ರವಿಕೆಯೊಳಗಿನ ಮನಸ್ಸಿನ ಭಾವನೆಯನ್ನು ಅನಾವರಣಗೊಳಿಸಲಾಗಿದೆ. ಆದ್ದರಿಂದ ಜನರು ಖಂಡಿತ ಸಿನಿಮಾ ಮೆಚ್ಚುತ್ತಾರೆ ಎಂಬ ವಿಶ್ವಾಸವಿದೆ ಎಂದು ಸಿನಿಮಾದ ನಿರ್ದೇಶಕ ಸಂತೋಷ್ ಕೊಡಂಕೇರಿ ಭರವೆಸ ವ್ಯಕ್ತಪಡಿಸಿದ್ದಾರೆ.
ಅವರು ಸಿನಿಮಾದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಒಂದು ಟೈಲರ್ ಅಂಗಡಿಯಿಂದ ಆರಂಭವಾದ ಈ ರವಿಕೆ ಪುಸಂಗ ಕೋರ್ಟ್ ಮೆಟ್ಟಿಲೇರಿದಾಗ ಅದಕ್ಕೆ ಸಮಾಜ ಹೆಣ್ಣನ್ನು ನೋಡುವ ಪರಿಯೇ ಈ ಚಿತ್ರದ ಕತೆಯ ಎಳೆಯಾಗಿದೆ ಎಂದವರು ಹೇಳಿದರು.
ಚಿತ್ರದ ನಾಯಕಿ ಗೀತಾ ಭಾರತಿ ಭಟ್ ಮಾತನಾಡಿ, ಈ ಚಿತ್ರದ ಕಥೆ ದಕ್ಷಿಣ ಕನ್ನಡದ ಒಂದು ಹಳ್ಳಿಯಲ್ಲಿ ನಡೆಯುತ್ತದೆ. ಮದುವೆಗಾಗಿ ರವಿಕೆ ಹೊಲಿಯಲು ಕೊಡುವಲ್ಲಿಂದ ಸಿನಿಮಾ ಆರಂಭಗೊಂಡು ಕೋರ್ಟ್ ಮೆಟ್ಟಿಲು ಹತ್ತಿ ಕೊನೆಗೆ ಒಳ್ಳೆಯ ಸಂದೇಶದೊಂದಿಗೆ ಮುಕ್ತಾಯವಾಗುತ್ತದೆ ಎಂದರು.
ನಟ ರಘು ಪಾಂಡೇಶ್ವರ, ರವಿಕೆ ಪ್ರಸಂಗ ಸಿನಿಮಾ ಜನಸಾಮಾನ್ಯರಿಗೆ ಹತ್ತಿರವಾಗುವ ಸಿನಿಮಾ. ಒಂದೊಳ್ಳೆ ಸಬ್ಜೆಕ್ಟ್ ಇಟ್ಟುಕೊಂಡು ಸಿನಿಮಾ ಮಾಡಿದ್ದು ಪ್ರೀಮಿಯರ್ ಶೋ ವೀಕ್ಷಿಸಿದ ಜನರು ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಇದು ನಮಗೆ ಹೆಚ್ಚಿನ ಬಲ ತುಂಬಿದ್ದು ಸಿನಿಮಾ ಪ್ರೇಮಿಗಳಿಗೆ ಖಂಡಿತ ನಿರಾಸೆ ಹುಟ್ಟಿಸುವುದಿಲ್ಲ ಎಂದರು.
ಚಿತ್ರದ ತಾರಾಗಣದಲ್ಲಿ ಗೀತಾ ಭಾರತಿ ಭಟ್, ಸುಮನ್ ರಂಗನಾಥ್, ರಾಕೇಶ್ ಮಯ್ಯ, ಸಂಪತ್ ಮೈತ್ರೇಯ, ಪದ್ಮಜಾ ರಾವ್, ಕೃಷ್ಣಮೂರ್ತಿ ಕವತಾರ್, ಪ್ರವೀಣ್ ಅಥರ್ವ, ರಘು ಪಾಂಡೇಶ್ವರ್, ಹನುಮಂತೇ ಗೌಡ, ಖುಷಿ ಆಚಾರ್, ಹನುಮಂತ್ ರಾವ್ ಕೆ. ಇದ್ದಾರೆ. ಚಿತ್ರಕ್ಕೆ ಕಥೆ ಮತ್ತು ಸಂಭಾಷಣೆ ಪಾವನಾ ಸಂತೋಷ್ ಬರೆದಿದ್ದಾರೆ. ದೃಷ್ಟಿ ಮೀಡಿಯಾ ಪ್ರೊಡಕ್ಷನ್ ನಡಿಯಲ್ಲಿ ಸಿನಿಮಾ ತಯಾರಾಗಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.