ಏ.29 ರಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ

ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಎಡಿಸಿ ಶರಣಬಸಪ್ಪ ಸೂಚನೆ

KannadaprabhaNewsNetwork | Published : Apr 27, 2024 7:53 PM IST

ಕನ್ನಡಪ್ರಭ ವಾರ್ತೆ ಯಾದಗಿರಿ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಏ. 29 ರಿಂದ ಮೇ.16 ರ ವರೆಗೆ ನಡೆಯಲಿದ್ದು, 8 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2,794 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಂಡು ಪರೀಕ್ಷೆಗಳನ್ನು ಸುವ್ಯವಸ್ಥಿತ, ಶಾಂತಿಯುತವಾಗಿ ಜರುಗುವಂತೆ ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷಾ ಕೇಂದ್ರಗಳಿಗೆ ಒಟ್ಟು 98 ಪದವಿ ಪೂರ್ವ ಕಾಲೇಜುಗಳ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಜೋಡಿಸಲಾಗಿದೆ ಎಂದರು.ಯಾದಗಿರಿ ನಗರದ ನ್ಯೂ ಕನ್ನಡ ಪಿಯು ಕಾಲೇಜ್‌, ಸಭಾ ಪಿಯು ಕಾಲೇಜ್, ಮಹಾತ್ಮಾ ಗಾಂಧಿ ಪಿಯು ಕಾಜ್ಜ್‌ಜು, ಶಹಾಪುರದ ಸರಕಾರಿ ಬಾಲಕರ ಪಿಯು ಕಾಲೇಜ್, ಸರಕಾರಿ ಬಾಲಕೀಯರ ಪಿಯು ಕಾಲೇಜ್‌, ಸುರಪುರದ ಸರಕಾರಿ ಪಿಯು ಕಾಲೇಜ್‌, ಸರಕಾರಿ ಪಿಯು ಕಾಲೇಜು ರಂಗಂಪೇಟ, ಗುರುಮಿಠಕಲ್ ನ ಬಾಲಕರ ಪಿಯು ಕಾಲೇಜು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ ಎಂದು ತಿಳಿಸಿದರು.ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಪರೀಕ್ಷೆಯ ನಿಯಮಾವಳಿಗಳಂತೆ ಕಾರ್ಯನಿರ್ವಹಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿಯ ಮಾಹಿತಿ ಚಿತ್ರೀಕರಿಸುವುದು, ಚಿತ್ರೀಕರಿಸಲು ಪ್ರಯತ್ನಿಸುವುದು ಮತ್ತು ಜಾಲತಾಣಗಳಲ್ಲಿ ಹರಿಬಿಡುವುದು ಅಪರಾಧವಾಗಿರುತ್ತದೆ. ಒಂದು ವೇಳೆ ಇಂತಹ ಕೃತ್ಯ ಕಂಡುಬಂದಲ್ಲಿ ಕಠೀಣ ಕ್ರಮ ಕೈಗೊಳ್ಳಲಾಗುವುದು ಎಂದರು. ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶದಲ್ಲಿ ನಿಷೇಧಿತ ಪ್ರದೇಶ ಎಂದು ಜಿಲ್ಲಾಧಿಕಾರಿಗಳು ಘೋಷಿಸಿದ್ದಾರೆ. ಹೀಗಾಗಿ, ಪರೀಕ್ಷಾ ಕೇಂದ್ರದ ಸುತ್ತಲಿನ ಝೆರಾಕ್ಸ್, ಕಂಪ್ಯೂಟರ್ ಮಳಿಗೆಗಳನ್ನು ಮುಚ್ಚುವಂತೆ ಆದೇಶಿಸಿದ ಅವರು, ಪರೀಕ್ಷಾ ಕೇಂದ್ರಗಳಿಗೆ ಸುರಕ್ಷತೆಗೆ ಪೊಲೀಸರು ಬಂದೋಬಸ್ತ್ ಗಾಗಿ ಸಮಯಕ್ಕಿಂತ ಮುಂಚಿತವಾಗಿಯೇ ತೆರಳಬೇಕು ಎಂದರು. ಈ ವೇಳೆ ಡಿಡಿಪಿಯು ಚೆನ್ನಬಸಪ್ಪ ಕುಳಗೇರಿ, ಜಿಲ್ಲಾ ಖಜಾನೆ ಅಧಿಕಾರಿ ಮಾಳಿಂಗರಾಯ ಬಿ. ಸೇರಿದಂತೆ ಇತರ ಇಲಾಖೆಯ ಅಧಿಕಾರಿಗಳು ಇದ್ದರು.

Share this article