ಕನ್ನಡಪ್ರಭ ವಾರ್ತೆ ಕೋಲಾರ ಜಿಲ್ಲೆಯ ಪ್ರತಿಭೆಗಳು ರಾಜ್ಯದಾದ್ಯಂತ ವಿವಿಧ ಕ್ಷೇತ್ರಗಳಲ್ಲಿ ಹೆಸರು ಮಾಡುತ್ತಿದ್ದು, ಹಾಗೆಯೇ ವಿಜ್ಞಾನ ಕ್ಷೇತ್ರದಲ್ಲೂ ಇಲ್ಲಿನ ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಮೂಲಕ ರಾಜ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ. ವಿಜ್ಞಾನ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಬೇಕು ಎಂದು ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದರಾಜು ಸಲಹೆ ನೀಡಿದರು. ನಗರದ ಪತ್ರಕರ್ತರ ಭವನದಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯಿಂದ ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಜ್ಯಪ್ರಶಸ್ತಿ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಜಿಲ್ಲೆಯ ಗೌರವ ಎತ್ತಿಹಿಡಿಯಬೇಕು
ವಿಧಾನಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಮಾತನಾಡಿ, ಜಿಲ್ಲೆಯು ಅನೇಕ ಐಎಎಸ್, ಕೆಎಎಸ್ ಅಧಿಕಾರಿಗಳನ್ನು ರಾಜ್ಯಕ್ಕೆ ಕೊಡುಗೆ ನೀಡಿದ್ದು, ಯಾವುದರಲ್ಲೂ ಕಡಿಮೆ ಇಲ್ಲ. ಇಲ್ಲಿನ ವಿದ್ಯಾರ್ಥಿಗಳು ಶ್ರಮಪಟ್ಟು ವಿದ್ಯಾಭ್ಯಾಸ ಮಾಡಿ ತಂದೆ ತಾಯಿ ಮತ್ತು ಸಮಾಜ ಮೆಚ್ಚುವ ಕೆಲಸಕ್ಕೆ ನಾಂದಿ ಆಗಿರುವುದು ಸ್ವಾಗತಾರ್ಹ ಎಂದರು.ರಾಷ್ಟ್ರಕ್ಕೆ ಕೋಲಾರ ಕೊಡುಗೆ
ವಿದ್ಯಾರ್ಥಿಗಳು ಜಿಲ್ಲೆಯ ಗೌರವ ರಾಜ್ಯ-ರಾಷ್ಟ್ರದಲ್ಲಿ ಮೂಡಿಸುತ್ತಿದ್ದು ಇದೇ ನಿಟ್ಟಿನಲ್ಲಿ ನಡೆಯುತ್ತಿರುವ ಪ್ರತಿಭಾ ಸ್ಪರ್ಧೆಗಳಲ್ಲಿ ಭಾಗವಹಿಸಿ ಜಿಲ್ಲೆಯ ಗೌರವ ಕಾಪಾಡಬೇಕು, ರಾಷ್ಟ್ರದ ಸಮಗ್ರ ಪ್ರಗತಿಯಲ್ಲಿ ಕೋಲಾರ ಜಿಲ್ಲೆಯ ಕೊಡುಗೆ ಅಪಾರ ಎಂದು ಶ್ಲಾಘಿಸಿದರು.ಪತ್ರಕರ್ತ ಎಸ್.ಕೆ.ಚಂದ್ರಶೇಖರ್ ಮಾತನಾಡಿ, ವಿದ್ಯಾಭ್ಯಾಸ ಮಾಡುವಾಗ ಖಾಸಗಿ ಶಾಲೆ ಮತ್ತು ಸರ್ಕಾರಿ ಶಾಲೆ ಎರಡರಲ್ಲೂ ಉತ್ತಮ ವಿದ್ಯಾಭ್ಯಾಸ ಮತ್ತು ಗುಣಮಟ್ಟ ಶಿಕ್ಷಣ ಗುರಿಯಾಗಬೇಕು. ವಿದ್ಯಾರ್ಥಿಗೆ ಪರಿಪೂರ್ಣವಾದ ಶಿಕ್ಷಣ ನೀಡುವ ಹೊಣೆಗಾರಿಕೆ ಶಿಕ್ಷಕರ ಮತ್ತು ಪೋಷಕರ ಮೇಲೆ ಇದೆ ಎಂದು ತಿಳಿಸಿದರು.ಸಮಿತಿಯ ರಾಜ್ಯ ಉಪಾಧ್ಯಕ್ಷ ಜಿ.ಶ್ರೀನಿವಾಸ್, ರಾಜ್ಯ ಪ್ರಧಾನ ಕಾರ್ಯದರ್ಶಿ ಈ.ಬಸವರಾಜು, ಗ್ರಾಪಂ ಸದಸ್ಯ ಶ್ರೀನಿವಾಸ್ ಯಾದವ್ ಇದ್ದರು. ಜಿಲ್ಲಾ ಉಪಾಧ್ಯಕ್ಷೆ ಕೆ.ಸಿ.ಪದ್ಮಾವತಿ ನಿರೂಪಿಸಿ, ಜಿಲ್ಲಾ ಸಹ ಕಾರ್ಯದರ್ಶಿ ಶರಣಪ್ಪ ಜಮಾದಾರ್ ಸ್ವಾಗತಿಸಿ, ವಂದಿಸಿದರು.