ಪಂಚ ಗ್ಯಾರಂಟಿ ಯೋಜನೆಗಳು ವಿಶೇಷವಾಗಿ ಬಡವರಿಗೆ, ಮಧ್ಯಮವರ್ಗದವರಿಗೆ ಹಾಗೂ ಕಡು ಸಂಕಷ್ಟದಲ್ಲಿ ಇರುವ ಕುಟುಂಬಗಳಿಗೆ ಬಹಳ ಪ್ರಯೋಜನ ಆಗುವ ನಿಟ್ಟಿನಲ್ಲಿ ಬಹಳ ಚಿಂತನೆ ಮಾಡಿ ತಜ್ಞರ ಅಭಿಪ್ರಾಯದಂತೆ ರಾಜ್ಯ ಸರ್ಕಾರ ಜಾರಿ ಮಾಡಿದೆ. ಅರ್ಹ ಫಲಾನುಭವಿಗಳು ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು
ಕನ್ನಡಪ್ರಭ ವಾರ್ತೆ ಗೌರಿಬಿದನೂರು
ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರದ ಜಾರಿ ಮಾಡಿರುವ ಯುವನಿಧಿ ಯೋಜನೆಯು ಯುವ ಸಮೂಹಕ್ಕೆ ವರವಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ಎನ್. ರಮೇಶ್ ತಿಳಿಸಿದರು. ಗೌರಿಬಿದನೂರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ, ತಾಲೂಕು ಪಂಚಾಯ್ತಿ ಗೌರಿಬಿದನೂರು, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಯುವ ನಿಧಿ ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಬಡವರಿಗೆ ವರವಾದ ಗ್ಯಾರಂಟಿ
ಪಂಚ ಗ್ಯಾರಂಟಿ ಯೋಜನೆಗಳು ವಿಶೇಷವಾಗಿ ಬಡವರಿಗೆ, ಮಧ್ಯಮವರ್ಗದವರಿಗೆ ಹಾಗೂ ಕಡು ಸಂಕಷ್ಟದಲ್ಲಿ ಇರುವ ಕುಟುಂಬಗಳಿಗೆ ಬಹಳ ಪ್ರಯೋಜನ ಆಗುವ ನಿಟ್ಟಿನಲ್ಲಿ ಬಹಳ ಚಿಂತನೆ ಮಾಡಿ ತಜ್ಞರ ಅಭಿಪ್ರಾಯದಂತೆ ರಾಜ್ಯ ಸರ್ಕಾರ ಜಾರಿ ಮಾಡಿದೆ. ಅರ್ಹ ಫಲಾನುಭವಿಗಳು ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು. ಉದ್ಯೋಗಾಕಾಂಕ್ಷಿ ವಿದ್ಯಾವಂತ ಯುವ ಸಮೂಹಕ್ಕೆ ನೆರವಾಗುವ ನಿಟ್ಟಿನಲ್ಲಿ ನಿರುದ್ಯೋಗಿ ಭತ್ಯೆ (ಸ್ಟೈಪಂಡರಿ) ಯೋಜನೆಯನ್ನು ದಿವಂಗತ ದೇವರಾಜ ಅರಸು ಅವರು ಮುಖ್ಯ ಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದರು, ಇಂದಿನ ಯುವನಿಧಿ ಯೋಜನೆಯು ಅದರ ಮುಂದುವರೆದ ಭಾಗವಾಗಿದ್ದು, ಉದ್ಯೋಗಾಕಾಂಕ್ಷಿ ಪದವೀಧರರಿಗೆ 3000 ರು.ಗಳು, ಡಿಪ್ಲೊಮೋ ಅಭ್ಯರ್ಥಿಗಳಿಗೆ 1500 ರೂ ನೀಡಲಾಗುತ್ತಿದೆ ಎಂದರು.
ಹೆಸರು ನೋಂದಣಿಗೆ ಮನವಿ
ಈ ಯೋಜನೆಯಡಿ ಅಭ್ಯರ್ಥಿಗಳನ್ನು ನೋಂದಣಿ ಮಾಡುವ ಪ್ರಕ್ರಿಯೆಯು ನಿರಂತವಾಗಿ ಚಾಲನೆಯಲ್ಲಿದ್ದು, ಅಭ್ಯರ್ಥಿಗಳೆ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಈ ಸಂಬಂಧ ಯಾವುದೇ ತೊಡಕುಗಳಿದ್ದಲ್ಲಿ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿಯನ್ನು ಸಂಪರ್ಕಿಸುವಂತೆ ಮನವಿ ಮಾಡಿದರು. ಜಿಲ್ಲಾ ಉದ್ಯೋಗಾಧಿಕಾರಿ ಪ್ರಸಾದ್.ಎಂ ಮಾತನಾಡಿ, ಯುವನಿಧಿ ಯೋಜನೆಯನ್ನು ಉದ್ಯೋಗಾಕಾಂಕ್ಷಿ ಯುವ ಸಮೂಹ ಸದುಪಯೋಗ ಮಾಡಿಕೊಳ್ಳಬೇಕು. ಪ್ರತಿಯೊಬ್ಬ ಯುವಕ ಯುವತಿಯರು ದುಡಿಯುವಂತರಾಗಬೇಕು ಎಂದು ರಾಜ್ಯ ಸರ್ಕಾರ ಉದ್ದೇಶಿಸಿ ಕೌಶಲ್ಯ ಅಭಿವೃದ್ಧಿ ಇಲಾಖೆಯಡಿ ಹಲವು ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಅವುಗಳ ಸದುಪಯೋಗವನ್ನು ಪಡೆಯಲು ಹಾಗೂ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಲು ಮತ್ತು ಸಂದರ್ಶನಕ್ಕೆ ಹಾಜರಾಗಲು ಯುವನಿಧಿ ಹಣ ಉಪಯೋಗಕ್ಕೆ ಬರುತ್ತಿರುವುದು ಕಂಡುಬರುತ್ತಿದೆ. ಆದ್ದರಿಂದ ನಿಮ್ಮ ಸಹೋದರರು, ನಿಮ್ಮ ಸ್ನೇಹಿತರಿಗೆ ಯುವನಿಧಿ ಯೋಜನೆಯ ಮಹತ್ವದ ಬಗ್ಗೆ ತಿಳಿಸಬೇಕೆಂದು ವಿದ್ಯಾರ್ಥಿಗಳಿಗೆ ಸಲಹೆ ಮಾಡಿದರು.ಉದ್ಯೋಗಕ್ಕೆ ಯತ್ನಿಸಲು ನೆರವು
ಮಂಚೇನಹಳ್ಳಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ರೆಡ್ಡಿ ಮಾತನಾಡಿ, ಸ್ವಾಮಿ ವಿವೇಕಾನಂದ ಜಯಂತಿ'''''''' ದಿನದಂದು 2024 ರಲ್ಲಿ ಯುವನಿಧಿ ಯೋಜನೆಯು ಪ್ರಾರಂಭಿಸಲಾಯಿತು. ಈ ಯೋಜನೆಯ ಮುಖ್ಯ ಉದ್ದೇಶ ವಿದ್ಯಾವಂತ ಯುವಕ ಯುವತಿಯರು ಉದ್ಯೋಗವನ್ನು ಪಡೆಯಲು ಪ್ರಯತ್ನ ಮಾಡುತ್ತಿರುವವರಿಗೆ ಉತ್ತೇಜನ ನೀಡುವುದಾಗಿದೆ. ಸ್ವಾಮಿ ವಿವೇಕಾನಂದರ ಚಿಂತನೆಗಳನ್ನು ಅಳವಡಿಕೊಂಡು ಪ್ರತಿಯೊಬ್ಬರು ಉದ್ಯೋಗ ಪಡೆಯುವ ನಿಟ್ಟಿನಲ್ಲಿ ಯುವನಿಧಿಯನ್ನು ಉಪಯೋಗಿಸಿಕೊಳ್ಳುವಂತೆ ಉದ್ಯೋಗಾಕಾಂಕ್ಷಿಗಳಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೋ.ಮಂಜುನಾಥ. ಬಿ, ಪಿಡಿಓ ಬಾಲಕೃಷ್ಣ, ಮಂಚೇನಹಳ್ಳಿ ತಾಲೂಕಿನ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.