ನಂಜನಗೂಡು ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಸಮುದಾಯ ಭವನ ನಿರ್ಮಾಣಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯಿಂದ 7.60 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಇಂದು ವಿವಿಧ ಗ್ರಾಮಗಳಲ್ಲಿ 1.45 ಕೋಟಿ ವೆಚ್ಚದ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ.
ಕನ್ನಡಪ್ರಭ ವಾರ್ತೆ ನಂಜನಗೂಡು
ನಂಜನಗೂಡು ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಸಮುದಾಯ ಭವನ ನಿರ್ಮಾಣಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯಿಂದ 7.60 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಇಂದು ವಿವಿಧ ಗ್ರಾಮಗಳಲ್ಲಿ 1.45 ಕೋಟಿ ವೆಚ್ಚದ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.
ತಾಲೂಕಿನ ಮಾಡ್ರಹಳ್ಳಿ, ಸಿಂಗಾರಿಪುರ, ಶ್ರೀನಗರ, ಹೆಡತಲೆ, ಬಸವಟ್ಟಿಗೆ, ನೇರಳೆ ಘಟ್ಟವಾಡಿ, ಬಸವರಾಜಪುರ ಗ್ರಾಮಗಳಲ್ಲಿ ಶುಕ್ರವಾರ ತಲಾ 20 ಲಕ್ಷ ವೆಚ್ಚದ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂಜನಗೂಡು ಕ್ಷೇತ್ರಕ್ಕೆ ವಿಶೇಷ ಆಸಕ್ತಿ ತೋರಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆಗೆ ಅಭಿವೃದ್ಧಿಯನ್ನು ಕಡೆಗಣಿಸದೆ, ಕ್ಷೇತ್ರದ ಅಭಿವೃದ್ಧಿಗಾಗಿ 25 ಕೋಟಿ ರು. ವಿಶೇಷ ಅನುದಾನ ನೀಡಿದ್ದಾರೆ, ಜೊತೆಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು 7.60 ಕೋಟಿ ಅನುದಾನವನ್ನು ಅಂಬೇಡ್ಕರ್ ಭವನಗಳ ನಿರ್ಮಾಣ ಕಾಮಗಾರಿಗೆ ಬಿಡುಗಡೆಗೊಳಿಸಿದ್ದಾರೆ.
ಈಗಾಗಲೇ 138 ಗ್ರಾಮಗಳಿಗೆ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗಳಿಗೆ ಅನುದಾನವನ್ನು ನಿಗದಿಗೊಳಿಸಲಾಗಿದೆ. ತಲಾ 20 ಲಕ್ಷ ವೆಚ್ಚದಲ್ಲಿ ಅಂಬೇಡ್ಕರ್ ಸಮುದಾಯ ಭವನಗಳು ನಿರ್ಮಾಣವಾಗಲಿದ್ದು, ಪ್ರಾಥಮಿಕ ಹಂತದಲ್ಲಿ 5 ಲಕ್ಷಗಳ ಅನುದಾನ ಬಿಡುಗಡೆಗೊಳಿಸಿದೆ. ಬಜೆಟ್ ನಂತರ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತಂದು ಸಮುದಾಯ ಭವನಗಳ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಕ್ರಮವಹಿಸಲಾಗುವುದು ಎಂದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಜಿಪಂ ಮಾಜಿ ಸದಸ್ಯ ಲತಾಸಿದ್ಧಶೆಟ್ಟಿ, ಅಕ್ರಮ ಸಕ್ರಮ ಸಮಿತಿ ಸದಸ್ಯ ಜಯರಾಮ, ಜಯಮಾಲ, ಗ್ರಾಪಂ ಸದಸ್ಯ ನಾರಾಯಣಸ್ವಾಮಿ, ತಾಪಂ ಮಾಜಿ ಸದಸ್ಯ ವೀರೇಂದ್ರ, ಮುಖಂಡರಾದ ದೊರೆಸ್ವಾಮಿ ನಾಯಕ, ಕುಳ್ಳಯ್ಯ, ನಾಗರಾಜಯ್ಯ, ಕಳಲೆ ರಾಜೇಶ್, ರಂಗಸ್ವಾಮಿ, ನಾಗರಾಜು, ನಾಗರಾಜು, ನೇರಳೆ ಗ್ರಾಪಂ ಅಧ್ಯಕ್ಷ ಗಿರೀಶ್, ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಶಿವಣ್ಣ, ಕಾಂಗ್ರೆಸ್ ಯುವ ಘಟಕ ಜಿಲ್ಲಾಧ್ಯಕ್ಷ ಚಂದನ್ ಗೌಡ, ತಾಲೂಕು ಅಧ್ಯಕ್ಷ ವಿಜಯಕುಮಾರ್ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.