1.60 ಲಕ್ಷ ಅಪ್ರಾಪ್ತ ಹೆಣ್ಣುಮಕ್ಕಳು ಗರ್ಭಿಣಿಯರು

KannadaprabhaNewsNetwork |  
Published : Dec 19, 2024, 12:34 AM IST
ತುಮಕೂರಿನಲ್ಲಿ ನಡೆದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯಯಲ್ಲಿ ಎಎಸ್ಪಿ ಮರಿಯಪ್ಪ, ತಿಪ್ಪೇಸ್ವಾಮಿ ಇತರರಿದ್ದಾರೆ. | Kannada Prabha

ಸಾರಾಂಶ

ಆರೋಗ್ಯ ಇಲಾಖೆ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ 1.60 ಲಕ್ಷ ಅಪ್ರಾಪ್ತ ಹೆಣ್ಣುಮಕ್ಕಳು ಗರ್ಭಿಣಿಯರಾಗಿದ್ದಾರೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗದ ಸದಸ್ಯ ಡಾ. ಟಿ.ಕೆ. ತಿಪ್ಪೇಸ್ವಾಮಿ ಆತಂಕ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ, ತುಮಕೂರುಆರೋಗ್ಯ ಇಲಾಖೆ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ 1.60 ಲಕ್ಷ ಅಪ್ರಾಪ್ತ ಹೆಣ್ಣುಮಕ್ಕಳು ಗರ್ಭಿಣಿಯರಾಗಿದ್ದಾರೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗದ ಸದಸ್ಯ ಡಾ. ಟಿ.ಕೆ. ತಿಪ್ಪೇಸ್ವಾಮಿ ಆತಂಕ ವ್ಯಕ್ತಪಡಿಸಿದರು. ಮಾನವ ಹಕ್ಕುಗಳ ಜಾಗೃತಿ ದಳ ಹಾಗೂ ವಿದ್ಯೋದಯ ಕಾನೂನು ಕಾಲೇಜಿನ ಆಶ್ರಯದಲ್ಲಿ ಬುಧವಾರ ಕಾಲೇಜಿನ ಸಭಾಂಗಣದಲ್ಲಿ ನಡೆದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ ಹೀಗಿದ್ದ ಮೇಲೆ ಅಷ್ಟೂ ಪ್ರಕರಣಗಳು ಪೋಕ್ಸೋ ಅಡಿ ಬರುತ್ತವೆ ಅಲ್ಲವೆ? ಎಂದು ಕಳವಳ ವ್ಯಕ್ತಪಡಿಸಿದರು. ಮಕ್ಕಳನ್ನು ದುರುಪಯೋಗಪಡಿಸಿಕೊಳ್ಳುವ ಪ್ರಕರಣಗಳಿಗೆ ಕಡಿವಾಣ ಬೀಳಬೇಕು. ಈ ಬಗ್ಗೆ ಹಿರಿಯವರು ಎಚ್ಚರವಹಿಸಬೇಕು. ಮಕ್ಕಳ ಶಿಕ್ಷಣ, ರಕ್ಷಣೆ, ಆಹಾರ ಎಲ್ಲವೂ ಮೂಲಭೂತ ಹಕ್ಕಿನ ಅಡಿ ಬರುತ್ತವೆ. ಆ ಹಕ್ಕುಗಳಿಗೆ ಧಕ್ಕೆ ಆಗಬಾರದು. ಮಕ್ಕಳಲ್ಲಿ ಮಾನವ ಹಕ್ಕುಗಳ ಬಗ್ಗೆ ತಿಳುವಳಿಕೆ ಮೂಡಿಸಬೇಕು ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ಎಎಸ್ಪಿ ವಿ. ಮರಿಯಪ್ಪ ಮಾತನಾಡಿ ಸಮಾಜದ ಪ್ರತಿಯೊಬ್ಬರೂ ತಾರತಮ್ಯವಿಲ್ಲದೆ, ಸಮಾನವಾಗಿ ಬಾಳುವ ಹಕ್ಕನ್ನು ನಮ್ಮ ಸಂವಿಧಾನ ನೀಡಿದೆ. ಹಕ್ಕುಗಳ ಅರಿವಿಲ್ಲದವರಿಂದ ಕಾನೂನಿನ ಉಲ್ಲಂಘನೆ ಆಗಬಹುದು ಅಥವಾ ಹಕ್ಕುಗಳ ಬಗ್ಗೆ ತಿಳಿದಿಲ್ಲದವರ ಮೇಲೆ ದೌರ್ಜನ್ಯ ನಡೆಯಬಹುದು. ಈ ಕಾರಣದಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮಾನವ ಹಕ್ಕುಗಳ ಅರಿವು ಮೂಡಿಸಬೇಕು ಎಂದು ಹೇಳಿದರು.ಯಾರೂ ಯಾರ ಹಕ್ಕನ್ನು ಕಸಿಯುವಂತಿಲ್ಲ, ಎಲ್ಲರಿಗೂ ಸಮಾನ ಹಕ್ಕಿದೆ. ಇದಕ್ಕೆ ಸಂಬಂಧಿಸಿದಂತೆ ನಿಬಂಧನೆಗಳನ್ನು ರೂಪಿಸಲಾಗಿದೆ. ಹಕ್ಕುಗಳ ಅರಿವು ಬೆಳೆಸಿಕೊಂಡರೆ ಸಮಾಜದಲ್ಲಿ ಎಲ್ಲರೂ ಶಾಂತಿ ಸೌಹಾರ್ದತೆಯಿಂದ ಬಾಳಲು ಸಾಧ್ಯವಾಗುತ್ತದೆ ಎಂದರು. ಮಾನವ ಹಕ್ಕುಗಳ ಅರಿವಿಲ್ಲದವರು, ಕಾನೂನಿನ ತಿಳವಳಿಕೆಯಿಲ್ಲದವರು,ಅಮಾಯಕರು ಶೋಷಣೆಗೆ ಒಳಗಾಗುತ್ತಲೇ ಇದ್ದಾರೆ. ಅಂತಹವರಲ್ಲಿ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಅವರ ಹಕ್ಕುಗಳು ದಮನವಾಗದಂತೆ ನೆರವಾಗಬೇಕು. ಇಂತಹ ಕಾರ್ಯಕ್ರಮಗಳು ಹೆಚ್ಚು ನಡೆದು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತನ್ನ ಮೂಲಭೂತ ಹಕ್ಕುಗಳ ಬಗ್ಗೆ ತಿಳುವಳಿಕೆ ಮೂಡಿಸಬೇಕು ಎಂದರು. ಕಾನೂನು ಉಲ್ಲಂಘಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಲು ಹೋದಾಗ ಯಾವ ಕಾರಣಕ್ಕಾಗಿ ಬಂಧಿಸಲು ಬಂದಿದ್ದೇವೆ, ಅವನಿಂದ ಆಗಿರುವ ತಪ್ಪುಗಳೇನು ಎಂದು ಪೊಲೀಸರು ಆ ವ್ಯಕ್ತಿಗೆ ಬರಹದಲ್ಲಿ ಬರೆದು ನೀಡಬೇಕು. ಯಾವ ಕಾರಣಕ್ಕಾಗಿ ದಸ್ತಗಿರಿ ಮಾಡುತ್ತಿದ್ದೇವೆ ಎಂದು ಅವನ ಕುಟುಂಬದವರಿಗೂ ತಿಳಿಸಬೇಕು. ಕಾನೂನು ಉಲ್ಲಂಘಿಸಿದವನಿಗೂ ಮಾನವ ಹಕ್ಕಗಳನ್ನು ನಮ್ಮ ಸಂವಿಧಾನ ನೀಡಿದೆ ಅದರಂತೆ ಎಲ್ಲರೂ ನಡೆದುಕೊಳ್ಳಬೇಕು ಎಂದು ಹೇಳಿದರು. ಮಾನವ ಹಕ್ಕುಗಳ ಜಾಗೃತಿ ದಳದ ಜಿಲ್ಲಾಧ್ಯಕ್ಷ ಹೆಚ್.ಎಂ. ರವೀಶಯ್ಯ ಮಾತನಾಡಿ, ಎಲ್ಲರೂ ಸಮಾನರಾಗಿ, ಸ್ವಾಭಿಮಾನದಿಂದ ಬಾಳಲು ಮಾನವ ಹಕ್ಕುಗಳ ಬಗ್ಗೆ ಪ್ರತಿಯೊಬ್ಬರೂ ತಿಳಿಯಬೇಕು,ಹಕ್ಕುಗಳ ಉಲ್ಲಂಘನೆಯಾದಾಗ, ಯಾರಾದರೂ ತಮ್ಮ ಹಕ್ಕುಗಳ ದಮನ ಮಾಡಿದಾಗ ಆಯೋಗಕ್ಕೆ ದೂರು ನೀಡಿ ತಮ್ಮ ಹಕ್ಕು ಚಲಾಯಿಸಬಹುದು ಎಂದರು.ಪ್ರತಿ ವ್ಯಕ್ತಿಯೂ ತನ್ನ ಹಕ್ಕುಗಳ ಬಗ್ಗೆ ತಿಳಿಯಬೇಕು ಎಂದು ಮಾನವ ಹಕ್ಕುಗಳ ಆಯೋಗ ವಿವಿಧ ಕಾರ್ಯಕ್ರಮಗಳ ಮೂಲಕ ಜನಜಾಗೃತಿ ಮೂಡಿಸುತ್ತಿದೆ. ವಿಶೇಷವಾಗಿ ಮಕ್ಕಳು, ಯುವ ಜನರು ಮಾನವ ಹಕ್ಕುಗಳು ಹಾಗೂ ಈ ನೆಲದ ಕಾನೂನಿನ ಅರಿವು ಬೆಳೆಸಿಕೊಂಡರೆ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳು ಸಾಧ್ಯ ಎಂದು ಹೇಳಿದರು.ವಿದ್ಯೋದಯ ಫೌಂಡೇಶನ್‌ನ ಹೆಚ್.ಎಸ್.ರಾಜು, ಮಾನವಹಕ್ಕುಗಳ ಜಾಗೃತ ದಳದ ರಾಜ್ಯ ಅಧ್ಯಕ್ಷ ಲೋಕೇಶ್ವರ್, ವಿದ್ಯೋದಯ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಶಮಾ ಸೈಯದಿ, ಉಪನ್ಯಾಸಕ ಡಾ.ಜಿ.ವೆಂಕಟೇಶ್, ಹಿರಿಯ ನ್ಯಾಯವಾದಿ ಬೆಳಗೆರೆ ಶಿವಕುಮಾರ್, ಮಾನವ ಹಕ್ಕುಗಳ ಜಾಗೃತಿ ದಳದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪ್ರಸಾದ್, ವಿದ್ಯೋದಯ ಸಂಸ್ಥೆ ಸಿಇಒ ಪ್ರೊ.ಕೆ.ಚಂದ್ರಣ್ಣ ಮೊದಲಾದವರು ಭಾಗವಹಿಸಿದ್ದರು.

ಕೋಟ್‌ 1

ಮಕ್ಕಳ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಮಕ್ಕಳ ಮುಗ್ದತೆಯ ದುರುಪಯೋಗವಾಗುತ್ತಿದೆ. ಒಂದು ಜೈಲಿನಲ್ಲಿ ಸುಮಾರು ಮೂರನೇ ಒಂದರಷ್ಟು ಪೋಕ್ಸೋ ಪ್ರಕರಣದ ಕೈದಿಗಳಿರುತ್ತಾರೆ ಎಂದರೆ, ಮಕ್ಕಳ ಮೇಲಿನ ದೌರ್ಜನ್ಯ ಯಾವ ಮಟ್ಟಕೆ ಇದೆ ಎಂಬುದು ಕಳವಳಕಾರಿ ವಿಚಾರ

- ಡಾ.ಕೆ.ಟಿ.ತಿಪ್ಪೇಸ್ವಾಮಿ, ಸದಸ್ಯರು, ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!