ಉಡುಪಿ ಜಿಲ್ಲೆಯ ಬ್ಯಾಂಕ್‌ಗಳಲ್ಲಿ ಶೇ.11.60ರಷ್ಟು ವ್ಯವಹಾರ ಹೆಚ್ಚಳ

KannadaprabhaNewsNetwork |  
Published : Jun 26, 2024, 12:33 AM IST
ಲೀಡ್25 | Kannada Prabha

ಸಾರಾಂಶ

ಉಡುಪಿ ರಜತಾದ್ರಿಯ ಜಿ.ಪಂ.ನ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಜಿ.ಪಂ. ಸಿಇಓ ಪ್ರತೀಕ್ ಬಾಯಲ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಮಣಿಪಾಲ

ಉಡುಪಿ ಜಿಲ್ಲೆಯ ಬ್ಯಾಂಕ್‌ಗಳು ಕಳೆದ ಸಾಲಿನಲ್ಲಿ 51,494 ಕೋಟಿ ರು. ವ್ಯವಹಾರ ನಡೆಸಿದ್ದು, ಪ್ರಸಕ್ತ ಸಾಲಿನಲ್ಲಿ 57,467 ಕೋಟಿ ರು. ವ್ಯವಹಾರ ನಡೆಸಿವೆ. ಕಳೆದ ವರ್ಷಕ್ಕೆ ಹೋಲಿಸಿದರೆ 5973 ಕೋಟಿ ರು. ಅಂದರೆ ಶೇ.11.60ರಷ್ಟು ಹೆಚ್ಚು ವ್ಯವಹಾರ ನಡೆಸಿವೆ ಎಂದು ಜಿ.ಪಂ. ಸಿಇಓ ಪ್ರತೀಕ್ ಬಾಯಲ್ ಹೇಳಿದ್ದಾರೆ.

ಅವರು ಮಂಗಳವಾರ ರಜತಾದ್ರಿಯ ಜಿ.ಪಂ.ನ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಧಾನಮಂತ್ರಿ ಉದ್ಯೋಗ ಸೃಜನ್ ಯೋಜನೆಯಡಿ ಜಿಲ್ಲೆಯ ಉದ್ಯೋಗಾವಕಾಶ ಸೃಷ್ಠಿಸಲು 595 ಫಲಾನುಭವಿಗಳಿಗೆ 39.98 ಕೋಟಿ ರು. ಸಾಲ ವಿತರಿಸಲಾಗಿದೆ. ಬಾಕಿ ಉಳಿದ ಅರ್ಜಿಗಳನ್ನು ಆದ್ಯತೆಯ ಮೇಲೆ ವಿಲೇವಾರಿ ಮಾಡಿ, ಅರ್ಹ ಫಲಾನುಭವಿ ಉದ್ಯಮಿಗಳಿಗೆ ಸಬ್ಸಿಡಿಯನ್ನು ಶೀಘ್ರವಾಗಿ ವಿತರಿಸುವಂತೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ವಿಶೇಷ ಗಮನ ಕಾರ್ಯಕ್ರಮಗಳ ಅಡಿಯಲ್ಲಿ ಬ್ಯಾಂಕ್‌ಗಳು ದುರ್ಬಲ ವರ್ಗಗಳಿಗೆ 1793 ಕೋಟಿ ರು., ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ 158.72 ಕೋಟಿ ರು., ವಸತಿ ಕ್ಷೇತ್ರಗಳ ಸುಸ್ಥಿರ ಅಭಿವೃದ್ಧಿಗಾಗಿ 1078 ಕೋಟಿ ರು. ಗಳ ಸಾಲ ವಿತರಣೆ ಮಾಡಲಾಗಿದೆ ಎಂದರು. ಆರ್ಥಿಕಾಭಿವೃದ್ಧಿಯಲ್ಲಿ ಉಡುಪಿ ಜಿಲ್ಲೆಯು ರಾಜ್ಯಕ್ಕೆ ಮಾದರಿಯಾಗಲು ಅಧಿಕಾರಿಗಳು ತಂಡವಾಗಿ ಕಾರ್ಯನಿರ್ವಹಿಸಬೇಕು ಎಂದವರು ಸಲಹೆ ನೀಡಿದರು.

ಸಭೆಯಲ್ಲಿ ಮಡಿಕೇರಿಯ ಡಿ.ಡಿ.ಎಂ. ರಮೇಶ್, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್ ಜಿ, ಆರ್.ಬಿ.ಐ.ನ ಪ್ರತಿನಿಧಿ ಈಲ್ಲಾ ಸಾಹು, ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್‌ ಸಹಾಯಕ ಉಪ ಪ್ರಬಂಧಕ ನಿತ್ಯಾನಂದ ಶೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

------ಸಿ.ಡಿ. ಅನುಪಾತ ಕಳವಳಕಾರಿ: ಶೀಬಾ ಶೆಹಜಾನ್

ಕೆನರಾ ಬ್ಯಾಂಕ್‌ನ ಪ್ರಾದೇಶಿಕ ಪ್ರಬಂಧಕಿ ಶೀಬಾ ಶೆಹಜಾನ್ ಮಾತನಾಡಿ, ಕಳೆದ ವರ್ಷಕ್ಕೆ ಹೋಲಿಸಿದ್ದಲ್ಲಿ ಬ್ಯಾಂಕ್‌ಗಳಲ್ಲಿ ಠೇವಣಿ ಪ್ರಮಾಣ ಶೇ.46.06 ಇದ್ದು, ಪ್ರಸಕ್ತ ಸಾಲಿನಲ್ಲಿ ಶೇ.46.94 ರಷ್ಟು ಪ್ರಗತಿಯಾಗಿದೆ. ಆದರೂ ಸಹ ಸಾಲ ಠೇವಣಿ ಅನುಪಾತದಲ್ಲಿ ಜಿಲ್ಲೆಯು ಶೇ.50ಕ್ಕಿಂತ ಕಡಿಮೆ ಇರುವುದು ಅತ್ಯಂತ ಕಳವಳಕಾರಿಯಾಗಿದೆ. ಇದನ್ನು ಹೆಚ್ಚಿಸಲು ಎಲ್ಲ ಬ್ಯಾಂಕ್‌ಗಳು ಕಾರ್ಯಪ್ರವೃತ್ತರಾಗಬೇಕು ಎಂದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ