ಕನ್ನಡಪ್ರಭ ವಾರ್ತೆ, ತುಮಕೂರುಕರ್ನಾಟಕ ರತ್ನ, ತ್ರಿವಿಧ ದಾಸೋಹ ಮೂರ್ತಿ, ಕಾಯಕ ಯೋಗಿ, ನಡೆದಾಡುವ ದೇವರೆಂದೇ ನಾಡಿನಾದ್ಯಂತ ಹೆಸರುವಾಸಿಯಾಗಿದ್ದ ಸಿದ್ದಗಂಗೆಯ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 119ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವ ಏ. 1 ರಂದು ಸಿದ್ದಗಂಗಾ ಮಠದಲ್ಲಿ ನಡೆಯಲಿದೆ.ಶ್ರೀಮಠದಲ್ಲಿ ಅಂದು ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಶ್ರೀಗಳ 119ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವ ಸಮಾರಂಭಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಶ್ರೀಮಠದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಈ ಹಿಂದೆ ದೇಶದ ಮೊದಲ ಮಹಿಳಾ ರಾಷ್ಟ್ರಪತಿಯಾಗಿದ್ದ ಪ್ರತಿಭಾ ಪಾಟೀಲ್ ಅವರು ಸಹ ಶ್ರೀಗಳ ಹುಟ್ಟುಹಬ್ಬ ಹಾಗೂ ಗುರುವಂದನಾ ಮಹೋತ್ಸವದಲ್ಲಿ ಭಾಗಿಯಾಗಿದ್ದರು. ಇದೀಗ 2ನೇ ಮಹಿಳಾ ರಾಷ್ಟ್ರಪತಿಯಾಗಿರುವ ದ್ರೌಪದಿ ಮುರ್ಮು ಅವರು ಶ್ರೀಮಠಕ್ಕೆ ಆಗಮಿಸುತ್ತಿದ್ದಾರೆ. ಮೊದಲು ರಾಷ್ಟ್ರಪತಿಗಳು ಶ್ರೀಗಳ ಗದ್ದುಗೆಗೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ. ನಂತರ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸುವರು ಎಂದರು.ವೇದಿಕೆ ಕಾರ್ಯಕ್ರಮವು ಸುಮಾರು 1 ಗಂಟೆ ಕಾಲ ನಡೆಯಲಿದ್ದು, ಭಕ್ತಾದಿಗಳು ಅಂದು ಬೆಳಿಗ್ಗೆ 9.30ಕ್ಕೆ ಮುಂಚಿತವಾಗಿ ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿ ಆಸೀನರಾಗಬೇಕು. ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತಾ ವ್ಯವಸ್ಥೆ ಇರುವುದರಿಂದ ನಿಯಮಗಳನ್ನು ಪಾಲಿಸುವುದು ಅನಿವಾರ್ಯವಾಗಿದೆ.ಅಂದು ಬೆಳಗಿನ ಜಾವ ಗದ್ದುಗೆಯಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಲಿವೆ. ನಂತರ ಬೆಳಿಗ್ಗೆ 8 ಗಂಟೆಗೆ ಶ್ರೀಗಳ ಪುತ್ಥಳಿ ಉತ್ಸವವು ಶ್ರೀಮಠದ ಆವರಣದಲ್ಲಿ ನಡೆಯಲಿದೆ ಎಂದು ಶ್ರೀಗಳು ಹೇಳಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿರುವುದರಿಂದ ಈ ಬಾರಿ ಮಧ್ಯಾಹ್ನದ ನಂತರ ಮತ್ತು ಸಂಜೆ ಯಾವುದೇ ಕಾರ್ಯಕ್ರಮಗಳಿರುವುದಿಲ್ಲ. ವೇದಿಕೆ ಕಾರ್ಯಕ್ರಮ ಮುಗಿದ ಬಳಿಕ ವೀಣಾವಾದನ ಹಾಗೂ ೧೧೯ ಮಹಿಳೆಯರಿಂದ ವಚನ ಗಾಯನ ಕಾರ್ಯಕ್ರಮ ಮಾತ್ರ ನಡೆಯಲಿದೆ ಎಂದು ಶ್ರೀಗಳು ವಿವರಿಸಿದರು.ಕಾರ್ಯಕ್ರಮಕ್ಕೆ ಭಕ್ತಾದಿಗಳು ಯಾವುದೇ ರೀತಿಯ ಆಯುಧಗಳು, ಕೊಡೆ, ನೀರಿನ ಬಾಟಲಿ ಹಾಗೂ ಬ್ಯಾಗ್ಗಳನ್ನು ತರುವಂತಿಲ್ಲ. ಮೊಬೈಲ್ಗಳನ್ನು ಸ್ವಿಚ್ ಆಫ್ ಮಾಡಿಕೊಂಡಿರಬೇಕು ಎಂದ ಅವರು, ರಾಷ್ಟ್ರಪತಿಗಳು ಭಾಗಿಯಾಗುತ್ತಿರುವ ಕಾರ್ಯಕ್ರಮವಾಗಿರುವುದರಿಂದ ಭಕ್ತಾದಿಗಳು ಈ ಎಲ್ಲಾ ನಿಯಮಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದರು.ಪತ್ರಿಕಾಗೋಷ್ಠಿಯಲ್ಲಿ ಸಿದ್ದಗಂಗಾ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಟಿ.ಕೆ. ನಂಜುಂಡಪ್ಪ, , ಜಯವಿಭವ ಸ್ವಾಮಿ, ಎಸ್ಐಟಿ ಸಿಇಒ ಡಾ. ಶಿವಕುಮಾರಯ್ಯ, ಎಸ್ಐಟಿ ಪ್ರಾಂಶುಪಾಲರಾದ ಪ್ರೊ. ದಿನೇಶ್ ಮತ್ತಿತರರು ಉಪಸ್ಥಿತರಿದ್ದರು.
ಮಾರ್ಗ ಬದಲಾವಣೆ : ಪಾರ್ಕಿಂಗ್ ವ್ಯವಸ್ಥೆಶ್ರೀಗಳ 119ನೇ ಜಯಂತಿ ಮತ್ತು ಗುರುವಂದನಾ ಮಹೋತ್ಸವಕ್ಕೆ ರಾಷ್ಟ್ರಪತಿಗಳು ಭೇಟಿ ನೀಡುತ್ತಿರುವುದರಿಂದ ಭದ್ರತೆ ದೃಷ್ಠಿಯಿಂದ ಶ್ರೀಮಠಕ್ಕೆ ಆಗಮಿಸುವ ಭಕ್ತಾದಿಗಳಿಗೆ ಪರ್ಯಾಯ ಮಾರ್ಗಗಳ ವ್ಯವಸ್ಥೆ ಮಾಡಲಾಗಿದೆ. ಎಪಿಎಂಸಿ ಕಡೆಯಿಂದ ಬರುವ ಭಕ್ತಾದಿಗಳು ಬಂಡೆಪಾಳ್ಯ ಮೂಲಕ ದನಗಳ ಜಾತ್ರೆ ನಡೆಯುವ ಜಾಗದಲ್ಲಿ ವಾಹನಗಳನ್ನು ಪಾರ್ಕಿಂಗ್ಗೆ ವ್ಯವಸ್ಥೆ ಮಾಡಲಾಗಿದೆ. ಈ ಜಾಗದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿ ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಬೇಕು. ಹಾಗೆಯೇ ರೈಲ್ವೆ ನಿಲ್ದಾಣ ಮತ್ತು ಕ್ಯಾತ್ಸಂದ ಬಸ್ ನಿಲ್ದಾಣದ ಕಡೆಯಿಂದ ಬರುವವರು ಅಂಡರ್ ಪಾಸ್ ಮೂಲಕ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಆಗಮಿಸಬಹುದಾಗಿದೆ. ಎಲ್ಲರೂ ಬೆಳಿಗ್ಗೆ 9.30ಕ್ಕೆ ಮುಂಚಿತವಾಗಿ ಕಾರ್ಯಕ್ರಮ ಸ್ಥಳಕ್ಕೆ ಆಗಮಿಸಬೇಕು ಎಂದು ಶ್ರೀಗಳು ಮನವಿ ಮಾಡಿದರು.ಶ್ರೀಮಠದಲ್ಲಿ ದನಗಳ ಜಾತ್ರೆ ನಡೆಯುವ ಸ್ಥಳದಿಂದ ಕಾರ್ಯಕ್ರಮ ನಡೆಯುವ ಸ್ಥಳದ ವರೆಗೆ ಭಕ್ತಾದಿಗಳನ್ನು ಕರೆ ತರಲು ೫ ಮಿನಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಭಕ್ತರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ ಎಂದರು.ಶ್ರೀಗಳ 119ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವಕ್ಕೆ ಎಂದಿನಂತೆ ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವ ನಿರೀಕ್ಷೆ ಇದೆ. ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 10.30ರ ವರೆಗೂ ನಿರಂತರ ದಾಸೋಹ ನಡೆಯಲಿದೆ ಎಂದರು.