ಕನ್ನಡಪ್ರಭ ವಾರ್ತೆ ಪಾಂಡವಪುರ
ಗ್ರಾಮದ ಮಾಯಿಗೌಡರಿಗೆ ಸೇರಿದ ಮೇಕೆಗಳನ್ನು ದನದ ಕೊಟ್ಟಿಗೆಯಲ್ಲಿ ಕಟ್ಟು ಹಾಕಿದ್ದರು. ಚಿರತೆ ದಾಳಿ ಮಾಡಿ 12 ಮೇಕೆಗಳನ್ನು ಕೊಂದು ಪರಾರಿಯಾಗಿದೆ. ಇದರಿಂದ ಲಕ್ಷಾಂತರ ರು. ನಷ್ಟವಾಗಿದೆ. ಮುಂಜಾನೆ ಮಾಯಿಗೌಡರು ಮೇಕೆಗಳನ್ನು ಜಮೀನಿನ ಬಳಿ ತೆರಳಿ ಬಳಿಕ ಆಡುಗಳನ್ನು ಮೇಯಿಸಲು ಹೊಡೆದುಕೊಂಡು ಹೋಗಲೆಂದು ದನದ ಕೊಟ್ಟಿಗೆ ತೆರೆದಾಗ ಘಟನೆ ಬೆಳಕಿಗೆ ಬಂದಿದೆ.
ತಕ್ಷಣ ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಆದರೆ, ಅರಣ್ಯಾಧಿಕಾರಿಗಳು ಮಧ್ಯಾಹ್ನವಾದರು ಸ್ಥಳಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಗ್ರಾಮಸ್ಥರು ಮೃತಪಟ್ಟ ಆಡುಗಳನ್ನು ಶ್ರೀರಂಗಪಟ್ಟಣ-ಜೇವರ್ಗಿ ಹೆದ್ದಾರಿ ಮಧ್ಯೆ ಇಟ್ಟು ಪ್ರತಿಭಟನೆ ನಡೆಸಿದರು.ತಾಲೂಕಿನಲ್ಲಿ ಚಿರತೆಗಳ ಹಾವಳಿ ದಿನೇದಿನೇ ಹೆಚ್ಚಾಗುತ್ತಿದೆ. ಕಳೆದ ಮೂರು ದಿನಗಳ ಹಿಂದೆಯಷ್ಟೆ ಟಿ.ಎಸ್.ಛತ್ರ ಪಕ್ಕದ ಇಂಗಲಕುಪ್ಪೆ ಗ್ರಾಮದಲ್ಲಿ ಕೊಟ್ಟಿಗೆ ಮೇಲೆ ಚಿರತೆ ದಾಳಿ ನಡೆಸಿ ಮೂರು ಆಡುಗಳನ್ನು ಕೊಂದು ಪರಾರಿಯಾಗಿತ್ತು. ಆದರೆ, ಅರಣ್ಯಾಧಿಕಾರಿಗಳು ಚಿರತೆಯ ಸೆರೆಗೆ ಯಾವುದೇ ಕ್ರಮ ಜರುಗಿಸಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮಸ್ಥರ ಪ್ರತಿಭಟನೆಯಿಂದಾಗಿ ಶ್ರೀರಂಗಪಟ್ಟಣ- ಜೇವರ್ಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ಥವ್ಯಸ್ಥ ಉಂಟಾಯಿತು. ಕೆಲಕಾಲ ವಾಹನ ಸವಾರರು ಪರದಾಟ ನಡೆಸಿದರು.
ಪ್ರತಿಭಟನೆಯಲ್ಲಿ ಟಿ.ಎಸ್.ಛತ್ರ, ಇಂಗಲಕುಪ್ಪೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಹಾಜರಿದ್ದರು.