ಸಿಂಗಟಾಲೂರು ಏತ ನೀರಾವರಿಗೆ ಈ ವರ್ಷ ₹138 ಕೋಟಿ

KannadaprabhaNewsNetwork |  
Published : Jul 26, 2024, 01:40 AM ISTUpdated : Jul 26, 2024, 01:41 AM IST
25ಕೆಪಿಎಲ್21 ಉಪ ಮುಖ್ಯಮಂತ್ರಿಗಳು, ಜಲಸಂಪನ್ಮೂಲ ಸಚಿವರಾದ ಡಿಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕರ್ನಾಟಕ ನೀರಾವರಿ ನಿಗಮದ ಸಭೆಯಲ್ಲಿ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರು ಪಾಲ್ಗೊಂಡಿರುವುದು. | Kannada Prabha

ಸಾರಾಂಶ

ಮಹತ್ವಾಕಾಂಕ್ಷೆಯ ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ರಾಜ್ಯ ಸರ್ಕಾರ ಮಧ್ಯಪ್ರದೇಶ ಮಾದರಿಯಲ್ಲಿ ಅನುಷ್ಠಾನ ಮಾಡಲು ₹554 ಕೋಟಿಗೆ ಅಸ್ತು ನೀಡಿದ್ದು, ಪ್ರಸಕ್ತ ವರ್ಷ ಕಾಲುವೆ ಕಾಮಗಾರಿಗೆ ₹138 ಕೋಟಿ ಬಿಡುಗಡೆ ಮಾಡಿ ಆದೇಶಿಸಿದೆ.

ಶಾಸಕ ರಾಘವೇಂದ್ರ ಹಿಟ್ನಾಳ ಮಾಹಿತಿ

ಮಧ್ಯಪ್ರದೇಶ ಮಾದರಿ ಅನುಷ್ಠಾನಕ್ಕೆ ಒಟ್ಟು ₹554 ಕೋಟಿ ಅನುದಾನ, ಆರ್ಥಿಕ ಇಲಾಖೆ ಅಸ್ತು

ಕನ್ನಡಪ್ರಭ ವಾರ್ತೆ ಕೊಪ್ಪಳ

ಮಹತ್ವಾಕಾಂಕ್ಷೆಯ ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ರಾಜ್ಯ ಸರ್ಕಾರ ಮಧ್ಯಪ್ರದೇಶ ಮಾದರಿಯಲ್ಲಿ ಅನುಷ್ಠಾನ ಮಾಡಲು ₹554 ಕೋಟಿಗೆ ಅಸ್ತು ನೀಡಿದ್ದು, ಪ್ರಸಕ್ತ ವರ್ಷ ಕಾಲುವೆ ಕಾಮಗಾರಿಗೆ ₹138 ಕೋಟಿ ಬಿಡುಗಡೆ ಮಾಡಿ ಆದೇಶಿಸಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಂಗಳೂರಿನ ವಿಧಾನಸೌಧದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಬುಧವಾರ ಸಂಜೆ ನಡೆದ ಕರ್ನಾಟಕ ನೀರಾವರಿ ನಿಗಮದ ಸಭೆಯ ಕುರಿತು ಮಾಹಿತಿ ನೀಡಿದ್ದಾರೆ.

ಸಿಂಗಟಾಲೂರು ಏತ ನೀರಾವರಿ ಯೋಜನೆಯಿಂದ ಕೊಪ್ಪಳ ಭಾಗದ ಸಾವಿರಾರು ಹೆಕ್ಟೇರ್ ಭೂಮಿ ನೀರಾವರಿಯಾಗಿ ಪರಿವರ್ತನೆಗೊಳ್ಳಲಿದೆ. ಇದರಿಂದ ಈ ಭಾಗದ ರೈತರ ರಟ್ಟೆಗೆ ಶಕ್ತಿ ತುಂಬುವ ಕೆಲಸವಾಗಲಿದೆ. ಈ ನಿಟ್ಟಿನಲ್ಲಿ ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಸುಮಾರು ₹554 ಕೋಟಿ ಅನುದಾನದ ಅವಶ್ಯವಿದ್ದು, ಯೋಜನೆ ಪೂರ್ಣಗೊಳಿಸಲು ಅನುದಾನ ನೀಡುವಂತೆ ಸಚಿವರಿಗೆ ಮನವಿ ಮಾಡಿದ್ದೆ. ಸಚಿವರು ಸಕಾರಾತ್ಮಕ ಸ್ಪಂದನೆ ನೀಡಿದ್ದರು. ಈಗ ಮಂಜೂರಾತಿ ನೀಡಿದ್ದು, ಹಂತ ಹಂತವಾಗಿ ಏತ ನೀರಾವರಿ ಯೋಜನೆಗೆ ಅನುದಾನ ನೀಡುತ್ತೇನೆ ಎಂದಿದ್ದಾರೆ. ಸಧ್ಯ ಪ್ರಸಕ್ತ ವರ್ಷದಲ್ಲಿ ವಿವಿಧ ಕಾಮಗಾರಿಗಳಿಗೆ ₹138.35 ಕೋಟಿ ಅನುದಾನ ಬಿಡುಗಡೆಗೆ ಒಪ್ಪಿಗೆ ಸೂಚಿಸಿದ್ದಾರೆ.

2024-25ನೇ ಸಾಲಿನಲ್ಲಿ ಪ್ಯಾಕೇಜ್ ನಂ-6ರಡಿ ಸಿಂಗಟಾಲೂರು ಏತ ನೀರಾವರಿ ಯೋಜನೆಯ ಮುಂಡರಗಿ ಶಾಖಾ ಕಾಲುವೆಯಿಂದ ಕೊಪ್ಪಳ ತಾಲೂಕಿನ ಬ್ಲಾಕ್ 9ರಿಂದ 12ರ ವರೆಗಿನ 8582 ಹೆಕ್ಟೇರ್ ಭೂಪ್ರದೇಶಕ್ಕೆ ಮಧ್ಯಪ್ರದೇಶ ಮಾದರಿಯಲ್ಲಿ ನೀರಾವರಿ ಸೌಲಭ್ಯ ಕಲ್ಪಿಸುವ ಕಾಮಗಾರಿಯ ₹301 ಕೋಟಿ ಮೊತ್ತದಲ್ಲಿ ಪ್ರಸಕ್ತ ವರ್ಷ ಯೋಜನೆಗೆ ₹75.31 ಕೋಟಿ ಅನುದಾನ ಬಿಡುಗಡೆ ಹಾಗೂ ಪ್ಯಾಕೇಜ್ ನಂ-7ರಲ್ಲಿ ಸಿಂಗಟಾಲೂರು ಏತ ನೀರಾವರಿ ಯೋಜನೆಯ ಮುಂಡರಗಿ ಶಾಖಾ ಕಾಲುವೆಯಿಂದ ಕೊಪ್ಪಳ ತಾಲೂಕಿನ ಬ್ಲಾಕ್ 13ರಿಂದ 16ರ ವರೆಗಿನ 7941 ಹೆಕ್ಟೇರ್ ಭೂ ಪ್ರದೇಶಕ್ಕೂ ಮಧ್ಯಪ್ರದೇಶ ಮಾದರಿಯ ನೀರಾವರಿ ಕಲ್ಪಿಸುವ ಕಾಮಗಾರಿಯ 252 ಕೋಟಿ ಮೊತ್ತದಲ್ಲಿ ಅವಶ್ಯವಿರುವ ₹63.04 ಕೋಟಿ ಅನುದಾನ ಮಂಜೂರು ಆಗಿದ್ದು, ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಮುಗಿಸಿ ಕಾಮಗಾರಿಯ ಅಡಿಗಲ್ಲು ನೆರವೇರಿಸುವ ಮುಖಾಂತರ ಕಾಮಗಾರಿ ಪ್ರಾರಂಭ ಮಾಡಲಾಗುವುದು ಎಂದು ಹೇಳಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ