)
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಳೆ ಪರಿಸ್ಥಿತಿಯನ್ನು ಪರಿಶೀಲಿಸಿದಾಗ ಜನವರಿ 1ರಿಂದ ಆಗಸ್ಟ್ 27ರವರೆಗೆ 397.7 ಮಿಮೀ ವಾಡಿಕೆ ಮಳೆಯಾಗಬೇಕಿತ್ತು. ಆದರೆ 339.7 ಮಿ.ಮೀ. ಮಳೆಯಾಗಿದ್ದು, ಶೇ.15ರಷ್ಟು ಮಳೆ ಕೊರತೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧಾ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳು ತೀವ್ರ ಬರ ಹಾಗೂ ದೇವನಹಳ್ಳಿ ತಾಲೂಕು ಮಧ್ಯಮ ಬರ ತಾಲೂಕುಗಳೆಂದು ಗುರುತಿಸಲಾಗಿದೆ. ದೊಡ್ಡಬಳ್ಳಾಪುರ ತಾಲೂಕಿಗೆ ಸಂಬಂಧಿಸಿದಂತೆ ಮಾನದಂಡಗಳನ್ನು ಪರಿಶೀಲಿಸಿ ವರದಿ ನೀಡಲಾಗುವುದು. ಜಿಲ್ಲೆಯ ಬರ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು. ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಮೇವಿಗೆ ಯಾವುದೇ ರೀತಿ ಸಮಸ್ಯೆ ಎದುರಾಗದಂತೆ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಶಾಲೆ, ಹಾಸ್ಟೆಲ್ಗಳಿಗೆ ಭೇಟಿ ನೀಡಿ:ಸರ್ಕಾರಿ ಶಾಲೆಗಳು, ವಸತಿ ನಿಲಯಗಳು, ಹಾಸ್ಟೆಲ್ ಗಳಿಗೆ ಅಧಿಕಾರಿಗಳು ಆಗಾಗ್ಗೆ ದಿಢೀರ್ ಭೇಟಿ ನೀಡಬೇಕು. ಅಲ್ಲಿನ ವಾಸ್ತವ ಸ್ಥಿತಿ, ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವರದಿ ನೀಡಬೇಕು. ಆಸ್ಪತ್ರೆಗಳಿಗೂ ಅಧಿಕಾರಿಗಳು ಆಗಾಗ ದಿಢೀರ್ ಭೇಟಿ ನೀಡಿ ಪರಿಶೀಲಿಸುತ್ತಿರಬೇಕು. ಇ-ಖಾತೆ, ಪಹಣಿ ಸೃಜಿಸಬೇಕಾದ ಶಾಲೆಗಳ ಮಾಹಿತಿ ನೀಡಿ, ಬಾಡಿಗೆ ಕಟ್ಟಡದಲ್ಲಿ ನಡೆಸುತ್ತಿರುವ ಅಂಗನವಾಡಿ ಕಟ್ಟಡಗಳು, ವಸತಿ ನಿಲಯಗಳು ವಿವರ, ಎಷ್ಟು ಅಂಗನವಾಡಿಗಳಿಗೆ ನಿವೇಶನ ಅವಶ್ಯಕತೆ ಇದೆ ಎಂಬುದರ ಬಗ್ಗೆ ವರದಿ ನೀಡಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.