ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧ್ಯಕ್ಷ ಕೆಂಪೂಗೌಡ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದ ನಂತರ ರೈತಪರ ವಿಚಾರ ಮತ್ತು ಸಂಘಟನೆ-ಹೋರಾಟ ಕುರಿತು ಚರ್ಚಿಸಿ, ಬಳಿಕ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ಸರ್ಕಾರ ಮತ್ತು ಕಾರ್ಖಾನೆಗಳ ಆಡಳಿತ ಮಂಡಳಿ ವಿರುದ್ಧ ಘೋಷಣೆ, ಹೆದ್ದಾರಿ ತಡೆ ನಡೆಸಿ ಧಿಕ್ಕಾರದ ಘೋಷಣೆ ಕೂಗಿದರು.
ಈ ವೇಳೆ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ, ಜಿಲ್ಲಾಧಿಕಾರಿಗಳು ಕಾರ್ಖಾನೆಗಳ ಆಡಳಿತ ಮಂಡಳಿಯೊಂದಿಗೆ ಸಭೆ ನಡೆಸಿ ರೈತರಿಗೆ ಕೊಡಬೇಕಿರುವ ಕಬ್ಬಿನ ಬಾಕಿ ಹಣ 150 ರು. ತಕ್ಷಣವೇ ನೀಡುವಂತೆ ಹೇಳಿದ್ದರೂ ಇನ್ನೂ ಕೊಡಲಿಲ್ಲ. ಜಿಲ್ಲಾಡಳಿತದ ರೈತವಿರೋಧಿ ನೀತಿ ಮತ್ತು ತಾರತಮ್ಯವನ್ನು ಖಂಡಿಸಿದರು.ಜಿಲ್ಲೆಯ ಪ್ರತಿ ಹಳ್ಳಿಗಳಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದೆ. ಸಾಕುಪ್ರಾಣಿಗಳು ಮತ್ತು ಮನುಷ್ಯರು ಬಲಿಯಾಗಿ ಜೀವಭಯದಿಂದ ಬದುಕುತ್ತಿದ್ದಾರೆ. ಅರಣ್ಯ ಇಲಾಖೆಗೆ ಹೇಳಿದರೆ ನೂರಾರು ಚಿರತೆಗಳಿವೆ ನಾವೇನು ಮಾಡೋಣ ಎಂದು ಬೇಜವಾಬ್ದಾರಿ ಉತ್ತರ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಏ.18ರಂದು ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ರೈತಸಂಘದ ಪದಾಧಿಕಾರಿಗಳು, ಕಾರ್ಯಕರ್ತರು, ಕನ್ನಡಪರ, ದಲಿತ ಸಂಘಟನೆಗಳ ನೆರವಿನೊಂದಿಗೆ ಕಬ್ಬು ಬಾಕಿ ಹಣ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೃಹತ್ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದರು.