ಧಾರವಾಡ:
ಕಡಪಾ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾಕಾರರು ಮೆರವಣಿಗೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಸಂಘದ ಜಿಲ್ಲಾಧ್ಯಕ್ಷೆ ಭುವನಾ ಬಳ್ಳಾರಿ ಮಾತನಾಡಿ,`ಆಶಾ ಕಾರ್ಯಕರ್ತೆಯರು ಹಗಲಿರುಳು ಬಡಜನರಿಗೆ ಆರೋಗ್ಯ ಸೌಲಭ್ಯ ಒದಗಿಸಲು ಶ್ರಮಿಸುತ್ತಿದ್ದಾರೆ. ರಾಜ್ಯದಲ್ಲಿ ಅಂದಾಜು 42,000 ಆಶಾ ಕಾರ್ಯಕರ್ತೆಯರು ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಹಳ್ಳಿ ಮತ್ತು ನಗರದ ಬೇರುಮಟ್ಟದಲ್ಲಿ ಕೆಲಸ ನಿರ್ವಹಿಸಿ ಸಮಗ್ರ ಅಭಿವೃದ್ಧಿಯ ಪಾಲುದಾರರಾಗಿದ್ದಾರೆ ಎಂದರು.ಆಶಾ ಕಾರ್ಯಕರ್ತರಿಗೆ ಎಂಟು ವರ್ಷಗಳಿಂದ ಕೆಲಸಕ್ಕೆ ತಕ್ಕಂತೆ ಪ್ರೋತ್ಸಾಹ ಧನ ಸಿಗದೇ ವಂಚನೆಯಾಗುತ್ತಿದೆ. ಮೊಬೈಲ್ ಮೂಲಕ ಒತ್ತಾಯ ಪೂರ್ವಕವಾಗಿ ಕೆಲಸ ಮಾಡಿಸಿಕೊಳ್ಳುತ್ತಿರುವುದನ್ನು ಕೈಬಿಡಬೇಕು. ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ವೆಚ್ಚಗಳಿಗೆ ಅನುಗುಣವಾಗಿ ಗೌರವಧನ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
ಉಪಾಧ್ಯಕ್ಷೆ ಮಂಜುಳಾ ಗಾಡಗೋಳಿ ಮಾತನಾಡಿ, ಸ್ಮಾರ್ಟ್ ಫೋನ್ ಬಳಕೆಗೆ ಸಂಬಂಧಿಸಿದಂತೆ ಇಲಾಖೆ ಹೊರಡಿಸಿರುವ ಆದೇಶ ಕಾರ್ಯಕರ್ತೆಯರ ಕೆಲಸವನ್ನು ಹೆಚ್ಚು ಮಾಡಿದೆ. ಜಿಪಿಎಸ್ ಫೋಟೊ ಕಿರುಕುಳ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಸಂಘದ ಗೌರವ ಅಧ್ಯಕ್ಷೆ ಗಿರಿಜಾ ಭೂಸನೂರಮಠ, ಜಯಶ್ರೀ ದೇಸಾಯಿ, ಭಾರತಿ ಶೆಟ್ಟರ್, ಶೋಭಾ ಹಿರೇಮಠ, ಸ್ವಪ್ನಾ ಸುಳ್ಳದ, ಸರೋಜಾ ಮಡಿವಾಳರ, ಶೈಲಾ ಮುದುಗಲ್ ಪಾಲ್ಗೊಂಡಿದ್ದರು.