ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳು ಉಡುಪಿ ತಾಲೂಕಿನಲ್ಲಿ ಗಣನೀಯ ಯಶಸ್ವಿಯಾಗಿವೆ. ಗೃಹಲಕ್ಷ್ಮೀ ಯೋಜನೆಯಡಿ ಅಕ್ಟೋಬರ್ವರೆಗೆ 9,66,991 ಫಲಾನುಭವಿಗಳ ಖಾತೆಗೆ 193 ಕೋಟಿ ರು.ಗೂ ಅಧಿಕ ನಗದು ಹಣ ಜಮೆ ಮಾಡಲಾಗಿದೆ ಎಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದರು.ಶುಕ್ರವಾರ ಉಡುಪಿ ತಾಪಂನಲ್ಲಿ ಉಡುಪಿ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲಿಸಿದ ಅವರು, ಗೃಹಲಕ್ಷ್ಮೀ ಯೋಜನೆಯಡಿ ನವೆಂಬರ್ನಿಂದ ಹಣ ಪಾವತಿಗೆ ಬಾಕಿ ಇರುವುದಾಗಿ ತಿಳಿಸಿದರು.ಶಕ್ತಿ ಯೋಜನೆಯಡಿ ಉಡುಪಿ ತಾಲೂಕಿನಲ್ಲಿ ಇದುವರೆಗೆ ಒಟ್ಟು 3,68,13,093 ಬಾರಿ ಮಹಿಳೆಯರು ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದು, ಸರ್ಕಾರದಿಂದ ಕೆಎಸ್ಆರ್ ಟಿಸಿಗೆ 142.2 ಕೋಟಿ ರು.ಗೂ ಹೆಚ್ಚು ಆದಾಯ ಬಂದಿದೆ.
ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆಯಡಿ ಜನವರಿವರೆಗೆ ಶೇ. 94.80ರಷ್ಟು ಪ್ರಗತಿ ಸಾಧಿಸಲಾಗಿದೆ. ಉಡುಪಿ ಜಿಲ್ಲೆಗೆ 250 ಹೆಚ್ಚುವರಿ ಹೊಸ ಪಡಿತರ ಅಂಗಡಿ ತೆರೆಯಲು ಅವಕಾಶ ಕಲ್ಪಿಸಲಾಗಿದ್ದು, ಮಾನವೀಯತೆಯ ಆಧಾರದಲ್ಲಿ ಪ್ರತಿ ಏರಿಯಾದಲ್ಲಿ ಶೇ. 40ರಷ್ಟು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯದವರು ವಾಸವಿದ್ದಲ್ಲಿ ಆ ಸ್ಥಳದಲ್ಲಿ ನ್ಯಾಯಬೆಲೆ ಅಂಗಡಿ ತೆರೆಯಲು ಪ್ರಸ್ತಾವನೆ ಸಲ್ಲಿಸಲು ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ಸಭೆಯಲ್ಲಿ ಉಡುಪಿ ತಾಪಂ ಕಾರ್ಯನಿರ್ವಹಣಾಧಿಕಾರಿ ವಿಜಯಾ, ಸಹಾಯಕ ನಿರ್ದೇಶಕ ಫರ್ಜಾನ ಎಂ., ತಾಲೂಕು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಸದಸ್ಯರುಗಳು, ತಾಲೂಕು ಮಟ್ಟದ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು. 2ನೇ ವಾರದಲ್ಲಿ ಗ್ಯಾರಂಟಿ ಅದಾಲತ್ -ಸಮಾವೇಶ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಫೆಬ್ರವರಿ ಎರಡನೇ ವಾರದಲ್ಲಿ ಉಡುಪಿ ತಾಲೂಕು ವ್ಯಾಪ್ತಿಯ ಗ್ರಾಪಂ ಹಾಗೂ ಉಡುಪಿ ನಗರಸಭೆಯ ವ್ಯಾಪ್ತಿಯ ವಾರ್ಡ್ ಮಟ್ಟದಲ್ಲಿ ಪಂಚ ಗ್ಯಾರಂಟಿ ಅದಾಲತ್ ಹಾಗೂ ಗೃಹಲಕ್ಷ್ಮೀ ಫಲಾನುಭವಿಗಳ ಸಮಾವೇಶವನ್ನು ಆಯೋಜಿಸಲಾಗುತ್ತಿದೆ. ಈ ಕಾರ್ಯಕ್ರಮದ ಯಶಸ್ಸಿಗೆ ಅಧಿಕಾರಿಗಳು, ಗ್ಯಾರಂಟಿ ಯೋಜನೆಯ ಸದಸ್ಯರುಗಳು ಅಗತ್ಯ ಸಹಕಾರ ನೀಡುವಂತೆ ರಮೇಶ್ ಕಾಂಚನ್ ಹೇಳಿದರು.