ಕನ್ನಡಪ್ರಭ ವಾರ್ತೆ ಬಂಟ್ವಾಳ
1923ರಲ್ಲಿ ಉಂಟಾಗಿದ್ದ ನೆರೆಯ ಮಾಹಿತಿ ಭಗವಾನ್ ನಿತ್ಯಾನಂದ ಪುಸ್ತಕ, ಶಿಲಾಕಲ್ಲಿನಲ್ಲಿ ಈಗಲೂ ಲಭ್ಯವಿದ್ದರೆ, 1974ರ ಜುಲೈ 26 ರಂದು ಬಂದ ಮಹಾನೆರೆಯನ್ನು ಕಂಡ ಪ್ರತ್ಯಕ್ಷದರ್ಶಿಗಳು ಸಾಕಷ್ಟು ಮಂದಿ ಸಿಗುತ್ತಾರೆ. ಈಗಿನ ತಲೆಮಾರಿಗೂ ಇದರ ಸ್ಪಷ್ಟ ಅರಿವಿದೆ.
ಐವತ್ತು ವರ್ಷಗಳ ಹಿಂದೆ ನೇತ್ರಾವತಿಯಲ್ಲಿ 8 ರಿಂದ 8.5 ಮೀಟರ್ ನೀರು ತುಂಬಿ ಹರಿಯಿತೆಂದರೆ ಬಂಟ್ವಾಳ ಪೇಟೆಯನ್ನು ನೀರು ಆವರಿಸಿತೆಂದೇ ಹಿರಿಯರ ಲೆಕ್ಕಾಚಾರ. ಆದರೆ ಈಗ 9 ಮೀ.ನಲ್ಲಿ ನೀರು ತುಂಬಿ ಹರಿದರೂ ಬಂಟ್ವಾಳ ಪೇಟೆಗೆ ನೀರು ನುಗ್ಗಲು ಆರಂಭವಾಗಿ, ಬಂಟ್ವಾಳದ ಸುತ್ತಮುತ್ತಲಿನ ತಗ್ಗುಪ್ರದೇಶಗಳನ್ನು ಮಾತ್ರವೇ ನೀರು ಆವರಿಸುತ್ತದೆ.ಇದೇ ಜು.19ರಂದು ಅಪಾಯದ ಮಟ್ಟವನ್ನು ದಾಟಿ ನೀರು ಹರಿಯಿತಾದರೂ ಬಂಟ್ವಾಳ ಪೇಟೆಗೆ ನೀರು ನುಗ್ಗಲಿಲ್ಲ. ಯಾಕೆಂದರೆ ನೇತ್ರಾವತಿಯಲ್ಲಿ ನಡೆಯುವ ಮರಳುಗಾರಿಕೆಯಿಂದಾಗಿ ನದಿ. ಆಳ, ಅಗಲವಾಗಿರುವುದರಿಂದ ನೀರು ತುಂಬಿ ಹರಿಯಲು ಘಟ್ಟಪ್ರದೇಶದಿಂದ ಸಾಕಷ್ಟು ನೀರುಹರಿದು ಬರಬೇಕಾಗುತ್ತದೆ. ದ್ವೀಪವಾಗಿದ್ದ ಬಂಟ್ವಾಳ: 1974ರಲ್ಲಿ ಬಂದಿದ್ದ ನೆರೆಯ ಪ್ರಮಾಣಕ್ಕೆ ಬಂಟ್ವಾಳವೆಂಬ ಪುಟ್ಟ ಊರು ಮುಳುಗಡೆಯಾಗಿ ದ್ವೀಪವಾಗಿ ಗೋಚರಿಸಿತ್ತು. ಪೇಟೆಯಲ್ಲಿದ್ದ ಅಂಗಡಿ, ಮನೆಗಳು, ಜಾನುವಾರು, ಕೃಷಿ ಎಲ್ಲವೂ ನೀರಿನಲ್ಲಿ ಕೊಚ್ಚಿ ಹೋಗಿತ್ತು. ಪರಿಣಾಮ ಬಂಟ್ವಾಳದ ಜನತೆ ದಿಕ್ಕು ಕಾಣದೆ ಕಂಗಾಲಾಗಿದ್ದರು.
ಸುರಕ್ಷಿತ ಸ್ಥಳಕ್ಕೆ ತೆರಳಲು ಪರ್ಯಾಯ ವ್ಯವಸ್ಥೆ ಇಲ್ಲದೆ ಸಂತ್ರಸ್ತರೆಲ್ಲರು ಹಳೆ ಪ್ರವಾಸಿಮಂದಿರದ ಕಾಳಜಿ ಕೇಂದ್ರವನ್ನೇ ಆಶ್ರಯಿಸಬೇಕಾಯಿತು. ಅಲ್ಲಿಗೂ ನೀರು ನುಗ್ಗುವ ಅಪಾಯ ಉಂಟಾಗಿತ್ತಾದರೂ ಕೊನೆಗಳಿಗೆಯಲ್ಲಿ ನೀರು ಇಳಿಮುಖವಾಗಿತ್ತು. ಇನ್ನೊಂದೆಡೆ ವಿದ್ಯುತ್ ಇಲ್ಲದೆ ಕತ್ತಲು ಆವರಿಸಿತ್ತು.
2024 ಜು.26 ಕ್ಕೆ 1974 ರ ನೆರೆಗೆ ಪೂರ್ತಿ ಐವತ್ತು ವರ್ಷ ತುಂಬುತ್ತದೆ. ಈ ವರ್ಷ ಆ ದಿನಾಂಕಕ್ಕೆ ವಾರದ ಮೊದಲೇ ನರೆಯ ಭೀತಿ ಸೃಷ್ಟಿಯಾಗಿದೆ. 1974ರಲ್ಲಿ ಬಂದ ನೆರೆಯ ಪ್ರಮಾಣದಲ್ಲಿ ನೀರು ಜು.19ರಂದು ಬಾರದಿದ್ದರೂ, ಅಂದಿನ ನೆನಪು ಮರುಕಳಿಸಿದೆ.